ಚಿಕ್ಕಮಗಳೂರು: ಸರಕಾರ ಅಲ್ಪಸಂಖ್ಯಾತರಿಗೆ ನೀಡಿರುವ ಅನುದಾನವನ್ನು ಜಿಲ್ಲೆಯ ಅರ್ಹ ಫಲಾನುಭವಿಗಳಿಗೆ ಒದಗಿಸಲು ಅಧಿಕಾರಿಗಳು ಶ್ರಮವಹಿಸಬೇಕು ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜ ಹೇಳಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಕ್ರಿಶ್ಚಿಯನ್ ಅಭಿವೃದ್ಧಿ ಕೌನ್ಸಿಲ್ನಿಂದ ಆಯೋಜಿಸಿದ್ದ ಯೋಜನೆಗಳ ಅನುಷ್ಠಾನ ಮತ್ತು ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
2018-19ನೇ ಸಾಲಿನಲ್ಲಿ ಜಿಲ್ಲೆಗೆ ಬಿದಾಯಿ ಯೋಜನೆಯಡಿ 43 ಫಲಾನುಭವಿಗಳಿಗೆ 21.5 ಲಕ್ಷ ಅನುದಾನ ನೀಡಿದ್ದು, ಗುರಿ ಸಾಧಿಸಲಾಗಿದೆ. ವಿದ್ಯಾಸಿರಿ ಯೋಜನೆಯಡಿ 17 ವಿದ್ಯಾರ್ಥಿಗಳಿಗೆ 2.55 ಲಕ್ಷ ಅನುದಾನ ನೀಡಲಾಗಿದೆ. ಪಶು ಸಂಗೋಪನಾ ಸಾಲ ಯೋಜನೆಯಡಿ ಮಹಿಳೆಯರಿಗೆ 40 ಸಾವಿರ ಸಾಲ ನೀಡಲಾಗುವುದು. ಇದರಲ್ಲಿ 20 ಸಾವಿರ ಸಬ್ಸಿಡಿ ನೀಡಲಾಗುತ್ತಿದೆ. ಇದಕ್ಕಾಗಿ 22 ಫಲಾನುಭವಿಗಳಿಗೆ 8.80 ಲಕ್ಷ ವೆಚ್ಚ ಮಾಡಲಾಗಿದೆ ಎಂದರು.
ಜಿಲ್ಲೆಯಲ್ಲಿ ಚರ್ಚ್ಗಳ ನವೀಕರಣ, ಕ್ರೈಸ್ತ ಸಮುದಾಯ ಭವನಗಳನ್ನು ನಿರ್ಮಿಸಲು 6.5 ಕೋಟಿ ಬಿಡುಗಡೆ ಮಾಡಲಾಗಿದೆ. ಬಡ ವಿದ್ಯಾರ್ಥಿಗಳು ತಮ್ಮ ಜೀವನ ರೂಪಿಸಿಕೊಳ್ಳಲು ಅನುಕೂಲವಾಗುವಂತೆ ವಿದ್ಯಾಸಿರಿ ಯೋಜನೆಯಡಿ 17 ವಿದ್ಯಾರ್ಥಿಗಳಿಗೆ, ಅರಿವು ಯೋಜನೆಯಡಿ 57 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಲಾಗಿದೆ. 18 ಮಂದಿಗೆ ಸ್ವ ಉದ್ಯೋಗಕ್ಕೆ ಅವಕಾಶ ನೀಡಲಾಗಿದೆ ಎಂದು ಹೇಳಿದರು.
ಜಿ.ಪಂ. ಉಪ ಕಾರ್ಯದರ್ಶಿ ರಾಜಗೋಪಾಲ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಎಂ.ಎಲ್.ಬಿಂದುಮಣಿ, ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿ ತಿಪ್ಪೇಸ್ವಾಮಿ ಹಾಜರಿದ್ದರು.