ಚಿಕ್ಕಮಗಳೂರು: ಕರ್ನಾಟಕ ಪ್ರಜ್ಞಾವಂತರ ಜನತಾ ಪಾರ್ಟಿಯಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಆರಂಭವಾಗಿದ್ದು, ಮುಂಬರುವ ಚುನಾವಣೆಯಲ್ಲಿ ನಮ್ಮ ಪಕ್ಷದಿಂದ ಜಿಲ್ಲೆಯಲ್ಲಿ ಸ್ಪರ್ಧೆಬಯಸುವ ಅಭ್ಯರ್ಥಿಗಳಿಗೆ ಮುಕ್ತ ಆಹ್ವಾನ ನೀಡಲಾಗಿದೆ ಎಂದು ರಾಷ್ಟ್ರೀಯ ಉಪಾಧ್ಯಕ್ಷ ಕೆ.ಎಸ್.ಗಿರೀಶ್ ಕುಮಾರ್ ಹೇಳಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪಕ್ಷದ ಸಂಸ್ಥಾಪಕ ಅಧ್ಯಕ್ಷ ಮಹೇಶ್ಗೌಡ ಮತ್ತು ರಾಷ್ಟ್ರೀಯ ಅಧ್ಯಕ್ಷ , ನಟ ಉಪೇಂದ್ರ ಅವರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ನಡೆಯುತ್ತಿದೆ. ಈಗಾಗಲೇ ಎರಡು ತಂಡದಿಂದ ರಾಜ್ಯ ಪ್ರವಾಸ ಕೈಗೊಂಡಿದ್ದು ಸಮರ್ಥ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಸದೃಢ, ಸಮೃದ್ಧ ಕರ್ನಾಟಕ ನಿರ್ಮಾಣ ಮತ್ತು ಪಾರದರ್ಶಕ ಆಡಳಿತ ನೀಡಲು ನಮ್ಮ ಪಕ್ಷ ಕಟಿಬದ್ಧವಾಗಿದೆ. ಮುಂದಿನ ಚುನಾವಣೆಯಲ್ಲಿ ನಮ್ಮ ಪಕ್ಷದಿಂದ ಸ್ಪರ್ಧೆ ಬಯಸುವ ಆಕಾಂಕ್ಷಿಗಳಿಗೆ ಮುಕ್ತ ಆಹ್ವಾನ ನೀಡಲಾಗುತ್ತಿದೆ. ಪಕ್ಷದ ಹಿರಿಯ ಮುಖಂಡರನ್ನು ಸಂಪರ್ಕಿಸಬಹುದು ಎಂದು ಹೇಳಿದರು.
ಅಭ್ಯರ್ಥಿಯಾಗುವವರು ಕ್ಷೇತ್ರದ ಭೌಗೋಳಿಕ ಹಿನ್ನೆಲೆ, ಜನರ ಒಡನಾಟ ಹೊಂದಿದ್ದು ಜನಸಾಮಾನ್ಯರ ಸಮಸ್ಯೆ ಅರಿತವರಾಗಿರಬೇಕು ಎಂಬುದು ನಮ್ಮ ಮಾನದಂಡ. ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಈವರೆಗೂ ಯಾವುದೇ ಅಭ್ಯರ್ಥಿ ಆಯ್ಕೆ ಪಟ್ಟಿ ಅಂತಿಮಗೊಂಡಿಲ್ಲ. ಪಕ್ಷದ ಪ್ರಣಾಳಿಕೆ ಸಿದ್ಧತೆ ಅಂತಿಮ ಹಂತದಲ್ಲಿದೆ. ಎಲ್ಲ ಕ್ಷೇತ್ರದ ಜನರಿಂದ ಸೂಕ್ತ ಸಲಹೆ, ಅಭಿಪ್ರಾಯ ಪಡೆದುಕೊಂಡಿದ್ದೇವೆ. ನಮ್ಮ ಪಕ್ಷ ಯಾವುದೇ ಪಕ್ಷದೊಂದಿಗೆ ಚುನಾವಣೆಯಲ್ಲಿ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಪಕ್ಷದ ರಾಜ್ಯ ಕಾರ್ಯದರ್ಶಿ ಗಜೇಂದ್ರಶರ್ಮ, ರಾಜ್ಯ ಉಪಾಧ್ಯಕ್ಷ ಆರ್.ಶಿವಕುಮಾರ್, ಸಾರ್ವಜನಿಕ ಸಂಪರ್ಕಾಧಿಕಾರಿ ತಟ್ಟೇಕೆರೆ ಮಲ್ಲೇಶ್, ಮುಖಂಡರಾದ ಸಂಜಯ್ಶರ್ಮ, ಅಕ್ಷಯ್ ಹಾಜರಿದ್ದರು.