ಆ್ಯಪ್ನಗರ

ಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಬೆಳಗಾವಿ : ರಾಜ್ಯದ ಮೈತ್ರಿ ಸರಕಾರ ಬಹುಮತ ಕಳೆದುಕೊಂಡಿದ್ದು, ಮುಖ್ಯಮಂತ್ರಿ ...

Vijaya Karnataka 10 Jul 2019, 5:00 am
ಬೆಳಗಾವಿ : ರಾಜ್ಯದ ಮೈತ್ರಿ ಸರಕಾರ ಬಹುಮತ ಕಳೆದುಕೊಂಡಿದ್ದು, ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರಿಂದ ರಾಜೀನಾಮೆ ಪಡೆದುಕೊಳ್ಳಬೇಕು ಎಂದು ಒತ್ತಾಯಿಸಿ ಮಂಗಳವಾರ ಮಹಾನಗರ ಮತ್ತು ಗ್ರಾಮೀಣ ಘಟಕದ ಬಿಜೆಪಿ ಕಾರ್ಯಕರ್ತರು ನಗರದ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ರವಾನಿಸಿದರು.
Vijaya Karnataka Web BEL-9 LBS 1


ಮೈತ್ರಿ ಸರಕಾರದ 12 ಶಾಸಕರು ರಾಜೀನಾಮೆ ಸಲ್ಲಿಸಿದ್ದು, ಸರಕಾರ ಬಹುಮತ ಕಳೆದುಕೊಂಡಿದೆ. ಆದರೆ, ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ರಾಜೀನಾಮೆ ನೀಡುತ್ತಿಲ್ಲ. ರಾಜ್ಯಪಾಲರು ಕೂಡಲೇ ಸಿಎಂ ರಾಜೀನಾಮೆ ಪಡೆದುಕೊಳ್ಳಬೇಕು ಎಂದು ಮನವಿ ಮೂಲಕ ಆಗ್ರಹಿಸಿದರು.

ಬಿಜೆಪಿ ಮುಖಂಡ ಎಂ.ಬಿ. ಝಿರಲಿ ಮಾತನಾಡಿ, ಮೈತ್ರಿ ಸರಕಾರದ ಶಾಸಕರು ರಾಜೀನಾಮೆ ಸಲ್ಲಿಸಿದ್ದು, ಸ್ಪೀಕರ್‌ ತಕ್ಷಣ ರಾಜೀನಾಮೆ ಅಂಗೀಕರಿಸಬೇಕು. ಸರಕಾರ ಬಹುಮತ ಕಳೆದುಕೊಂಡಾಗ ಸಿಎಂ ರಾಜೀನಾಮೆ ನೀಡಬೇಕಾಗಿತ್ತು. ಆದರೆ, ಕುಮಾರಸ್ವಾಮಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ. ರಾಜೀನಾಮೆ ನೀಡದಿದ್ದರೆ ರಾಜ್ಯಾದ್ಯಂತ ಬಿಜೆಪಿ ವತಿಯಿಂದ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಮಾಜಿ ಶಾಸಕ ಡಾ. ವಿ.ಐ. ಪಾಟೀಲ, ಬಿಜೆಪಿ ಮುಖಂಡರಾದ ರಾಜೇಂದ್ರ ಹರಕುಣಿ, ರಾಜು ಚಿಕ್ಕನಗೌಡರ, ಶ್ರೀನಿವಾಸ ಬಿಸನಕೊಪ್ಪ, ಧನಂಜಯ ಜಾಧವ, ಶ್ರೀನಿವಾಸ ಪಾಟೀಲ, ಲೀನಾ ಟೋಪಣ್ಣವರ ಮತ್ತಿತರರು ಉಪಸ್ಥಿತರಿದ್ದರು.

ರಸ್ತೆ ಬಂದ್‌ ಮಾಡಿ ಆಕ್ರೋಶ :
ಚಿಕ್ಕೋಡಿ: ಮೈತ್ರಿ ಸರಕಾರ ಅತಂತ್ರ ಸ್ಥಿತಿಗೆ ತಲುಪಿದ್ದು, ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.

ವಿಧಾನ ಪರಿಷತ್‌ ಪ್ರತಿಪಕ್ಷ ದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ನೇತೃತ್ವದಲ್ಲಿ ಪ್ರತಿಭಟನಾ ಮೆರವಣೆಗೆ ನಡೆಸಿದ ಕಾರ್ಯಕರ್ತರು, ಬಸವ ಸರ್ಕಲ್‌ನಲ್ಲಿ ಮಾನವ ಸರಪಳಿ ರಚಿಸಿ ರಸ್ತೆ ಬಂದ್‌ ಮಾಡಿ ರಾಜ್ಯ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಹಾಂತೇಶ ಕವಟಗಿಮಠ ಮಾತನಾಡಿ, ರಾಜ್ಯದಲ್ಲಿ ಮೈತ್ರಿ ಸರಕಾರ ಇದ್ದೂ ಇಲ್ಲದಂತಿದೆ. ಸಮ್ಮಿಶ್ರ ಸರಕಾರದಲ್ಲಿನ ಉಸಿರು ಗಟ್ಟುವಂತಹ ವಾತಾವರಣದಿಂದ ಬೇಸತ್ತು ಕಾಂಗ್ರೆಸ್‌ ಮತ್ತು ಜೆಡಿಎಸ್‌ ಶಾಸಕರು ತಾವಾಗಿಯೇ ರಾಜೀನಾಮೆ ನೀಡಿದ್ದಾರೆ. ಇದರಲ್ಲಿ ಬಿಜೆಪಿ ಪಾತ್ರವಿಲ್ಲ. ರಾಜ್ಯದಲ್ಲಿ ಮೈತ್ರಿ ಸರಕಾರದಿಂದ ಯಾವುದೇ ಅಭಿವೃದ್ಧಿ ಕಾರ್ಯವಾಗಿಲ್ಲ ಎಂದು ದೂರಿದರು.

ಪಕ್ಷ ದ ತಾಲೂಕು ಅಧ್ಯಕ್ಷ ಅಪ್ಪಾಸಾಬ ಚೌಗಲಾ, ದುಂಡಪ್ಪ ಬೆಂಡವಾಡೆ, ಸಂಜಯ ಕವಟಗಿಮಠ, ಸತೀಶ ಅಪ್ಪಾಜಿಗೋಳ, ಎಂ.ಎ. ಪಾಟೀಲ, ಮುರುಗೆಪ್ಪ ಅಡಿಸೇರಿ, ಸಂಜೀವ ಬಸ್ತವಾಡೆ, ರಾಯಗೌಡ ಕೆಳಗಿನಮನಿ, ಬಾಳಗೌಡ ರೇಂದಾಳೆ, ಚೇತನ ಪಾಟೀಲ, ದಾನಪ್ಪ ಕೊಟಬಾಗಿ, ವಿಕ್ರಮ ಬನಗೆ, ಅಕ್ರಂ ಅರ್ಕಾಟೆ, ಮಹಾವೀರ ಬಾಗಿ, ಅಣ್ಣಾಸಾಬ ಮಗದುಮ್ಮ, ವಿರೂಪಾಕ್ಷಿ ಸಂಕಾಜೆ, ರಾಮಗೌಡ ಪಾಟೀಲ ಮುಂತಾದವರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ