Mysuru Dasara: ದಸರಾ ಜಂಬೂಸವಾರಿಗೆ ಮೈಸೂರು ಸಿದ್ಧ! ಅರಮನೆ ನಗರಿಯಲ್ಲಿ ಖಾಕಿ ಸರ್ಪಗಾವಲು

ಮೈಸೂರು: ನಾಡಹಬ್ಬ ದಸರಾದ ಪ್ರಮುಖ ಆಕರ್ಷಣೆ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಶುರುವಾಗಿದೆ. ಸಾಂಸ್ಕೃತಿಕ ನಗರಿ ಮೈಸೂರಲ್ಲಿ ಸಂಭ್ರಮ ಮೇಳೈಸಿದ್ದು, ವಿಜಯದಶಮಿ ಮೆರವಣಿಗೆ ಕಣ್ತುಂಬಿಕೊಳ್ಳಲು ಜನರು ಕಾತುರದಿಂದ ಕಾಯುತ್ತಿದ್ದಾರೆ. ಅಂತಿಮ ಹಂತದ ಸಿದ್ಧತೆಗಳು ಭರದಿಂದ ಸಾಗಿದ್ದು, ಎಲ್ಲೆಡೆ ಪೊಲೀಸ್‌ ಬಿಗಿ ಭದ್ರತೆ ಮಾಡಲಾಗಿದೆ.

ಅರಮನೆ ಆವರಣದಿಂದ ಬನ್ನಿಮಂಟಪದವರೆಗೆ ದಸರಾ ಮೆರವಣಿಗೆ ಸಾಗಲಿದ್ದು, ಜಂಬೂಸವಾರಿ ಭದ್ರತೆಗಾಗಿ ಸಾವಿರಾರು ಪೊಲೀಸರ ನಿಯೋಜನೆ ಮಾಡಲಾಗಿದೆ. ಮೈಸೂರಿಗೆ ಆಗಮಿಸಿರುವ ರಾಜ್ಯದ ವಿವಿಧ ಜಿಲ್ಲೆಗಳ ಪೊಲೀಸರು ಎಲ್ಲೆಡೆ ಹದ್ದಿನ ಕಣ್ಣು ಇಟ್ಟಿದ್ದು, 5000ಕ್ಕೂ ಹೆಚ್ಚು ಪೊಲೀಸರು ನಗರದಲ್ಲಿ ಬೀಡು ಬಿಟ್ಟಿದ್ದಾರೆ. ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತರಿಂದ ಸಿಬ್ಬಂದಿಗೆ ಸಲಹೆ, ಸೂಚನೆ ನೀಡಿದ್ದಾರೆ.

ವಿಜಯದಶಮಿ ಮೆರವಣಿಗೆಗೆ ಮೈಸೂರು ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸಿದೆ. ಬುಧವಾರ ಮಧ್ಯಾಹ್ನ 2.36ರಿಂದ 2.50ರೊಳಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ನಂದಿಧ್ವಜ ಪೂಜೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ನೆರವೇರಿಸಲಿದ್ದು, ಬಳಿಕ ಸಂಜೆ 5.07 ರಿಂದ 5.18ರೊಳಗೆ ಅಂಬಾರಿಯಲ್ಲಿನ ಚಾಮುಂಡೇಶ್ವರಿಗೆ ಸಿಎಂ ಪುಷ್ಪಾರ್ಚನೆ ಸಲ್ಲಿಸಲಿದ್ದಾರೆ.

ಜಂಬೂಸವಾರಿ ಮೆರವಣಿಗೆಗೆ ಅಂತಿಮ ಹಂತದ ಸಿದ್ಧತೆ ನಡೆಯುತ್ತಿದೆ. 22 ಸಾವಿರ ಜನರಿಗೆ ಜಂಬೂಸವಾರಿ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗುತ್ತಿದೆ. ಮೆರವಣಿಗೆಯಲ್ಲಿ ಹಲವು ಸ್ತಬ್ಧಚಿತ್ರಗಳು ಭಾಗವಹಿಸಲಿದ್ದು, ಸ್ತಬ್ಧಚಿತ್ರಗಳನ್ನು ಮೆರವಣಿಗೆಗೆ ಅಣಿಗೊಳಿಸುವ ಕಾರ್ಯ ಭರದಿಂದ ಸಾಗಿದೆ. ಈ ಬಾರಿ 15 ಲಕ್ಷ ಜನರು ಮೈಸೂರು ದಸರಾ ವೀಕ್ಷಿಸುವ ಸಾಧ್ಯತೆ ಇದೆ.

Vijaya Karnataka Web 4 Oct 2022, 9:24 pm
Loading ...