ಆ್ಯಪ್ನಗರ

ಎಸ್ಸಿ,ಎಸ್ಪಿ ದೌರ್ಜನ್ಯ ಕಾಯಿದೆಯಡಿ 63 ಪ್ರಕರಣ

ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ದೌರ್ಜನ್ಯ ಕಾಯಿದೆಯಡಿ ಅಕ್ಟೋಬರ್‌ 2018ರಿಂದ ಡಿಸೆಂಬರ್‌ 2018ರ ವರೆಗೆ 63 ಪ್ರಕರಣಗಳು ದಾಖಲಾಗಿವೆ ಎಂದು ಜಿಲ್ಲಾಧಿಕಾರಿ ಎಂ.ಕೆ.ಶ್ರೀರಂಗಯ್ಯ ಹೇಳಿದರು.

Vijaya Karnataka 15 Jan 2019, 5:00 am
ಚಿಕ್ಕಮಗಳೂರು : ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ದೌರ್ಜನ್ಯ ಕಾಯಿದೆಯಡಿ ಅಕ್ಟೋಬರ್‌ 2018ರಿಂದ ಡಿಸೆಂಬರ್‌ 2018ರ ವರೆಗೆ 63 ಪ್ರಕರಣಗಳು ದಾಖಲಾಗಿವೆ ಎಂದು ಜಿಲ್ಲಾಧಿಕಾರಿ ಎಂ.ಕೆ.ಶ್ರೀರಂಗಯ್ಯ ಹೇಳಿದರು.
Vijaya Karnataka Web CKM-14RUDRAP9


ಡಿಸಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡಗಳ ದೌರ್ಜನ್ಯ ನಿಯಂತ್ರಣ ಜಿಲ್ಲಾ ಜಾಗೃತ ಉಸ್ತುವಾರಿ ಸಮಿತಿ ಸಭೆ ಅಧ್ಯಕ್ಷ ತೆ ವಹಿಸಿ ಅವರು ಮಾತನಾಡಿದರು.

63 ಪ್ರಕರಣಗಳಲ್ಲಿ 19 ಪ್ರಕರಣಗಳಿಗೆ ಪರಿಹಾರ ಮಂಜೂರಾಗಿದೆ. ಒಟ್ಟು 23 ಸಂತ್ರಸ್ತರು ಪರಿಹಾರ ಧನ ಪಡೆದಿದ್ದಾರೆ. 12 ಪ್ರಕರಣಗಳಿಗೆ ಪರಿಹಾರ ಧನ ವಿತರಿಸಲು ಕ್ರಮ ವಹಿಸಲಾಗಿದೆ. 6 ಪ್ರಕರಣಗಳು ಪರಿಹಾರಧನ ಮಂಜೂರಾತಿಗೆ ಬಾಕಿ ಇದ್ದು, 26 ಪ್ರಕರಣ ಪೊಲೀಸ್‌ ಇಲಾಖೆಯಿಂದ ದೋಷಾರೋಪಣ ಪಟ್ಟಿ ಬರಲು ಬಾಕಿ ಇವೆ ಎಂದು ಮಾಹಿತಿ ನೀಡಿದರು.

ಪರಿಶಿಷ್ಟ ಜಾತಿ, ಪಂಗಡಗಳ ಜನರು ತಮ್ಮ ಸಮಸ್ಯೆ ಪರಿಹಾರಕ್ಕೆ ಮನವಿ ಸಲ್ಲಿಸಿದಾಗ ಅಧಿಕಾರಿಗಳು ಶೀಘ್ರ ಪರಿಶೀಲಿಸಿ ಪರಿಹಾರ ಕಲ್ಪಿಸುವಂತೆ ಸೂಚಿಸಿದರು. ಬಹುತೇಕ ಗ್ರಾಮಗಳಲ್ಲಿ ಸ್ಮಶಾನಕ್ಕೆ ಭೂಮಿ ನೀಡುವಂತೆ ಅರ್ಜಿ ಬರುತ್ತಿವೆ. ಕಂದಾಯ ಭೂಮಿ ಲಭ್ಯವಿಲ್ಲದ ಗ್ರಾಮಗಳಲ್ಲಿ ಖಾಸಗಿಯವರಿಂದ ಭೂಮಿ ಖರೀದಿಸಿ ಸ್ಮಶಾನಕ್ಕೆ ಭೂಮಿ ನೀಡುವಂತೆ ತಹಸೀಲ್ದಾರರಿಗೆ ತಿಳಿಸಿದರು.

ಸಿಪಿಐ ಮುಖಂಡ ರೇಣುಕಾರಾಧ್ಯ ಮಾತನಾಡಿ, ಫಾರಂ ನಂಬರ್‌ 53, 53 (ಎ) ಮತ್ತು 94 (ಸಿ)ಯಲ್ಲಿ ಅರ್ಜಿ ಸಲ್ಲಿಸಿದ ದಲಿತರಿಗೆ ಭೂಮಿ ಕೊಡಬೇಕು ಎಂದು ಸರಕಾರ ನಿರ್ಣಯ ಮಾಡಿದ್ದರೂ ಅಧಿಕಾರಿಗಳು ನೀಡಿಲ್ಲ ಎಂದು ದೂರಿದರು. ಡಿಸಿ ಶ್ರೀರಂಗಯ್ಯ ಈ ಬಗ್ಗೆ ಸ್ಪಷ್ಟಪಡಿಸಿ, ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ಬಗ್ಗೆ ಭೂಮಿ ಮಂಜೂರು ಮಾಡಲು ಉಪವಿಭಾಗಾಧಿಕಾರಿಗೆ ತಿಳಿಸಲಾಗಿದೆ. ವಸತಿ ರಹಿತ ಫಲಾನುಭವಿಗಳ ನಿವೇಶನ ಹಂಚಿಕೆಗೆ ಕಂದಾಯ ಭೂಮಿ ಮಂಜೂರು ಮಾಡಿಕೊಡುವ ಬಗ್ಗೆ ಶೃಂಗೇರಿ ತಹಸೀಲ್ದಾರರು ಪ್ರಸ್ತಾವನೆ ಸಲ್ಲಿಸಿದ್ದು, ಈ ಬಗ್ಗೆ ಕ್ರಮ ವಹಿಸಲಾಗುವುದು ಎಂದರು.

ಕಡೂರು ತಾಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ 5 ಲಕ್ಷ ದ ವರೆಗಿನ ಕಾಮಗಾರಿ ನೀಡುತ್ತಿಲ್ಲ. ಸರಕಾರದ ಆದೇಶ ಕಡೆಗಣಿಸಲಾಗಿದೆ ಎಂದು ಸದಸ್ಯರು ದೂರಿದಾಗ ಕಡೂರು ತಾ.ಪಂ. ಇಒಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ನೀರು, ವಿದ್ಯುತ್‌, ರಸ್ತೆ ಸೇರಿದಂತೆ ಸಣ್ಣಪುಟ್ಟ ಸಮಸ್ಯೆಗಳಿದ್ದರೆ ಗ್ರಾಮ ಪಂಚಾಯಿತಿಗಳಿಗೆ ಅರ್ಜಿ ಸಲ್ಲಿಸಿ ಪರಿಹಾರ ಪಡೆದುಕೊಳ್ಳಬೇಕು. ದೊಡ್ಡ ಸಮಸ್ಯೆಗಳಿದ್ದಲ್ಲಿ ಸಮಿತಿ ಮುಂದೆ ಸಲ್ಲಿಸಿ ಪರಿಹಾರ ಪಡೆದುಕೊಳ್ಳುವಂತೆ ಡಿಸಿ ಸೂಚಿಸಿದರು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹರೀಶ್‌ಪಾಂಡೆ, ಜಿ.ಪಂ ಉಪಕಾರ್ಯದರ್ಶಿ ರಾಜಗೋಪಾಲ್‌, ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸಮಿತಿ ಸದಸ್ಯರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ