ಆ್ಯಪ್ನಗರ

ಸಿಇಟಿ: ಲೋಪ ರಹಿತ ಕಾರ್ಯನಿರ್ವಹಣೆಗೆ ಸೂಚನೆ

ಬೆಳಗಾವಿ : ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ವೃತ್ತಿಪರ ಕೋರ್ಸುಗಳ ಸಾಮಾನ್ಯ ಪ್ರವೇಶ ಪರೀಕ್ಷೆ ...

Vijaya Karnataka 27 Apr 2019, 5:00 am
ಬೆಳಗಾವಿ : ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ವೃತ್ತಿಪರ ಕೋರ್ಸುಗಳ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಏ.29 ಹಾಗೂ 30 ರಂದು ನಡೆಯಲಿದ್ದು, ಯಾವುದೇ ರೀತಿಯ ಲೋಪ ಆಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ಎಚ್‌.ಬಿ.ಬೂದೆಪ್ಪ ಸೂಚಿಸಿದರು.
Vijaya Karnataka Web BEL-27 LBS 4


ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

''ಅಭ್ಯರ್ಥಿಗಳು ಕ್ಯಾಲ್ಕ್ಯುಲೇಟರ್‌, ಕೈಗಡಿಯಾರ, ಮೊಬೈಲನ್ನು ಪರೀಕ್ಷಾ ಕೇಂದ್ರದ ಒಳಗೊಯ್ಯದಂತೆ ತಡೆಯಬೇಕು. ಪ್ರತಿ ಪರೀಕ್ಷಾ ಕೊಠಡಿಗಳಲ್ಲಿ ಕಡ್ಡಾಯವಾಗಿ ಗೋಡೆ ಗಡಿಯಾರ ಅಳವಡಿಸಬೇಕು. ವಿದ್ಯಾರ್ಥಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಸೂಕ್ತ ಗಾಳಿ ಮತ್ತು ಬೆಳಕಿನ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು'', ಎಂದು ತಿಳಿಸಿದರು.

ಜಿಲ್ಲೆಯ ಬೆಳಗಾವಿ, ಚಿಕ್ಕೋಡಿ, ಗೋಕಾಕ, ಅಥಣಿಯ 22 ಕೇಂದ್ರಗಳಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದ್ದು, ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಒಬ್ಬರಂತೆ ಒಟ್ಟು 22 ಹಿರಿಯ ಪ್ರಾಚಾರ್ಯರನ್ನು ಪ್ರಶ್ನೆಪತ್ರಿಕಾ ಪಾಲಕ (ಕಸ್ಟಡಿಯನ್‌) ಆಗಿ ನೇಮಿಸಲಾಗುವುದು. ಪ್ರತಿ ಕೇಂದ್ರಕ್ಕೆ ಇಬ್ಬರಂತೆ ಒಟ್ಟು 44 ಉಪನ್ಯಾಸಕರನ್ನು ವಿಶೇಷ ಜಾಗೃತಾ ದಳದ ಅಧಿಕಾರಿಗಳನ್ನಾಗಿ ಈಗಾಗಲೇ ನಿಯೋಜಿಸಲಾಗಿದ್ದು, ಅವರು ಪರೀಕ್ಷೆಯ ದಿನ ಕಡ್ಡಾಯವಾಗಿ ಆಯಾ ಕೇಂದ್ರಗಳಲ್ಲಿ ಉಪಸ್ಥಿತರಿದ್ದು, ಯಾವುದೇ ರೀತಿಯ ಅಹಿತಕರ ಘಟನೆ ಜರುಗದಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಪದವಿ ಪೂರ್ವ ಶಿಕ್ಷ ಣ ಇಲಾಖೆಯ ಚಿಕ್ಕೋಡಿ ಉಪನಿರ್ದೇಶಕ ಕೆ.ಎನ್‌. ಸಂಗಮ ಮಾತನಾಡಿ, ಜಿಲ್ಲೆಯ ನಾಲ್ಕು ತಾಲೂಕು ಕೇಂದ್ರಗಳ 22 ಪರೀಕ್ಷಾ ಕೇಂದ್ರಗಳಲ್ಲಿ 9,782 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದರು. ಜಿಪಂ ಮುಖ್ಯ ಲೆಕ್ಕಾಧಿಕಾರಿ ಪರಶುರಾಮ ದುಡಗುಂಟಿ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಪರೀಕ್ಷಾ ವೇಳಾಪಟ್ಟಿ :
ಏ.29ರಂದು ಬೆಳಗ್ಗೆ 10.30 ರಿಂದ 11.50 ರವರೆಗೆ ಜೀವಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50 ರವರೆಗೆ ಗಣಿತ, ಏ.30 ರಂದು ಬೆಳಗ್ಗೆ 10.30 ರಿಂದ 11.50 ರವರೆಗೆ ಭೌತಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50 ರವರೆಗೆ ರಸಾಯನಶಾಸ್ತ್ರ ವಿಷಯಗಳ ಪರೀಕ್ಷೆ ನಡೆಯಲಿವೆ.

144 ಸೆಕ್ಷನ್‌ ಜಾರಿ :
ಪರೀಕ್ಷಾ ದಿನಗಳಂದು ಪರೀಕ್ಷೆ ಅವಧಿಯಲ್ಲಿ ಕೇಂದ್ರಗಳ 200 ಮೀಟರ್‌ ಸುತ್ತಳತೆಯಲ್ಲಿ 144ನೇ ಕಲಂ ಅಡಿ ನಿಷೇಧಾಜ್ಞೆ ಜಾರಿ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ತಿಳಿಸಿದರು. ಪ್ರಶ್ನೆಪತ್ರಿಕೆ ಮತ್ತು ಒಎಂಆರ್‌ಗಳನ್ನು ಸೂಕ್ತ ಭದ್ರತೆಯೊಂದಿಗೆ ನಿಗದಿತ ಸಮಯಕ್ಕೆ ಪರೀಕ್ಷಾ ಕೇಂದ್ರಗಳಿಗೆ ತಲುಪಿಸಿ, ವಿತರಿಸಲು ಪ್ರಶ್ನೆಪತ್ರಿಕಾ ಪಾಲಕರು, ಪ್ರಾಚಾರ್ಯರು, ಕ್ಷೇತ್ರ ಶಿಕ್ಷ ಣಾಧಿಕಾರಿ ಮತ್ತು ತಹಸೀಲ್ದಾರರು ಎಚ್ಚರಿಕೆಯಿಂದ ಕ್ರಮ ವಹಿಸಬೇಕು ಎಂದು ಅವರು ಸೂಚಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ