ಆ್ಯಪ್ನಗರ

ಬಿಜೆಪಿಯ ಐಟಿ ದಾಳಿ ಷಡ್ಯಂತ್ರದ ವಿರುದ್ಧ ಆಯೋಗ ಕ್ರಮ ಕೈಗೊಳ್ಳುತ್ತಿಲ್ಲ

ಬೆಳಗಾವಿ: ಲೋಕಸಭೆ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಬಿಜೆಪಿ, ಉದ್ದೇಶಪೂರ್ವಕವಾಗಿ ಕಾಂಗ್ರೆಸ್‌ ...

Vijaya Karnataka 12 Apr 2019, 5:00 am
ಬೆಳಗಾವಿ : ಲೋಕಸಭೆ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಬಿಜೆಪಿ, ಉದ್ದೇಶಪೂರ್ವಕವಾಗಿ ಕಾಂಗ್ರೆಸ್‌ ಬಲಿಷ್ಠವಾಗಿರುವ ರಾಜ್ಯಗಳಲ್ಲಿ ಅದರ ಅಭ್ಯರ್ಥಿಗಳು ಮತ್ತು ಬೆಂಬಲಿಗರನ್ನು ಗುರಿಯಾಗಿಸಿಕೊಂಡು ಐಟಿ ದಾಳಿ ನಡೆಸುತ್ತಿರುವುದಾಗಿ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಆರೋಪಿಸಿದ್ದಾರೆ.
Vijaya Karnataka Web the commission is not taking action against the bjps it attack
ಬಿಜೆಪಿಯ ಐಟಿ ದಾಳಿ ಷಡ್ಯಂತ್ರದ ವಿರುದ್ಧ ಆಯೋಗ ಕ್ರಮ ಕೈಗೊಳ್ಳುತ್ತಿಲ್ಲ


ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಐಟಿ ದಾಳಿ ನಡೆಸುವ ಮೂಲಕ ಕಾಂಗ್ರೆಸ್‌ ಅಭ್ಯರ್ಥಿ-ಬೆಂಬಲಿಗರ ಚುನಾವಣೆ ಉತ್ಸಾಹವನ್ನು ಕುಂದಿಸುವ ಷಡ್ಯಂತ್ರ ಬಿಜೆಪಿಯದ್ದು. ಇದರ ವಿರುದ್ಧ ಚುನಾವಣೆ ಆಯೋಗಕ್ಕೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ'', ಎಂದು ಅಸಮಾಧಾನ ವ್ಯಕ್ತಪಡಿಸಿದರು. ''ಬಿಜೆಪಿ ಚುನಾವಣೆ ಗೆಲ್ಲಲು ಅನೇಕ ಕ್ಷೇತ್ರಗಳಲ್ಲಿ ನೂರಾರು ಕೋಟಿ ರೂ.ಗಳನ್ನು ವೆಚ್ಚ ಮಾಡುತ್ತಿದೆ. ಆದರೆ ಇದು ಐಟಿ ಸೇರಿ ಯಾವುದೇ ತನಿಖಾ ಸಂಸ್ಥೆಗಳಿಗೆ ಕಾಣಿಸುತ್ತಿಲ್ಲ'', ಎಂದು ಕಿಡಿಕಾರಿದರು.

''ಮಂಡ್ಯ, ಹಾಸನ ಮತ್ತು ತುಮಕೂರು ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಅಭ್ಯರ್ಥಿಗಳು ದೊಡ್ಡ ಸಂಖ್ಯೆಯ ಮತಗಳ ಅಂತರದಿಂದ ಗೆಲ್ಲುವುದು ಖಚಿತ. ಎದುರಾಳಿಗಳು ಎಷ್ಟೇ ಅಬ್ಬರಿಸಿದರೂ ನಮಗ್ಯಾವುದೇ ವ್ಯತ್ಯಾಸವಾಗದು'', ಎಂದ ಅವರು, ''ಮಾಧ್ಯಮಗಳೂ ನಿಷ್ಪಕ್ಷಪಾತವಾಗಿ ನಡೆದುಕೊಳ್ಳುತ್ತಿಲ್ಲ. ಕೆಲವೊಂದು ಮಾಧ್ಯಮಗಳು ಕೇವಲ ಮೋದಿ ಮತ್ತು ಬಿಜೆಪಿಯನ್ನು ಹೊಗಳುವಲ್ಲಿ ನಿರತವಾಗಿವೆ'', ಎಂದು ಅಸಮಾಧಾನ ಹೊರಹಾಕಿದರು.

ರಮೇಶ್‌ ಜಾರಕಿಹೊಳಿ ಬಗ್ಗೆ ಹೆಚ್ಚು ಮಾತನಾಡಲು ಇಚ್ಛಿಸದ ದಿನೇಶ್‌ ಗುಂಡೂರಾವ್‌, ''ರಮೇಶ್‌ ಜಾರಕಿಹೊಳಿ ಸದ್ಯ ನಮ್ಮ ಸಂಪರ್ಕದಲ್ಲಿ ಇಲ್ಲ. ಚುನಾವಣೆ ನಂತರ ಈ ಬಗ್ಗೆ ಯೋಚಿಸಿದರಾಯಿತು'', ಎಂದು ಜಾರಿಕೊಂಡರು.

ಶಾಸಕಿ ಲಕ್ಷ್ಮೇ ಹೆಬ್ಬಾಳಕರ್‌, ಪಕ್ಷದ ಬೆಳಗಾವಿ ಗ್ರಾಮೀಣ ಜಿಲ್ಲಾ ಅಧ್ಯಕ್ಷ ವಿನಯ ನಾವಲಗಟ್ಟಿ, ನಗರ ಘಟಕದ ಅಧ್ಯಕ್ಷ ರಾಜು ಸೇಠ್‌, ಮಾಜಿ ಶಾಸಕ ಫಿರೋಜ್‌ ಸೇಠ್‌ ಮತ್ತು ಇತರೆ ಪ್ರಮುಖರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ