ಆ್ಯಪ್ನಗರ

ಶಿಷ್ಟಾಚಾರಕ್ಕೆ ಧಕ್ಕೆಯಾಗದಂತೆ ಕ್ರಮಕ್ಕೆ ಸೂಚನೆ

ಬೆಳಗಾವಿ: ಕರ್ನಾಟಕ ಲಾ ...

Vijaya Karnataka 5 Sep 2018, 5:00 am
ಬೆಳಗಾವಿ: ಕರ್ನಾಟಕ ಲಾ ಸೊಸೈಟಿಯ ಅಮೃತ ಮಹೋತ್ಸವದಲ್ಲಿ ಭಾಗವಹಿಸಲು ರಾಷ್ಟ್ರಪತಿ ರಾಮನಾಥ ಕೋವಿಂದ ಅವರು ಸೆ.15ರಂದು ನಗರಕ್ಕೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಯಾವುದೇ ರೀತಿಯ ಅನಾನುಕೂಲ ಉಂಟಾಗದಂತೆ ಶಿಷ್ಟಾಚಾರ ಪ್ರಕಾರ ಎಲ್ಲ ರೀತಿಯ ಕ್ರಮ ಕೈಗೊಳ್ಳಬೇಕು ಎಂದು ಪ್ರಾದೇಶಿಕ ಆಯುಕ್ತ ಪಿ.ಎ.ಮೇಘಣ್ಣವರ ಸೂಚಿಸಿದರು.
Vijaya Karnataka Web BEL-4 LBS 2


ನಗರದ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ರಾಷ್ಟ್ರಪತಿ, ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳು, ರಾಜ್ಯಪಾಲರು, ಅಟಾರ್ನಿ ಜನರಲ್‌ ಮತ್ತು ಮುಖ್ಯಮಂತ್ರಿಗಳು ಸೇರಿದಂತೆ ಹನ್ನೆರಡಕ್ಕೂ ಅಧಿಕ ಗಣ್ಯರು ಆಗಮಿಸಲಿದ್ದು, ಯಾವುದೇ ರೀತಿಯ ಗೊಂದಲಕ್ಕೆ ಆಸ್ಪದ ನೀಡದಂತೆ ಜಿಲ್ಲಾಡಳಿತ, ಪೊಲೀಸ್‌ ಇಲಾಖೆ ಹಾಗೂ ಸಂಘಟಕರು ಪರಸ್ಪರ ಸಮನ್ವಯದೊಂದಿಗೆ ಸಿದ್ಧತೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ರಸ್ತೆ ದುರಸ್ತಿಗೆ ಸೂಚನೆ: ವಿಮಾನ ನಿಲ್ದಾಣದಿಂದ ಗಣ್ಯರು ಸಂಚರಿಸಲಿರುವ ಮಾರ್ಗವನ್ನು ತಕ್ಷಣ ದುರಸ್ತಿಗೊಳಿಸಬೇಕು. ಈ ಮಾರ್ಗದಲ್ಲಿರುವ ರಸ್ತೆಹಂಪ್‌ಗಳನ್ನೂ ತೆರವುಗೊಳಿಸಬೇಕು. ಸಂಬಂಧಿಸಿದ ಇಲಾಖೆಯವರು ವ್ಯಾಪ್ತಿಯಲ್ಲಿ ಬರುವ ರಸ್ತೆಯನ್ನು ತಕ್ಷಣವೇ ದುರಸ್ತಿಗೊಳಿಸಬೇಕು ಎಂದು ಪ್ರಾದೇಶಿಕ ಆಯುಕ್ತರು ಸೂಚನೆ ನೀಡಿದರು. ವಿಮಾನ ನಿಲ್ದಾಣ, ಕಾರ್ಯಕ್ರಮದ ಸ್ಥಳದಲ್ಲಿ ತುರ್ತು ವೈದ್ಯಕೀಯ ವ್ಯವಸ್ಥೆ, ವೈದ್ಯರ ತಂಡ, ಆ್ಯಂಬ್ಯುಲೆನ್ಸ್‌ಗಳನ್ನು ನಿಯೋಜಿಸುವಂತೆ ತಿಳಿಸಿದರು.

ನಗರ ಪೊಲೀಸ್‌ ಆಯುಕ್ತ ಡಾ.ಡಿ.ಸಿ.ರಾಜಪ್ಪ, ಸಾಂಬ್ರಾ ವಿಮಾನ ನಿಲ್ದಾಣದ ನಿರ್ದೇಶಕ ರಾಜೇಶಕುಮಾರ ಮೌರ್ಯ, ಗುಪ್ತಚರ ಇಲಾಖೆಯ ಎಸ್‌ಪಿ ಚನ್ನಬಸವಣ್ಣ, ಉಪ ವಿಭಾಗಾಧಿಕಾರಿ ಡಾ.ಕವಿತಾ ಯೋಗಪ್ಪನವರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಹೆಲಿಕಾಪ್ಟರ್‌ ಬಳಕೆಗೆ ಪ್ರಸ್ತಾವ: ಸಾಂಬ್ರಾ ವಿಮಾನ ನಿಲ್ದಾಣದಿಂದ ಪ್ರವಾಸಿ ಮಂದಿರದ ಮೂಲಕ ಕಾರ್ಯಕ್ರಮ ಸ್ಥಳ ತಲುಪಲು ಸುಮಾರು 24 ಕಿ.ಮೀ. ರಸ್ತೆ ಮಾರ್ಗ ಕ್ರಮಿಸಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್‌ ಬಳಕೆ ಬಗ್ಗೆಯೂ ಪರಿಶೀಲಿಸಿ ಪ್ರಸ್ತಾವ ಸಲ್ಲಿಸಲಾಗುವುದು ಎಂದು ಪ್ರಾದೇಶಿಕ ಆಯುಕ್ತ ಮೇಘಣ್ಣವರ ಹೇಳಿದರು. ಜಿಲ್ಲಾಧಿಕಾರಿ ಎಸ್‌.ಜಿಯಾವುಲ್ಲಾ, ಈಗಾಗಲೇ ಪೊಲೀಸ್‌ ಆಯುಕ್ತರ ಜತೆಗೂಡಿ ಸ್ಥಳ ಪರಿಶೀಲನೆ ನಡೆಸಲಾಗಿದ್ದು, ರಸ್ತೆ ಮಾರ್ಗದ ಪರ್ಯಾಯವಾಗಿ ಮಚ್ಛೆ ಬಳಿ ಹೆಲಿಪ್ಯಾಡ್‌ಗಳನ್ನು ನಿರ್ಮಿಸಬಹುದು. ಇದು ಕಾರ್ಯಕ್ರಮದ ಸ್ಥಳಕ್ಕೂ ಸಮೀಪದಲ್ಲಿದ್ದು, ವಿಟಿಯು ಅತಿಥಿಗೃಹವೂ ಇರುವುದರಿಂದ ಗಣ್ಯರ ಸಂಚಾರಕ್ಕೆ ಅನುಕೂಲ ಎಂದು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ