ಆ್ಯಪ್ನಗರ

ವೈದ್ಯರ ಮುಷ್ಕರಕ್ಕೆ ಜಿಲ್ಲೆಯಲ್ಲೂ ಬೆಂಬಲ

ಪಶ್ಚಿಮ ಬಂಗಾಳದಲ್ಲಿ ವೈದ್ಯರ ಮೇಲಿನ ಹಲ್ಲೆಯನ್ನು ಖಂಡಿಸಿ ಭಾರತೀಯ ವೈದ್ಯಕೀಯ ಸಂಘದ ಕರೆಯ ಹಿನ್ನೆಲೆಯಲ್ಲಿ ಸೋಮವಾರ ಜಿಲ್ಲೆಯಲ್ಲೂ ಖಾಸಗಿ ಆಸ್ಪತ್ರೆಗಳಲ್ಲಿ ಒಪಿಡಿ (ಹೊರ ರೋಗಿಗಳ ವಿಭಾಗ)ಯನ್ನು ಬಂದ್‌ ಮಾಡುವ ಮೂಲಕ ಪ್ರತಿಭಟನೆ ವ್ಯಕ್ತಪಡಿಸಲಾಯಿತು.

Vijaya Karnataka 18 Jun 2019, 5:00 am
ಚಾಮರಾಜನಗರ: ಪಶ್ಚಿಮ ಬಂಗಾಳದಲ್ಲಿ ವೈದ್ಯರ ಮೇಲಿನ ಹಲ್ಲೆಯನ್ನು ಖಂಡಿಸಿ ಭಾರತೀಯ ವೈದ್ಯಕೀಯ ಸಂಘದ ಕರೆಯ ಹಿನ್ನೆಲೆಯಲ್ಲಿ ಸೋಮವಾರ ಜಿಲ್ಲೆಯಲ್ಲೂ ಖಾಸಗಿ ಆಸ್ಪತ್ರೆಗಳಲ್ಲಿ ಒಪಿಡಿ (ಹೊರ ರೋಗಿಗಳ ವಿಭಾಗ)ಯನ್ನು ಬಂದ್‌ ಮಾಡುವ ಮೂಲಕ ಪ್ರತಿಭಟನೆ ವ್ಯಕ್ತಪಡಿಸಲಾಯಿತು.
Vijaya Karnataka Web CHN-CHN17UM3


ಜಿಲ್ಲಾ ಕೇಂದ್ರ ಸೇರಿದಂತೆ ಜಿಲ್ಲೆಯಲ್ಲಿನ ಖಾಸಗಿ ಆಸ್ಪತ್ರೆಗಳು, ಕ್ಲಿನಿಕ್‌ಗಳಲ್ಲಿ ಹೊರ ರೋಗಿಗಳ ವಿಭಾಗವನ್ನು ಮುಚ್ಚಲಾಗಿತ್ತು. ಮಾನವೀಯ ದೃಷ್ಟಿಯಿಂದ ತುರ್ತು ಚಿಕಿತ್ಸಾ ವಿಭಾಗ ಹಾಗೂ ಒಳರೋಗಿಗಳ ಚಿಕಿತ್ಸೆಗೆ ಯಾವುದೇ ಆಡಚಣೆ ಆಗಲಿಲ್ಲ. ಅಲ್ಲಲ್ಲಿ ಕೆಲವೇ ಕೆಲವು ಖಾಸಗಿ ಕ್ಲಿನಿಕ್‌ಗಳಷ್ಟೇ ಕಾರ್ಯನಿರ್ವಹಿಸಿದವು. ಉಳಿದಂತೆ ಖಾಸಗಿ ನರ್ಸಿಂಗ್‌ ಹೋಂಗಳ ಮುಂದೆ ಮುಷ್ಕರ ಕುರಿತು ಸೂಚನಾ ಫಲಕಗಳನ್ನು ಅಳವಡಿಸಲಾಗಿತ್ತು.

ಹೊರ ರೋಗಿಗಳ ಚಿಕಿತ್ಸೆ ವಿಭಾಗ ಇಲ್ಲದೇ ಸಾಕಷ್ಟು ಮಂದಿ ರೋಗಿಗಳು ಸೂಚನಾ ಫಲಕ ನೋಡಿ ಹಿಂದಿರುಗಬೇಕಾಯಿತು. ಆದರೆ, ತುರ್ತು ಚಿಕಿತ್ಸೆ ಹಾಗೂ ಒಳರೋಗಿಗಳ ವಿಭಾಗ ಎಂದಿನಂತೆ ಕಾರ್ಯನಿರ್ವಹಿಸಿದ್ದರಿಂದ ಹೆಚ್ಚಿನ ಸಮಸ್ಯೆ ಆಗಲಿಲ್ಲ.

ಖಾಸಗಿ ಆಸ್ಪತ್ರೆಗಳಲ್ಲಿ ಹೊರ ರೋಗಿಗಳ ವಿಭಾಗ ಬಂದ್‌ ಇದ್ದ ಪರಿಣಾಮ, ಸರಕಾರಿ ಆಸ್ಪತ್ರೆಗಳಿಗೆ ಸಹಜವಾಗೇ ಇಂದು ರೋಗಿಗಳ ಸಂಖ್ಯೆ ಹೆಚ್ಚಿತ್ತು.

ಸಹಜವಾಗಿ ನಗರದ ಸರಕಾರಿ ಜಿಲ್ಲಾಸ್ಪತ್ರೆಗೆ ಪ್ರತಿನಿತ್ಯ 1 ಸಾವಿರದಿಂದ 1200 ಮಂದಿ ಹೊರ ರೋಗಿಗಳಾಗಿ ಚಿಕಿತ್ಸೆ ಪಡೆಯಲು ಬರುತ್ತಿದ್ದರು. ಆದರೆ ಇಂದು 200ರಿಂದ 250 ಮಂದಿ ಹೆಚ್ಚಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಖಾಸಗಿ ಆಸ್ಪತ್ರೆ ಬಂದ್‌ ಹಿನ್ನೆಲೆಯಲ್ಲಿ ನಗರದ ಜಿಲ್ಲಾಸ್ಪತ್ರೆಯ ಒಪಿಡಿ ವಿಭಾಗಕ್ಕೆ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು ಎಂದು ಜಿಲ್ಲಾಸ್ಪತ್ರೆಯ ಕೇಂದ್ರ ಸ್ಥಾನಿಕ ವೈದ್ಯಾಧಿಕಾರಿ ಡಾ. ಕೃಷ್ಣಪ್ರಸಾದ್‌ ತಿಳಿಸಿದರು.

ಕೇಂದ್ರ ಸಂಘದ ಕರೆ ಹಿನ್ನೆಲೆಯಲ್ಲಿ ಸೋಮವಾರ ಪೂರ್ಣ ಪ್ರಮಾಣದಲ್ಲಿ ತಾವು ಒಪಿಡಿ ವಿಭಾಗ ಬಂದ್‌ ಮಾಡಿ, ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದೇವೆ ಎಂದು ಡಾ. ಬಸವರಾಜೇಂದ್ರ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ