ಆ್ಯಪ್ನಗರ

ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಸದಸ್ಯರಿಗೆ 4 ವರ್ಷ ಜೈಲು

ಶಿಫಾರಸು ಪತ್ರ ನೀಡಲು 60 ಸಾವಿರ ರೂ. ಲಂಚ ಪಡೆದ ಪ್ರಕರಣದಲ್ಲಿ ದೇವನಹಳ್ಳಿ ತಾಲೂಕು ಯಲಿಯೂರು ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ಮತ್ತು ಮಾಜಿ ಸದಸ್ಯರೊಬ್ಬರಿಗೆ 4 ವರ್ಷ ಜೈಲು ಶಿಕ್ಷೆ ಹಾಗೂ ತಲಾ 60 ಸಾವಿರ ರೂ. ದಂಡ ವಿಧಿಸಿ ಬೆಂಗಳೂರು ಗ್ರಾಮಾಂತರ ನ್ಯಾಯಾಲಯ ತೀರ್ಪು ನೀಡಿದೆ.

Vijaya Karnataka 3 Mar 2019, 5:00 am
ಬೆಂಗಳೂರು: ಶಿಫಾರಸು ಪತ್ರ ನೀಡಲು 60 ಸಾವಿರ ರೂ. ಲಂಚ ಪಡೆದ ಪ್ರಕರಣದಲ್ಲಿ ದೇವನಹಳ್ಳಿ ತಾಲೂಕು ಯಲಿಯೂರು ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ಮತ್ತು ಮಾಜಿ ಸದಸ್ಯರೊಬ್ಬರಿಗೆ 4 ವರ್ಷ ಜೈಲು ಶಿಕ್ಷೆ ಹಾಗೂ ತಲಾ 60 ಸಾವಿರ ರೂ. ದಂಡ ವಿಧಿಸಿ ಬೆಂಗಳೂರು ಗ್ರಾಮಾಂತರ ನ್ಯಾಯಾಲಯ ತೀರ್ಪು ನೀಡಿದೆ.
Vijaya Karnataka Web bribe


ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿದ್ದ ವೆಂಕಟಾಚಲ ಹಾಗೂ ಸದಸ್ಯ ಅಂಜನಪ್ಪ ಶಿಕ್ಷೆಗೆ ಒಳಗಾದವರು.

2010ರಲ್ಲಿ ದೊಡ್ಡಬಳ್ಳಾಪುರ ತಾಲೂಕು ತೂಬುಗೆರೆಯ ಎಸ್‌.ಎಸ್‌ ಘಾಟಿಯಲ್ಲಿ ವಿ.ನಾಗರತ್ನ ಎಂಬುವವರು ಅಂಗನವಾಡಿ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದರು. ಈ ಅವಧಿಯಲ್ಲಿ ನಾಗರತ್ನ ಅವರ ಪತಿಯ ಕೊಲೆಯಾಗಿತ್ತು. ಪತಿಯ ನಿಧನದ ಹಿನ್ನೆಲೆಯಲ್ಲಿ ಅವರು ತಮ್ಮ ಊರಿನ ವ್ಯಾಪ್ತಿಗೆ ಬರುವ ಅಂಗನವಾಡಿಗೆ ವರ್ಗಾವಣೆ ಕೋರಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕರ ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಅಧಿಕಾರಿಗಳು, ಯಲಿಯೂರು ಗ್ರಾಮ ಪಂಚಾಯಿತಿಯಿಂದ ಶಿಫಾರಸು ಪತ್ರ ತರಲು ಸೂಚಿಸಿದ್ದರು. ಹೀಗಾಗಿ, ನಾಗರತ್ನ, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ವೆಂಕಟಾಚಲ ಹಾಗೂ ಸದಸ್ಯ ಅಂಜನಪ್ಪ ಅವರನ್ನು ಭೇಟಿ ಮಾಡಿದಾಗ, 60 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಲಂಚ ನೀಡಲು ಇಚ್ಛಿಸದ ನಾಗರತ್ನ, ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. 2010ರ ಜು.30ರಂದು 25 ಸಾವಿರ ರೂ. ನಗದು ಹಾಗೂ 35 ಸಾವಿರ ರೂ.ಚೆಕ್‌ ಸ್ವೀಕರಿಸುತ್ತಿದ್ದ ವೇಳೆ ಇಬ್ಬರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು. ತನಿಖೆ ಪೂರ್ಣಗೊಳಿಸಿದ ಪೊಲೀಸರು, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ಪೂರ್ಣಗೊಂಡು ಇಬ್ಬರ ವಿರುದ್ಧ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 4 ವರ್ಷ ಜೈಲು ಶಿಕ್ಷೆ ಹಾಗೂ ತಲಾ 60 ಸಾವಿರ ರೂ. ದಂಡ ವಿಧಿಸಿದೆ ಎಂದು ವಿಶೇಷ ಸರಕಾರಿ ಅಭಿಯೋಜಕಿ ಕೆ. ಮಹಾಲಕ್ಷ್ಮಿ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ