ಆ್ಯಪ್ನಗರ

ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದು ಚಿಕಿತ್ಸೆ ಸಿಗದೆ ವ್ಯಕ್ತಿ ಸಾವು: ಮಗಳಿಂದಲೇ ಅಂತ್ಯಸಂಸ್ಕಾರ

ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ 55 ವರ್ಷದ ವ್ಯಕ್ತಿಯೊಬ್ಬರು ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದು ಸಕಾಲಕ್ಕೆ ಚಿಕಿತ್ಸೆ ಸಿಗದೆ ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ.

Vijaya Karnataka Web 9 Jul 2020, 7:08 am
ಬೆಂಗಳೂರು: ನಗರದಲ್ಲಿ ಸೂಕ್ತ ಸಮಯದಲ್ಲಿ ಚಿಕಿತ್ಸೆ ದೊರೆಯದೆ ರೋಗಿಗಳು ಸಾವಿಗೀಡಾಗುವ ಪ್ರಕರಣಗಳು ಮರುಕಳಿಸುತ್ತಲೇ ಇವೆ.
Vijaya Karnataka Web ಸಾಂದರ್ಭಿಕ ಚಿತ್ರ

ವಾಲ್ಮೀಕಿನಗರದ 55 ವರ್ಷದ ವ್ಯಕ್ತಿಯೊಬ್ಬರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದು, ರಕ್ತದೊತ್ತಡದಲ್ಲೂ ಏರುಪೇರಾಗಿತ್ತು. ಅವರನ್ನು ಆಂಬ್ಯುಲೆನ್ಸ್‌ನಲ್ಲಿ ಬೆಳಗ್ಗೆ ಕಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಅಲ್ಲಿ ಹಾಸಿಗೆ ಇಲ್ಲ ಎಂಬ ಕಾರಣಕ್ಕೆ ರಾಜಾಜಿನಗರದ ಇಎಸ್‌ಐ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಅಲ್ಲಿಯೂ ಹಾಸಿಗೆ ಭರ್ತಿಯಾಗಿದೆ ಎಂಬ ಉತ್ತರ ದೊರೆತಿತ್ತು. ನಂತರ ಜಾಲಹಳ್ಳಿಯ ಖಾಸಗಿ ಆಸ್ಪತ್ರೆಯೊಂದಕ್ಕೆ ಹೋದಾಗ ಹಾಸಿಗೆ ಲಭ್ಯವಿಲ್ಲಎಂದು ಸಿಬ್ಬಂದಿ ಹೇಳಿದ್ದರು. ಹೀಗೆ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆಯುತ್ತಿರುವಾಗಲೇ ಅವರು ಕೊನೆಯುಸಿರೆಳೆದಿದ್ದಾರೆ.

''ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಕ್ಕಿದ್ದಿದ್ದರೆ ಅವರು ಬದುಕುಳಿಯುತ್ತಿದ್ದರು,'' ಎಂದು ಕುಟುಂಬ ಸದಸ್ಯರು ಹೇಳಿದ್ದಾರೆ.

ಮಗಳಿಂದಲೇ ಅಂತ್ಯಸಂಸ್ಕಾರ
ಶಕ್ತಿಗಣಪತಿ ನಗರದಲ್ಲಿ ಸೋಂಕಿಗೊಳಗಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಆಟೋ ಚಾಲಕನ ಅಂತ್ಯಸಂಸ್ಕಾರವನ್ನು ಸುಮನಹಳ್ಳಿ ಚಿತಾಗಾರದಲ್ಲಿ ಮಗಳೇ ನೆರವೇರಿಸಿದ್ದಾರೆ.

ಇಬ್ಬರು ಪುತ್ರಿಯರು ಹಾಗೂ ಒಬ್ಬ ಪುತ್ರ ಮನೆಯಲ್ಲೇ ಕ್ವಾರಂಟೈನ್‌ಗೊಳಗಾಗಿದ್ದರು. ಮನೆ ಬಳಿ ಸೀಲ್‌ಡೌನ್‌ ಮಾಡಿದ್ದರಿಂದ ಮಗಳು ಹೊರಬರುವುದಕ್ಕೆ ನೆರೆಮನೆಯವರು ಆಕ್ಷೇಪ ವ್ಯಕ್ತಪಡಿಸಿದರು. ಮೃತ ವ್ಯಕ್ತಿಯ ಮಗಳು ಚಿತಾಗಾರ ತಲುಪಲು ಶಂಕರಮಠ ವಾರ್ಡ್‌ ಕಾರ್ಪೊರೇಟರ್‌ ಎಂ.ಶಿವರಾಜ್‌ ಅವರು ವ್ಯವಸ್ಥೆ ಮಾಡಿದ್ದರು. ಅಲ್ಲಿ ಪಿಪಿಇ ಕಿಟ್‌ ಧರಿಸಿ ಅಂತ್ಯಸಂಸ್ಕಾರ ನೆರವೇರಿಸಿದರು.
ಸಿಲಿಕಾನ್‌ ಸಿಟಿಯಲ್ಲಿ ಕೊರೊನಾ ಉಲ್ಬಣ: 14ರ ಬಾಲಕ ಸೇರಿ 22 ಮಂದಿ ಸಾವು!

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ