ಆ್ಯಪ್ನಗರ

'ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಸ್ಪರ್ಧಿಸಲು ಒತ್ತಾಯ ಬಂದಿರುವುದು ನಿಜ';ಸತೀಶ್ ಜಾರಕಿಹೊಳಿ

ಪಕ್ಷದಲ್ಲಿ ಅಭ್ಯರ್ಥಿಗಳ ಕೊರತೆ ಇಲ್ಲ. ಸಮರ್ಥರನ್ನು ಕಣಕ್ಕಿಳಿಸಲಾಗುವುದು ಎಂದ ಸತೀಶ್ ಜಾರಕಿಹೊಳಿ ಅವರು, ಎರಡನೇ ಸುತ್ತಿನ ಸಭೆಯಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಲು ಯಾರ್ಯಾರು ಆಸಕ್ತರಿದ್ದಾರೆ ಮತ್ತು ಅವರ ಸಾಮರ್ಥ್ಯಗಳೇನು ಅನ್ನುವುದನ್ನು ಪರಿಶೀಲಿಸಿ ಮೂವರ ಹೆಸರನ್ನು ಕೆಪಿಸಿಸಿಗೆ ಕಳುಹಿಸುತ್ತೇವೆ. ಅಂತಿಮ ನಿರ್ಧಾರವನ್ನು ಹೈಕಮಾಂಡ್‌ ಮಾಡುತ್ತದೆ. ಆ ನಿರ್ಧಾರಕ್ಕೆ ನಾವು ಬದ್ಧರಿದ್ದೇವೆ ಹೇಳಿದರು.

Vijaya Karnataka Web 26 Nov 2020, 2:53 pm
ಬೆಳಗಾವಿ: ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ನಾನು ಸ್ಪರ್ಧಿಸುವಂತೆ ಹಲವು ಕಡೆಯಿಂದ ಒತ್ತಾಯ ಬಂದಿರುವುದು ನಿಜ. ಆದರೆ ನನಗೆ ಉಪಚುನಾವಣೆಯಲ್ಲಿ ಸ್ಪರ್ಧಿಸಲು ವೈಯಕ್ತಿಕವಾಗಿ ಆಸಕ್ತಿ ಇಲ್ಲ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.
Vijaya Karnataka Web sathish jarkiholi


ಹಿರಿಯ ಕಾಂಗ್ರೆಸ್‌ ನಾಯಕ ಅಹ್ಮದ್ ಪಟೇಲ್ ಅವರಿಗೆ ಶ್ರದ್ಧಾಂಜಲಿ ಮತ್ತು ಸಂವಿಧಾನ ದಿನಾಚರಣೆಯನ್ನು ಆಚರಿಸಿದ ನಂತರ ನಗರದ ಕಾಂಗ್ರೆಸ್‌ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ನನಗೆ ವೈಯಕ್ತಿಕವಾಗಿ ಆಸಕ್ತಿ ಇಲ್ಲ. ರಾಜ್ಯ ಹಾಗೂ ಜಿಲ್ಲೆಯಲ್ಲೇ ಮಾಡುವುದಕ್ಕೆ ಬಹಳಷ್ಟು ಕೆಲಸವಿದೆ ಎಂದರು. ಅಲ್ಲದೇ ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಡಿಸೆಂಬರ್ ಮೊದಲ ವಾರ ಎರಡನೇ ಸುತ್ತಿನ ಸಭೆ ನಡೆಸುತ್ತೇವೆ ಎಂದರು.

ರೈತರ ಕಷ್ಟಕಾಲದಲ್ಲಿ ಸಹಕಾರಿ ಸಂಘಗಳು ನೆರವಾಗೋದು ಶ್ಲಾಘನೀಯ: ಶಾಸಕ ಬಾಲಚಂದ್ರ ಜಾರಕಿಹೊಳಿ

ಪಕ್ಷದಲ್ಲಿ ಅಭ್ಯರ್ಥಿಗಳ ಕೊರತೆ ಇಲ್ಲ. ಸಮರ್ಥರನ್ನು ಕಣಕ್ಕಿಳಿಸಲಾಗುವುದು ಎಂದ ಅವರು, ಎರಡನೇ ಸುತ್ತಿನ ಸಭೆಯಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಲು ಯಾರ್ಯಾರು ಆಸಕ್ತರಿದ್ದಾರೆ ಮತ್ತು ಅವರ ಸಾಮರ್ಥ್ಯಗಳೇನು ಅನ್ನುವುದನ್ನು ಪರಿಶೀಲಿಸಿ ಮೂವರ ಹೆಸರನ್ನು ಕೆಪಿಸಿಸಿಗೆ ಕಳುಹಿಸುತ್ತೇವೆ. ಅಂತಿಮ ನಿರ್ಧಾರವನ್ನು ಹೈಕಮಾಂಡ್‌ ಮಾಡುತ್ತದೆ. ಆ ನಿರ್ಧಾರಕ್ಕೆ ನಾವು ಬದ್ಧರಿದ್ದೇವೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು. ಇನ್ನು ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ ಎಂದ ಜಾರಕಿಹೊಳಿ, ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಅವರು ಕೆಪಿಸಿಸಿ ಅಧ್ಯಕ್ಷರನ್ನು ಭೇಟಿಯಾಗಿ ಟಿಕೆಟ್‌ ಕೇಳಿರುವ ವಿಚಾರ ನನಗೆ ಗೊತ್ತಿಲ್ಲ ಎಂದರು.

ಬೆಳಗಾವಿ ಲೋಕಸಭಾ ಉಪಚುನಾವಣೆ ಜೆಡಿಎಸ್‌ ಅಭ್ಯರ್ಥಿ ಆಯ್ಕೆಗೆ 28ರಂದು ಎಚ್‌ಡಿಡಿ ನೇತೃತ್ವದಲ್ಲಿ ಸಭೆ

ಇದೇ ವೇಳೆ ಬೆಳಗಾವಿ ಜಿಲ್ಲೆಯನ್ನೂ ವಿಭಜಿಸಬೇಕು ಎಂದು ಒತ್ತಾಯಿಸಿದ ಜಾರಕಿಹೊಳಿ, ಗೋಕಾಕ, ಚಿಕ್ಕೋಡಿ ಮತ್ತು ಬೆಳಗಾವಿ ಮೂರು ಜಿಲ್ಲೆ ರಚಿಸಲೇಬೇಕು. ಅಭಿವೃದ್ಧಿ ದೃಷ್ಟಿಯಿಂದ ಜಿಲ್ಲೆಯ ವಿಭಜನೆ ಅಗತ್ಯವಾಗಿದೆ. ಇದನ್ನು ಹಿಂದಿನಿಂದಲೂ ಒತ್ತಾಯಿಸುತ್ತಲೇ ಬಂದಿದ್ದೇವೆ ಎಂದರು. ಅಲ್ಲದೇ ಮರಾಠಾ ಅಭಿವೃದ್ಧಿ ನಿಗಮ ಸ್ಥಾಪನೆ ಖಂಡಿಸಿ, ಕೆಲವು ಸಂಘಟನೆಗಳು ಡಿ. 5ರಂದು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಕಾಂಗ್ರೆಸ್ ಬೆಂಬಲವಿಲ್ಲ. ಯಾವುದೇ ಸಮುದಾಯಕ್ಕೆ ನಿಗಮ ರಚಿಸುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ, ರಾಜಕೀಯ ಕಾರಣ ಮುಂದಿಟ್ಟುಕೊಂಡು ಮಾಡಿರುವುದಕ್ಕೆ ನಮ್ಮ ವಿರೋಧವಿದೆ. ನಿಗಮ ಸ್ಥಾಪನೆಯನ್ನು ಬಜೆಟ್‌ನಲ್ಲಿಯೇ ಘೋಷಣೆ ಮಾಡಬೇಕಿತ್ತು. ಚುನಾವಣೆಗಳು ಬಂದಾಗ ಘೋಷಿಸಿರುವುದೇಕೆ? ಎಂದು ಕೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ