ಆ್ಯಪ್ನಗರ

SPB Died: ಎಸ್‌ಪಿ ಬಾಲಸುಬ್ರಹ್ಮಣ್ಯಂ ನಿಧನ! ಶಾಶ್ವತವಾಗಿ ಹಾಡು ನಿಲ್ಲಿಸಿದ ಲೆಜೆಂಡರಿ ಗಾಯಕ!

ಭಾರತೀಯ ಸಿನಿಮಾ ಸಂಗೀತ ಲೋಕದ ಮೇರು ಪ್ರತಿಭೆ ಎಸ್‌ಪಿ ಬಾಲಸುಬ್ರಹ್ಮಣ್ಯಂ ಅವರು ಶುಕ್ರವಾರ (ಸೆ.25) ನಿಧನರಾದರು. ಶ್ವಾಸಕೋಶ ಸಂಬಂಧಿ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿ ಆಗದೆ ಕೊನೆಯುಸಿರೆಳೆದರು.

Vijaya Karnataka Web 25 Sep 2020, 1:53 pm
ಅಸಂಖ್ಯ ಹಾಡುಗಳ ಮೂಲಕ ಕೋಟ್ಯಂತರ ಜನರನ್ನು ರಂಜಿಸಿದ ಮಹಾನ್‌ ಗಾಯಕ ಶ್ರೀಪತಿ ಪಂಡಿತಾರಾಧ್ಯುಲ ಬಾಲಸುಬ್ರಹ್ಮಣ್ಯಂ (ಎಸ್‌ಪಿ ಬಾಲಸುಬ್ರಹ್ಮಣ್ಯಂ) ಶಾಶ್ವತವಾಗಿ ಹಾಡು ನಿಲ್ಲಿಸಿದ್ದಾರೆ. ಕೊರೊನಾ ವೈರಸ್‌ ಸೋಂಕು ತಗುಲಿದ ಬಳಿಕ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಂತರ ಕೆಲವು ದಿನಗಳ ಬಳಿಕ ಅವರ ಕೊರೊನಾ ವರದಿ ನೆಗೆಟಿವ್ ಆಗಿತ್ತು. ಆದರೆ, ಇತರೆ ಅನಾರೋಗ್ಯದ ಕಾರಣಕ್ಕಾಗಿ ಚಿಕಿತ್ಸೆ ಮುಂದುವರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಶುಕ್ರವಾರ (ಸೆ.25) ಇಹಲೋಕ ತ್ಯಜಿಸಿದರು.
Vijaya Karnataka Web ಎಸ್‌ಪಿ ಬಾಲಸುಬ್ರಹ್ಮಣ್ಯಂ


ಈ ಸುದ್ದಿ ಅವರ ಕೋಟ್ಯಂತರ ಅಭಿಮಾನಿಗಳಿಗೆ ಸಿಡಿಲಿನಂತೆ ಬಂದೆರಗಿದೆ. ಎಸ್‌ಪಿ ಬಾಲಸುಬ್ರಹ್ಮಣ್ಯಂ ಅವರಿಗೆ 74 ವರ್ಷ ವಯಸ್ಸಾಗಿತ್ತು. ಈ ವಯಸ್ಸಿನಲ್ಲೂ ಅವರು ಹಾಡುವುದನ್ನು ನಿಲ್ಲಿಸಿರಲಿಲ್ಲ. ಪತ್ನಿ ಸಾವಿತ್ರಿ, ಪುತ್ರ ಎಸ್‌.ಪಿ. ಚರಣ್‌, ಪುತ್ರಿ ಪಲ್ಲವಿ ಮತ್ತು ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಎಸ್‌ಪಿಬಿ ಅಗಲಿದ್ದಾರೆ. ಅವರ ನಿಧನಕ್ಕೆ ಸ್ನೇಹಿತರು, ಸಿನಿಮಾ ಕ್ಷೇತ್ರದ ಗಣ್ಯರು, ರಾಜಕೀಯ ನಾಯಕರು, ಸಂಗೀತಪ್ರಿಯರು ದೇಶಾದ್ಯಂತ ಕಂಬನಿ ಮಿಡಿಯುತ್ತಿದ್ದಾರೆ.

ಎಸ್‌ಪಿಬಿ ಅವರು ಆ.5ರಂದು ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಕೆಲವೇ ದಿನಗಳಲ್ಲಿ ಅವರ ಆರೋಗ್ಯ ಸ್ಥಿತಿ ಇನ್ನಷ್ಟು ಗಂಭೀರವಾಯಿತು. ಅವರು ಬೇಗ ಗುಣಮುಖರಾಗಿ ಬರಲಿ ಎಂದು ಅನೇಕರು ಪ್ರಾರ್ಥಿಸುತ್ತಿದ್ದರು. ಇಳೆಯರಾಜ, ಎ.ಆರ್‌. ರೆಹಮಾನ್‌, ರಜನಿಕಾಂತ್‌, ಕಮಲ್‌ ಹಾಸನ್‌, ಶಿವರಾಜ್‌ಕುಮಾರ್‌ ಜೊತೆಗೆ ಕೋಟ್ಯಂತರ ಅಭಿಮಾನಿಗಳು ತಮ್ಮ ನೆಚ್ಚಿನ ಗಾಯಕ ಬೇಗ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತಿದ್ದರು. ಆದರೆ ಕೊನೆಗೆ ಯಾರ ಪ್ರಾರ್ಥನೆಯೂ ಫಲಿಸಲಿಲ್ಲ.

ಐದು ದಶಕಗಳ ಕಾಲ ಸಿನಿಮಾ ಸಂಗೀತ ಲೋಕದಲ್ಲಿ ಎಸ್‌ಪಿಬಿ ಸಕ್ರಿಯರಾಗಿದ್ದರು. 40 ಸಾವಿರಕ್ಕೂ ಹೆಚ್ಚು ಹಾಡುಗಳಿಗೆ ಧ್ವನಿಯಾದ ಕೀರ್ತಿ ಅವರಿಗೆ ಸಲ್ಲುತ್ತದೆ. ಕನ್ನಡ, ತಮಿಳು, ತೆಲುಗು, ಮಲಯಾಳಂ, ಹಿಂದಿ ಸೇರಿದಂತೆ 15ಕ್ಕೂ ಹೆಚ್ಚು ಭಾಷೆಗಳಲ್ಲಿ ಅವರು ಗಾನ ಸುಧೆ ಹರಿಸುವ ಮೂಲಕ ಕೇಳುಗರ ಮನದಲ್ಲಿ ಶಾಶ್ವತ ಸ್ಥಾನ ಪಡೆದಿದ್ದಾರೆ. ಇಂದು ಇಹಲೋಕ ತ್ಯಜಿಸಿರುವ ಅವರಿಗೆ ವಿಶ್ವದೆಲ್ಲೆಡೆಯಿಂದ ಅಭಿಮಾನಿಗಳು ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌