ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಶೇ.25ರಷ್ಟು ಹುದ್ದೆಗಳ ಭರ್ತಿ, ಆಧುನೀಕರಣ ಸೇರಿದಂತೆ ನ್ಯಾಯಾಲಯ ನೀಡಿರುವ ಎಲ್ಲ ಆದೇಶಗಳನ್ನು ಕಾಲಮಿತಿಯಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದು ಅಡ್ವೊಕೇಟ್ ಜನರಲ್ ಎಂ.ಆರ್.ನಾಯಕ್ ಹೈಕೋರ್ಟ್ಗೆ ಭರವಸೆ ನೀಡಿದರು.
ಪೊಲೀಸ್ ಇಲಾಖೆ ಸುಧಾರಣೆ ಕುರಿತಂತೆ ವಿಚಾರಣೆ ನಡೆಸುತ್ತಿರುವ ನ್ಯಾ.ಎ.ಎನ್.ವೇಣುಗೋಪಾಲಗೌಡ ನೇತೃತ್ವದ ನ್ಯಾಯಪೀಠದ ಮುಂದೆ ಶುಕ್ರವಾರ ಎ.ಜಿ.''ಪೊಲೀಸ್ ಪಡೆಯ ಆಧುನೀಕರಣ, ಸಿಬ್ಬಂದಿ ನೇಮಕ ಸೇರಿದಂತೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಅದಕ್ಕೆ ಸಂಬಂಧಿಸಿದಂತೆ ವಿವರವಾದ ಯೋಜನೆ ರೂಪಿಸಿ ಸರಕಾರದ ಮುಂದಿಟ್ಟು ಅನುಮೋದನೆ ಪಡೆಯಲಾಗುವುದು,''ಎಂದರು.
''ವೃಂದ ಮತ್ತು ನೇಮಕ ನಿಯಮಗಳಿಗೆ ತಿದ್ದುಪಡಿ ತರುವ ವಿಷಯ ಮುಂದಿನ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಪೊಲೀಸ್ ಇಲಾಖೆಯಲ್ಲಿ ಸಮಗ್ರ ಸುಧಾರಣೆಗಳನ್ನು ತರಲು ಕ್ರಮ ಕೈಗೊಳ್ಳಲಾಗುವುದು,''ಎಂದು ಅವರು ಹೇಳಿದರು.
ಆ ಹಿನ್ನೆಲೆಯಲ್ಲಿ ಪೀಠ ವಿಚಾರಣೆಯನ್ನು ಆಗಸ್ಟ್ಗೆ ಮುಂದೂಡಿ, ಅಷ್ಟರಲ್ಲಿ ಸುಧಾರಣೆ ನಿಟ್ಟಿನಲ್ಲಿ ಕೈಗೊಂಡಿರುವ ವರದಿ ಸಲ್ಲಿಸಿ ಎಂದು ಸೂಚನೆ ನೀಡಿತು.