ಚಿಕ್ಕಮಗಳೂರು: ಕರಾವಳಿ ಜಿಲ್ಲೆಯಲ್ಲಿದ್ದ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಇದೀಗ ಪಕ್ಕದ ಜಿಲ್ಲೆಗಳಿಗೂ ವಿಸ್ತರಿಸಿದೆ. ಚಿಕ್ಕಮಗಳೂರು ನಗರದ ಐಡಿಎಸ್ಜಿ ಕಾಲೇಜಿನಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ತಿಕ್ಕಾಟ ತಾರಕಕ್ಕೇರಿದ್ದು ಇಂದು ಹೊಸ ತಿರುವು ಪಡೆದುಕೊಂಡಿದೆ. ಕೆಲ ವಿದ್ಯಾರ್ಥಿನಿಯರು ಕಾಲೇಜಿಗೆ ಹಿಜಾಬ್ ಧರಿಸಿ ಬರುತ್ತಿರುವುದನ್ನು ವಿರೋಧಿಸಿ ಎಬಿವಿಪಿ ಸಂಘಟನೆಯ ವಿದ್ಯಾರ್ಥಿಗಳು ಕೇಸರಿಶಾಲು ಧರಿಸಿ ಬಂದಿದ್ದರು. ಇದಕ್ಕೆ ಪ್ರತಿಯಾಗಿ ಬಹುಜನ ವಿದ್ಯಾರ್ಥಿ ಪರಿಷತ್ ಸಂಘಟನೆಯ ವಿದ್ಯಾರ್ಥಿಗಳು ನೀಲಿ ಶಾಲು ಧರಿಸಿ ಕಾಲೇಜಿಗೆ ಬಂದಿದ್ದು, ಈ ವೇಳೆ ಎರಡೂ ಸಂಘಟನೆಗಳ ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆದು ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಹಿಜಾಬ್ ವಿರೋಧಿಸಿ ಕೆಲ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದು ಪ್ರತಿಭಟನೆ ನಡೆಸಿದ್ದರು. ಇದಕ್ಕೆ ಪ್ರತಿಯಾಗಿ ಹಿಜಾಬ್ ಧರಿಸಲು ಅವಕಾಶ ನೀಡಬೇಕೆಂದು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದರು.
ಈ ಪ್ರಕರಣ ಇತ್ಯರ್ಥವಾಗದ ಹಿನ್ನೆಲೆಯಲ್ಲಿ ಸೋಮವಾರ ಸಹ ಕೇಸರಿ ಶಾಲು ಧರಿಸಿ ಬಂದ ಎಬಿವಿಪಿ ವಿದ್ಯಾರ್ಥಿಗಳಿಗೆ ಕಾಲೇಜು ಆಡಳಿತ ಮಂಡಳಿ ಪ್ರವೇಶ ನೀಡಲು ನಿರಾಕರಿಸಿದ್ದು, ಈ ವೇಳೆ ವಿದ್ಯಾರ್ಥಿಗಳನ್ನು ಹೊರಗೆ ಕಳುಹಿಸಲಾಗಿತ್ತು. ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದರಿಂದ ಇಕ್ಕಟ್ಟಿಗೆ ಸಿಲುಕಿದ ಕಾಲೇಜು ಆಡಳಿತ ಮಂಡಳಿ ಕೇಸರಿ ಶಾಲು ಧರಿಸಿ ಬರಲು ಒಪ್ಪಿಗೆ ನೀಡಿತ್ತು. ಇದನ್ನು ವಿರೋಧಿಸಿ ಬಹುಜನ ವಿದ್ಯಾರ್ಥಿ ಪರಿಷತ್ ವಿದ್ಯಾರ್ಥಿಗಳು ನೀಲಿ ಶಾಲು ಧರಿಸಿ ಕಾಲೇಜಿಗೆ ಬಂದಿದ್ದಾರೆ. ಅಲ್ಲದೇ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಲು ಅವಕಾಶ ನೀಡಬೇಕೆಂದು ಆಗ್ರಹಿಸಿದ್ದಾರೆ. ಈ ವೇಳೆ ಎರಡೂ ಸಂಘಟನೆಗಳ ನಡುವೆ ವಾಗ್ವಾದ ನಡೆಯಿತು. ಪರಿಸ್ಥಿತಿ ವಿಕೋಪಕ್ಕೆ ತಿರುಗದಂತೆ ತಡೆಯಲು ಪೊಲೀಸರು ಹರಸಾಹಸ ಪಟ್ಟು ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಹೊರಗೆ ಕಳುಹಿಸಿದ್ದು ಬಿಗುವಿನ ವಾತಾವರಣ ಉಂಟಾಗಿದೆ.
ಈ ಪ್ರಕರಣ ಇತ್ಯರ್ಥವಾಗದ ಹಿನ್ನೆಲೆಯಲ್ಲಿ ಸೋಮವಾರ ಸಹ ಕೇಸರಿ ಶಾಲು ಧರಿಸಿ ಬಂದ ಎಬಿವಿಪಿ ವಿದ್ಯಾರ್ಥಿಗಳಿಗೆ ಕಾಲೇಜು ಆಡಳಿತ ಮಂಡಳಿ ಪ್ರವೇಶ ನೀಡಲು ನಿರಾಕರಿಸಿದ್ದು, ಈ ವೇಳೆ ವಿದ್ಯಾರ್ಥಿಗಳನ್ನು ಹೊರಗೆ ಕಳುಹಿಸಲಾಗಿತ್ತು. ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದರಿಂದ ಇಕ್ಕಟ್ಟಿಗೆ ಸಿಲುಕಿದ ಕಾಲೇಜು ಆಡಳಿತ ಮಂಡಳಿ ಕೇಸರಿ ಶಾಲು ಧರಿಸಿ ಬರಲು ಒಪ್ಪಿಗೆ ನೀಡಿತ್ತು. ಇದನ್ನು ವಿರೋಧಿಸಿ ಬಹುಜನ ವಿದ್ಯಾರ್ಥಿ ಪರಿಷತ್ ವಿದ್ಯಾರ್ಥಿಗಳು ನೀಲಿ ಶಾಲು ಧರಿಸಿ ಕಾಲೇಜಿಗೆ ಬಂದಿದ್ದಾರೆ. ಅಲ್ಲದೇ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಲು ಅವಕಾಶ ನೀಡಬೇಕೆಂದು ಆಗ್ರಹಿಸಿದ್ದಾರೆ. ಈ ವೇಳೆ ಎರಡೂ ಸಂಘಟನೆಗಳ ನಡುವೆ ವಾಗ್ವಾದ ನಡೆಯಿತು. ಪರಿಸ್ಥಿತಿ ವಿಕೋಪಕ್ಕೆ ತಿರುಗದಂತೆ ತಡೆಯಲು ಪೊಲೀಸರು ಹರಸಾಹಸ ಪಟ್ಟು ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಹೊರಗೆ ಕಳುಹಿಸಿದ್ದು ಬಿಗುವಿನ ವಾತಾವರಣ ಉಂಟಾಗಿದೆ.