ಆ್ಯಪ್ನಗರ

Idgah Maidan Row: ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ: ಹಿಂದೂ ಮುಖಂಡರ ಜತೆ ಪೊಲೀಸರ ಶಾಂತಿ ಸಭೆ

Idgah Maidan Row: 'ಯಾವುದೇ ಕಾರಣಕ್ಕೂ ಶಾಂತಿ ಕದಡುವ ಪ್ರಯತ್ನ ನಡೆಯಬಾರದು. ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ಚಟುವಟಿಕೆಗಳಿಗೆ ಆಸ್ಪದ ನೀಡಬೇಡಿ. ಮೈದಾನಕ್ಕೆ ಸಂಬಂಧ ಪಟ್ಟ ವಿವಾದವನ್ನು ಕಾನೂನು ರೀತಿಯಲ್ಲಿ ಇತ್ಯರ್ಥಪಡಿಸಿಕೊಳ್ಳಬೇಕು. ಈ ವಿಚಾರದಲ್ಲಿ ಸರಕಾರಕ್ಕೆ ಮನವಿ ಸಲ್ಲಿಸಲು ಅವಕಾಶವಿದೆ. ಸರಕಾರದ ನಿರ್ಧಾರದ ವಿರುದ್ಧ ಅಸಮಾಧಾನವಿದ್ದರೆ ನ್ಯಾಯಾಲಯದ ಮೊರೆ ಹೋಗಬಹುದು. ಈದ್ಗಾ ಮೈದಾನದ ವಿಚಾರದಲ್ಲಿ ಕಾನೂನು ಉಲ್ಲಂಘಿಸಿ ಅಶಾಂತಿ ಸೃಷ್ಟಿಸಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ' ಎಂದು ಡಿಸಿಪಿ ಖಡಕ್‌ ಎಚ್ಚರಿಕೆ ನೀಡಿದರು.

Edited byದಿಲೀಪ್ ಡಿ. ಆರ್. | Vijaya Karnataka Web 10 Aug 2022, 12:49 pm

ಹೈಲೈಟ್ಸ್‌:

  • ಶಾಂತಿ ಕದಡಿದರೆ ನಿರ್ದಾಕ್ಷಿಣ್ಯ ಕ್ರಮ
  • ಡಿಸಿಪಿ ಲಕ್ಷ್ಮಣ್ ನಿಂಬರಗಿ ಎಚ್ಚರಿಕೆ
  • ಸಮಾಜದ ಸ್ವಾಸ್ಥ್ಯ ಹಾಳು ಮಾಡಬೇಡಿ ಎಂದು ಸೂಚನೆ

ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web idgah
ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ: ಹಿಂದೂ ಮುಖಂಡರ ಜತೆ ಪೊಲೀಸರ ಶಾಂತಿ ಸಭೆ
ಬೆಂಗಳೂರು: ಚಾಮರಾಜಪೇಟೆಯ ಈದ್ಗಾ ಮೈದಾನ ವಿವಾದದ ಕಿಚ್ಚು ತೀವ್ರ ಸ್ವರೂಪ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ನಗರದಲ್ಲಿ ಮಂಗಳವಾರ ಹಿಂದೂಪರ ಸಂಘಟನೆಗಳ ಮುಖಂಡರೊಂದಿಗೆ ಶಾಂತಿ ಸಭೆ ನಡೆಸಿದರು.
ವಿವಾದಿತ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸುವುದಾಗಿ ಹಿಂದೂ ಪರ ಸಂಘಟನೆಗಳು ಪಟ್ಟು ಹಿಡಿದಿರುವುದರಿಂದ ಪರಿಸ್ಥಿತಿ ಗಂಭೀರ ಸ್ವರೂಪ ಪಡೆದಿದೆ. ಹೀಗಾಗಿ, ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ್‌ ನಿಂಬರಗಿ ಅವರು ಹಿಂದೂ ಪರ ಸಂಘಟನೆಗಳ ಮುಖಂಡರೊಂದಿಗೆ ಚಾಮರಾಜ ಪೇಟೆ ಪೊಲೀಸ್‌ ಠಾಣೆ ಆವರಣದಲ್ಲಿ ಸಭೆ ನಡೆಸಿ ಶಾಂತಿ ಕಾಪಾಡುವಂತೆ ಮನವಿ ಮಾಡಿದರು.

Zameer Ahmed Khan: ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶನ ಹಬ್ಬ ಆಚರಣೆಗೆ ಅವಕಾಶ ಇಲ್ಲ: ಜಮೀರ್ ಅಹ್ಮದ್ ಖಾನ್
'ಯಾವುದೇ ಕಾರಣಕ್ಕೂ ಶಾಂತಿ ಕದಡುವ ಪ್ರಯತ್ನ ನಡೆಯಬಾರದು. ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ಚಟುವಟಿಕೆಗಳಿಗೆ ಆಸ್ಪದ ನೀಡಬೇಡಿ. ಮೈದಾನಕ್ಕೆ ಸಂಬಂಧ ಪಟ್ಟ ವಿವಾದವನ್ನು ಕಾನೂನು ರೀತಿಯಲ್ಲಿ ಇತ್ಯರ್ಥಪಡಿಸಿಕೊಳ್ಳಬೇಕು. ಈ ವಿಚಾರದಲ್ಲಿ ಸರಕಾರಕ್ಕೆ ಮನವಿ ಸಲ್ಲಿಸಲು ಅವಕಾಶವಿದೆ. ಸರಕಾರದ ನಿರ್ಧಾರದ ವಿರುದ್ಧ ಅಸಮಾಧಾನವಿದ್ದರೆ ನ್ಯಾಯಾಲಯದ ಮೊರೆ ಹೋಗಬಹುದು. ಈದ್ಗಾ ಮೈದಾನದ ವಿಚಾರದಲ್ಲಿ ಕಾನೂನು ಉಲ್ಲಂಘಿಸಿ ಅಶಾಂತಿ ಸೃಷ್ಟಿಸಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ' ಎಂದು ಡಿಸಿಪಿ ಖಡಕ್‌ ಎಚ್ಚರಿಕೆ ನೀಡಿದರು.

'ಮೈದಾನದ ವಿವಾದ ಸಂಬಂಧ ಯಾವುದೇ ವ್ಯಕ್ತಿ ಪ್ರಚೋದನಕಾರಿ ಹೇಳಿಕೆ ನೀಡಬಾರದು. ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಭಾವನೆ ಕೆರಳಿಸುವ ಸಂದೇಶಗಳನ್ನು ಹಾಕಬಾರದು. ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡಬಾರದು. ಮೈದಾನದ ವಿಚಾರದಲ್ಲಿ ಅನಗತ್ಯ ಹೇಳಿಕೆ ನೀಡಿ ಗೊಂದಲ ಸೃಷ್ಟಿಸಿದರೆ ಕಾನೂನು ಕ್ರಮ ಜರುಗಿಸುತ್ತೇವೆ' ಎಂದು ತಿಳಿಸಿದರು.

'ಈದ್ಗಾ ಮೈದಾನವು ಸರಕಾರದ ಆಸ್ತಿಯಾಗಿದ್ದು, ಎಲ್ಲಾ ಜಾತಿ ಹಾಗೂ ಧರ್ಮದವರಿಗೆ ಸೇರಿದೆ. ಸ್ವಾತಂತ್ರ್ಯ ದಿನಾಚರಣೆ ವೇಳೆ ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣಕ್ಕೆ ಅವಕಾಶ ಕಲ್ಪಿಸಬೇಕು. ಬೇರೆ ಸಮುದಾಯದವರಿಗೆ ಇಲ್ಲಿ ಅವಕಾಶ ನೀಡಬಾರದು' ಎಂದು ಹಿಂದೂ ಪರ ಸಂಘಟನೆಗಳ ಮುಖಂಡರು ಮನವಿ ಮಾಡಿದರು.

Chamarajpet Bandh: ಈದ್ಗಾ ಮೈದಾನ ವಿವಾದ, ಬೆಂಗಳೂರಿನ ಚಾಮರಾಜಪೇಟೆ ಬಂದ್
ಪ್ರತ್ಯೇಕ ಸಭೆ

'ಮೊಹರಂ ಹಿನ್ನೆಲೆಯಲ್ಲಿ ಮುಸ್ಲಿಂ ಸಂಘಟನೆಗಳ ಸದಸ್ಯರು ಹಾಗೂ ಮುಖಂಡರು ಮಂಗಳವಾರದ ಸಭೆಯಲ್ಲಿ ಭಾಗಿಯಾಗಿಲ್ಲ. ಹೀಗಾಗಿ ಮುಸ್ಲಿಂ ಮುಖಂಡರೊಂದಿಗೆ ಬುಧವಾರ ಪ್ರತ್ಯೇಕ ಸಭೆ ನಡೆಸಲು ನಿರ್ಧರಿಸಿದ್ದೇವೆ. ಹಿಂದೂ ಹಾಗೂ ಮುಸ್ಲಿಂ ಮುಖಂಡರ ಅಭಿಪ್ರಾಯ ಆಲಿಸಿ ಕಾನೂನ ಪ್ರಕಾರ ಕ್ರಮ ಕೈಗೊಳ್ಳುತ್ತೇವೆ' ಎಂದು ಲಕ್ಷ್ಮಣ್‌ ನಿಂಬರಗಿ ಸುದ್ದಿಗಾರರಿಗೆ ತಿಳಿಸಿದರು.

ಚಾಮರಾಜ ಪೇಟೆ ನಾಗರಿಕರ ಒಕ್ಕೂಟ, ಶ್ರೀರಾಮ ಸೇನೆ, ವಂದೇ ಮಾತರಂ ಸಂಘಟನೆ, ವಿಶ್ವ ಸನಾತನ ಪರಿಷತ್ತಿನ ಮುಖಂಡರು ಶಾಂತಿ ಸಭೆಯಲ್ಲಿ ಪಾಲ್ಗೊಂಡರು.


ಪ್ರಕರಣ ದಾಖಲು

ಈದ್ಗಾ ಮೈದಾನದಲ್ಲಿನ ಗೋಡೆಯನ್ನು ನೆಲಸಮಗೊಳಿಸುವುದಾಗಿ ಪ್ರಚೋದನಕಾರಿ ಹೇಳಿಕೆ ನೀಡಿರುವ ವಿಶ್ವ ಸನಾತನ ಪರಿಷತ್ತು ಅಧ್ಯಕ್ಷ ಎಸ್‌. ಭಾಸ್ಕರನ್‌ ವಿರುದ್ಧ ಚಾಮರಾಜ ಪೇಟೆ ಠಾಣೆ ಪೊಲೀಸರು ಮಂಗಳವಾರ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.

'ಬಾಬರಿ ಮಸೀದಿ ಕೆಡವಿದ ಮಾದರಿಯಲ್ಲೇ ಡಿಸೆಂಬರ್ 6 ರಂದು ಈದ್ಗಾ ಮೈದಾನದ ಗೋಡೆ ನೆಲಸಮಗೊಳಿಸಲು ಸಿದ್ಧತೆ ಮಾಡಿಕೊಂಡಿದ್ದೇವೆ. ಈ ಸಂಬಂಧ ಆಂಧ್ರ ಪ್ರದೇಶ, ತೆಲಂಗಾಣ, ಕೇರಳ ಸೇರಿದಂತೆ ವಿವಿಧ ರಾಜ್ಯಗಳ ಹಿಂದೂ ಪರ ಸಂಘಟನೆಗಳ ಮುಖಂಡರನ್ನು ಸಂಪರ್ಕಿಸಿದ್ದೇವೆ' ಎಂದು ಭಾಸ್ಕರನ್‌ ಮಾಧ್ಯಮ ಪ್ರತಿನಿಧಿಗಳಿಗೆ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಪೊಲೀಸರು ಅವರ ವಿರುದ್ಧ ಕೋಮು ಗಲಭೆಗೆ ಪ್ರಚೋದನೆ, ಮತೀಯ ಭಾವನೆಗಳಿಗೆ ಧಕ್ಕೆ ಆರೋಪದಡಿ ಪ್ರಕರಣ ದಾಖಲಿಸಿದ್ದಾರೆ.
ಲೇಖಕರ ಬಗ್ಗೆ
ದಿಲೀಪ್ ಡಿ. ಆರ್.
ವಿಜಯ ಕರ್ನಾಟಕದ ಡಿಜಿಟಲ್ ಪತ್ರಕರ್ತನಾಗಿ 2019ರ ಆಗಸ್ಟ್‌ನಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡ ಟಿವಿ ನ್ಯೂಸ್ ವಾಹಿನಿಗಳಲ್ಲಿ 14 ವರ್ಷಕ್ಕೂ ಹೆಚ್ಚು ಕಾಲ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. ರಾಜಕೀಯ, ವಿಜ್ಞಾನ-ತಂತ್ರಜ್ಞಾನ ರಂಗಗಳು ಇವರ ಆಸಕ್ತಿಯ ವಿಷಯಗಳು. ಇದಲ್ಲದೆ ಹಾಸ್ಯ, ವಿಡಂಬನಾತ್ಮಕ ಬರಹ, ವ್ಯಕ್ತಿ ಚಿತ್ರ, ಜೀವ ಪರ ನಿಲುವಿನ ಸಂವೇದನಾತ್ಮಕ ಲೇಖನಗಳನ್ನು ಹೆಚ್ಚಾಗಿ ಬರೆಯುತ್ತಾರೆ. ಕಾಡು, ಹಸಿರು, ಬೆಟ್ಟ ಗುಡ್ಡಗಳ ಚಾರಣ ಮಾಡುವುದು ಇವರ ಹವ್ಯಾಸ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ