ಆ್ಯಪ್ನಗರ

ಕೋಲಾರದಲ್ಲಿ ಪ್ರಥಮ ದಲಿತ ಸಾಹಿತ್ಯ ಸಮ್ಮೇಳನ: ಮನುಬಳಿಗಾರ್‌

ಕನ್ನಡ ಸಾಹಿತ್ಯ ಪರಿಷತಿನಿಂದ ರಾಜ್ಯ ಮಟ್ಟದ ಮೊದಲ ದಲಿತ ಸಾಹಿತ್ಯ ಸಮ್ಮೇಳನವನ್ನು ಕೋಲಾರದಲ್ಲಿ ನಡೆಸಲಾಗುವುದು ಎಂದು ಕಸಾಪ ರಾಜ್ಯಾಧ್ಯಕ್ಷ ಡಾ.ಮನು ಬಳಿಗಾರ್‌ ಹೇಳಿದರು.

Vijaya Karnataka 4 Mar 2019, 5:00 am
ಚಿಕ್ಕಮಗಳೂರು : ಕನ್ನಡ ಸಾಹಿತ್ಯ ಪರಿಷತಿನಿಂದ ರಾಜ್ಯ ಮಟ್ಟದ ಮೊದಲ ದಲಿತ ಸಾಹಿತ್ಯ ಸಮ್ಮೇಳನವನ್ನು ಕೋಲಾರದಲ್ಲಿ ನಡೆಸಲಾಗುವುದು ಎಂದು ಕಸಾಪ ರಾಜ್ಯಾಧ್ಯಕ್ಷ ಡಾ.ಮನು ಬಳಿಗಾರ್‌ ಹೇಳಿದರು.
Vijaya Karnataka Web CKM-3RUDRAP3


ಸುದ್ದಿಗಾರರೊಂದಿಗೆ ಭಾನುವಾರ ಮಾತನಾಡಿ, ಲೋಕಸಭೆ ಚುನಾವಣೆ ಶೀಘ್ರದಲ್ಲಿಯೇ ನಡೆಯಲಿದ್ದು, ಅದು ಪೂರ್ಣಗೊಂಡ ಬಳಿಕ ದಲಿತ ಸಾಹಿತ್ಯ ಸಮ್ಮೇಳನ ನಡೆಸಲಾಗುವುದು. ದಲಿತ ಸಾಹಿತ್ಯ ಸಂಪುಟವನ್ನು ಸಿದ್ಧಪಡಿಸುವ ಕಾರ್ಯ ಪ್ರಗತಿಯಲ್ಲಿದೆ. ಒಟ್ಟಾರೆ 10 ಸಂಪುಟಗಳನ್ನು ಸಿದ್ಧಪಡಿಸಿದ್ದು, ಶೀಘ್ರದಲ್ಲಿಯೇ 5 ಸಂಪುಟ ಬಿಡುಗಡೆ ಮಾಡಲಾಗುವುದು ಎಂದರು.

ಎರಡು ವರ್ಷಕ್ಕೊಮ್ಮೆ ಮಹಿಳಾ ಸಮ್ಮೇಳನ


ಮೊದಲ ರಾಜ್ಯಮಟ್ಟದ ಮಹಿಳಾ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಶನಿವಾರ ಮಾತನಾಡಿದ ಹಲವರು, ಪ್ರತಿ ವರ್ಷ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಸುವಂತೆ ಒತ್ತಾಯಿಸಿದ್ದರು. ಆದರೆ, ಇಂದು ನಡೆದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ತಾವು 2 ವರ್ಷಕ್ಕೊಮ್ಮೆ ರಾಜ್ಯ ಮಟ್ಟದ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಸುವ ಪ್ರಸ್ತಾವನೆ ಮುಂದಿಟ್ಟಿದ್ದು, ಅದಕ್ಕೆ ಸರ್ವಾನುಮತದ ಒಪ್ಪಿಗೆ ದೊರೆತಿದೆ ಎಂದರು.

ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ರಾಗಿ ತಾವು ಮಾಡಿರುವ ಕೆಲಸ ತಮಗೆ ತೃಪ್ತಿ ತಂದಿದೆ. ಮಾಡುವ ಕೆಲಸ ಇನ್ನೂ ಬೇಕಾದಷ್ಟಿದೆ. ಕಸಾಪ ಆರಂಭವಾದಾಗಿನಿಂದಲೂ ಮಾಡಲು ಸಾಧ್ಯವಾಗದಿದ್ದ 10 ಕೆಲಸಗಳನ್ನು ಈಗ ಮಾಡಲಾಗಿದೆ ಎಂದರು.

ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ದೊರೆತು 10 ವರ್ಷ ಆಗಿದ್ದರೂ ಅದು ಸಮರ್ಪಕವಾಗಿರಲಿಲ್ಲ. ತಾವು ಅಧ್ಯಕ್ಷ ರಾದ ನಂತರ 12 ಜಿಲ್ಲೆಯಲ್ಲಿ ಕಮ್ಮಟ ಮಾಡಲಾಗಿದೆ. ಹಳಗನ್ನಡ ಸಾಹಿತ್ಯ ಸಮ್ಮೇಳನ ನಡೆಸಲಾಯಿತು. ಮುಂಬಯಿ ಮತ್ತು ದಿಲ್ಲಿಯಲ್ಲಿ ಹೊರನಾಡು ಕನ್ನಡಿಗರ ಸಮ್ಮೇಳನ ನಡೆಸಲಾಯಿತು. ಬೆಹರೈನ್‌ನಲ್ಲಿ ಹೊರದೇಶದ ಕನ್ನಡಿಗರ ಸಮ್ಮೇಳನ ನಡೆಸಲಾಗಿದೆ. ರಾಜ್ಯದ 12 ಜಿಲ್ಲೆಗಳಲ್ಲಿ ಕೃಷಿ ಸಾಹಿತ್ಯ ಸಮ್ಮೇಳನವನ್ನು ನಡೆಸಲಾಗಿದೆ ಎಂದು ಹೇಳಿದರು.

ಚಿಕ್ಕಮಗಳೂರಿನಲ್ಲಿ ಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ. ಜಿಲ್ಲೆಯಲ್ಲಿ ಅಖಿಲ ಭಾರತ ಸಾಹಿತ್ಯ ಸಮ್ಮೇಳನವನ್ನು ನಡೆಸಲು ಮುಂದಾಗಿದ್ದರು. ಅದನ್ನು ಇಲ್ಲಿಗೆ ಕೊಡಲು ಸಾಧ್ಯವಾಗಿರಲಿಲ್ಲ. ಹಾಗಾಗಿ ಮಹಿಳಾ ಸಾಹಿತ್ಯ ಸಮ್ಮೇಳನವನ್ನು ಇಲ್ಲಿಗೆ ನೀಡಲಾಯಿತು. ಸಮ್ಮೇಳನವು ಅತ್ಯಂತ ಯಶಸ್ವಿಯಾಗಿ ನಡೆದಿದೆ. ಇದಕ್ಕಾಗಿ ಜಿಲ್ಲಾ ಕಸಾಪಕ್ಕೆ ಹಾಗೂ ಜಿಲ್ಲೆಯ ಜನತೆಗೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಕುಂದೂರು ಅಶೋಕ್‌ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ