ಆ್ಯಪ್ನಗರ

ಮೊದಲ ಹಂತಕ್ಕೆ ತಲಾ 50 ಸಾವಿರ ರೂ. ಸಾಲ ಮನ್ನಾ: ಸಿಎಂ

ಚುನಾವಣೆಗೂ ಮುನ್ನ ನೀಡಿದ ಭರವಸೆಯಂತೆ ರಾಜ್ಯದ ರೈತರ ಸಾಲ ಮನ್ನಾ ಮಾಡಲು ಸರಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಪುನರುಚ್ಛರಿಸಿದರು.

Vijaya Karnataka 7 Dec 2018, 10:31 pm
ಶೃಂಗೇರಿ (ಚಿಕ್ಕಮಗಳೂರು) : ಚುನಾವಣೆಗೂ ಮುನ್ನ ನೀಡಿದ ಭರವಸೆಯಂತೆ ರಾಜ್ಯದ ರೈತರ ಸಾಲ ಮನ್ನಾ ಮಾಡಲು ಸರಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಪುನರುಚ್ಛರಿಸಿದರು.
Vijaya Karnataka Web rs 50000 per first phase debt waiver cm
ಮೊದಲ ಹಂತಕ್ಕೆ ತಲಾ 50 ಸಾವಿರ ರೂ. ಸಾಲ ಮನ್ನಾ: ಸಿಎಂ


ಪಟ್ಟಣದ ಗೌರಿಶಂಕರ್‌ ಸಭಾಂಗಣದಲ್ಲಿ ಗುರುವಾರ ವಿವಿಧ ಕಾಮಾಗಾರಿಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಇಂದು ಬೆಂಗಳೂರಿನಲ್ಲಿ ರೈತರೊಂದಿಗೆ ಸುದೀರ್ಘ ಸಭೆ ನಡೆಸಿದ್ದು, ಸಾಲ ಮನ್ನಾ ಮಾಡುವ ಯೋಜನೆಯನ್ನು ಹಂತಹಂತವಾಗಿ ಜಾರಿಗೊಳಿಸಲಾಗುತ್ತದೆ. ಡಿ.8ರಂದು ದೊಡ್ಡಬಳ್ಳಾಪುರ ಹಾಗೂ ಸೇಡಂ ತಾಲೂಕಿನಲ್ಲಿ ಯೋಜನೆ ಜಾರಿಗೊಳ್ಳಲಿದೆ. ವಾಣಿಜ್ಯ ಬ್ಯಾಂಕಿನಲ್ಲಿ ಇರುವ ಸಾಲದ ದಾಖಲೆಗಳನ್ನು ಸಂಗ್ರಹಿಸಲಾಗಿದ್ದು, ಮೊದಲ ಕಂತಾಗಿ ರೈತರಿಗೆ 50 ಸಾವಿರ ರೂ. ಅವರ ಖಾತೆಗೆ ಜಮಾ ಮಾಡಿ, ಸಾಲ ಮನ್ನಾದ ದಾಖಲೆ ಪತ್ರವನ್ನು ರೈತರ ಮನೆ ಬಾಗಿಲಿಗೆ ತಲುಪಿಸಲಾಗುತ್ತದೆ. ಮುಂದಿನ ಬಜೆಟ್‌ನಲ್ಲಿ ಉಳಿದ ಸಾಲದ ಕಂತು ಜಮಾ ಮಾಡಲಾಗುತ್ತದೆ. ಇದರಿಂದ 45 ಸಾವಿರ ಕೋಟಿ ರೂ.ಗಳ ಸಾಲ ಮನ್ನಾ ಯೋಜನೆಯಿಂದ 21 ಲಕ್ಷ ರೈತರಿಗೆ ಅನುಕೂಲವಾಗಲಿದೆ ಎಂದರು.

ಪಿಕಾರ್ಡ್‌ ಬ್ಯಾಂಕಿನಲ್ಲಿರುವ ರೈತರ ಸಾಲದ ಬಡ್ಡಿ ಮನ್ನಾ ಮಾಡಲಾಗುತ್ತದೆ. ಕಷ್ಟಪಟ್ಟು ಜೀವನ ನಡೆಸುತ್ತಿರುವ ಬೀದಿ ಬದಿ ವ್ಯಾಪಾರಿಗಳಿಗೆ ಬಡವರ ಬಂಧು ಯೋಜನೆಯಡಿ ಹತ್ತು ಸಾವಿರ ರೂ. ಬಡ್ಡಿ ರಹಿತ ಸಾಲ, ಸ್ವಸಹಾಯ ಸಂಘ, ಸ್ತ್ರೀಶಕ್ತಿ ಸಂಘಗಳ ಸದಸ್ಯರ ಸಬಲಿಕರಣಕ್ಕಾಗಿ ಸುಲಭ ಸಾಲ ನೀಡಲಾಗುವುದು. ಶಾಲೆ ಕಟ್ಟಡಗಳ ದುರಸ್ತಿಗಾಗಿ 1200 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಮಲೆನಾಡಿನಲ್ಲಿ ಕಾಲುಸಂಕದಿಂದ ಉಂಟಾಗುತ್ತಿರುವ ಅವಘಡ ತಪ್ಪಿಸಲು ಶಾಶ್ವತ ಯೋಜನೆಗೆ ಚಾಲನೆ ನೀಡಲಾಗುತ್ತದೆ ಎಂದರು.

ಶಾಸಕ ಟಿ.ಡಿ.ರಾಜೇಗೌಡ ಅಧ್ಯಕ್ಷ ತೆ ವಹಿಸಿದ್ದರು. ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್‌, ವಿಧಾನ ಪರಿಷತ್‌ ಸದಸ್ಯರಾದ ಎಸ್‌.ಎಲ್‌.ಬೋಜೇಗೌಡ, ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಎಸ್‌.ಎಲ್‌.ಧರ್ಮೇಗೌಡ, ಜಿಲ್ಲಾಧಿಕಾರಿ ಡಾ.ಶ್ರೀರಂಗಯ್ಯ ಮತ್ತಿತರರು ಇದ್ದರು.

ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಯವರು 50 ಕೋಟಿ ರೂ.ಗೂ ಅಧಿಕ ವೆಚ್ಚದ ಲೋಕೋಪಯೋಗಿ ಇಲಾಖೆಯ ರಸ್ತೆ ಕಾಮಾಗಾರಿಗೆ ಶಂಕುಸ್ಥಾಪನೆ ಮಾಡಿದರು.

ಇಂದಿರಾ ಕ್ಯಾಂಟೀನ್‌ ಉದ್ಘಾಟನೆ
ಕಾರ್ಯಕ್ರಮಕ್ಕೂ ಮೊದಲು ಪಟ್ಟಣದ ಶಾರದಾನಗರದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಇಂದಿರಾ ಕ್ಯಾಂಟೀನ್‌ ಉದ್ಘಾಟಿಸಿದರು. ಇದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಂದ ಉದ್ಘಾಟನೆಗೊಳ್ಳುತ್ತಿರುವ ರಾಜ್ಯದ ಮೊದಲ ಇಂದಿರಾ ಕ್ಯಾಂಟೀನ್‌ ಆಗಿರುವುದು ವಿಶೇಷ. ಉದ್ಘಾಟನೆ ಬಳಿಕ ಸಿಎಂ ಮತ್ತು ವಿವಿಧ ಮುಖಂಡರು ಕೇಸರಿಬಾತ್‌, ಉಪ್ಪಿಟ್ಟು ಸವಿದರು. ಕೇಸರಿಬಾತ್‌ ಚೆನ್ನಾಗಿದೆ ಎಂದು ಸಿಎಂ ಪ್ರಶಂಸೆ ವ್ಯಕ್ತಪಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ