ಬೆಂಗಳೂರು: ಕಳಸಾ ಬಂಡೂರಿ ನಾಲಾ ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ಫೆ.27 ರಂದು ರಾಜ್ಯ ಬಂದ್ ನಡೆಯಲಿದೆ ಎಂದು ಕನ್ನಡ ಚಳವಳಿ ಪಕ್ಷದ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ''ಉತ್ತರ ಕರ್ನಾಟಕ ಜನರಿಗೆ ಮಹದಾಯಿ ನದಿಯಿಂದ ಕುಡಿಯಲು ನೀರೊದಗಿಸಬೇಕು ಎಂದು ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ ಒತ್ತಾಯಿಸಿ ಬೆಳಗ್ಗೆ 6 ಗಂಟೆಯಿಂದ ಸಂಜೆ 6ರವರೆಗೆ ಬಂದ್ ಮಾಡಲಾಗುವುದು. ಈ ಹಿಂದೆ ಫೆ.18 ರಂದು ಬಂದ್ ಮಾಡಲು ತೀರ್ಮಾನಿಸಲಾಗಿತ್ತು. ಆದರೆ ಇದೇ ಸಮಯದಲ್ಲಿ ಬೆಂಗಳೂರಿನಲ್ಲಿ ಏರ್ ಶೋ ನಡೆಯಲಿದ್ದು, ಇದಕ್ಕೆ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಬಂದ್ ಮುಂದೂಡಲಾಗಿದೆ. ರಾಜ್ಯದ 2,500 ಸಂಘಟನೆಗಳು ಬಂದ್ಗೆ ಬೆಂಬಲ ವ್ಯಕ್ತಪಡಿಸಿವೆ'' ಎಂದರು.
''ಕೇಂದ್ರ ಸರಕಾರ ರಾಜ್ಯದ ವಿಚಾರದಲ್ಲಿ ತಾರತಮ್ಯ ಮಾಡುತ್ತಿದೆ. ಮಹದಾಯಿ ವಿಚಾರದಲ್ಲಿ ಕೇಂದ್ರ ಸರಕಾರವೇ ತೀರ್ಮಾನ ಕೈಗೊಂಡು ಸಮಸ್ಯೆ ಬಗೆಹರಿಸಬಹುದಿತ್ತು. ಆದರೆ ಪ್ರಧಾನಿ ಮೋದಿ ಇದಕ್ಕೆ ಮನಸ್ಸು ಮಾಡುತ್ತಿಲ್ಲ. ಇದಕ್ಕೆ ತಕ್ಕಂತೆ ರಾಜ್ಯದಿಂದ ಆಯ್ಕೆಯಾದ ಸಂಸದರು ಮೌನ ವಹಿಸಿದ್ದಾರೆ. ಅವರುಗಳು ಸಂಸತ್ತಿನಲ್ಲಿ ಒಂದು ದಿನವೂ ಮಹದಾಯಿ ವಿಚಾರ ಕುರಿತು ಗಂಭೀರವಾಗಿ ಮಾತನಾಡಿಲ್ಲ. ಒಬ್ಬ ಸಂಸದನೂ ಸಭಾತ್ಯಾಗ ಮಾಡಿಲ್ಲ.'' ಎಂದರು.