ಆ್ಯಪ್ನಗರ

ಬಾಲಕಿ ಮೇಲೆ ಲೈಂಗಿಕ ಕಿರುಕುಳ: ಶಿಕ್ಷೆ

ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಅಪ್ರಾಪ್ತರಿಗೆ ಲೈಂಗಿಕ ಕಿರುಕುಳ ನೀಡಿದವರಿಗೆ ತಲಾ 5 ವರ್ಷ ಮತ್ತು 3 ವರ್ಷ ಜೈಲು ಶಿಕ್ಷೆ ವಿಧಿಸಿ ಮಕ್ಕಳ ಸ್ನೇಹಿ ...

Vijaya Karnataka 1 May 2018, 5:00 am
ಬೆಂಗಳೂರು: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಅಪ್ರಾಪ್ತರಿಗೆ ಲೈಂಗಿಕ ಕಿರುಕುಳ ನೀಡಿದವರಿಗೆ ತಲಾ 5 ವರ್ಷ ಮತ್ತು 3 ವರ್ಷ ಜೈಲು ಶಿಕ್ಷೆ ವಿಧಿಸಿ ಮಕ್ಕಳ ಸ್ನೇಹಿ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.
Vijaya Karnataka Web sexual harassment on girl punishment
ಬಾಲಕಿ ಮೇಲೆ ಲೈಂಗಿಕ ಕಿರುಕುಳ: ಶಿಕ್ಷೆ


ಮೂರು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಶಿವಮಾದಪ್ಪ ಶಿವಣ್ಣ (55) ಎಂಬಾತನಿಗೆ ಐದು ವರ್ಷ ಜೈಲು ಶಿಕ್ಷೆ ವಿಧಿಸಿ ಮಕ್ಕಳ ಸ್ನೇಹಿ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ಕೂಲಿ ಕೆಲಸ ಮಾಡುತ್ತಿದ್ದ ಶಿವಮಾದಪ್ಪ, 2016ರ ಜ.16ರಂದು ಇಬ್ಬಲೂರಿನಲ್ಲಿ ನೆರೆ ಮನೆಯಲ್ಲಿ ಪಾಲಕರೊಂದಿಗೆ ನೆಲೆಸಿದ್ದ 3 ವರ್ಷದ ಬಾಲಕಿಗೆ ತಿಂಡಿ ಕೊಡಿಸುವುದಾಗಿ ಪುಸಲಾಯಿಸಿ ಮಿಲಿಟರಿ ಕ್ಯಾಂಪ್‌ನ ಒಳಗೆ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿ ಹಲ್ಲೆ ನಡೆಸಿದ್ದ.

ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕಿ ಅರ್ಧ ಗಂಟೆಯಾದರೂ ಕಾಣಿಸದ ಕಾರಣ ಆಕೆಯ ಪಾಲಕರು ಹುಡುಕಾಟ ನಡೆಸುತ್ತಿದ್ದರು. ಇದೇ ವೇಳೆ ಬಾಲಕಿಗೆ ಶಿವಮಾದಪ್ಪ ಲೈಂಗಿಕ ಕಿರುಕುಳ ನೀಡುತ್ತಿರುವುದನ್ನು ಇಬ್ಬಲೂರು ಮಿಲಿಟರಿ ಕ್ಯಾಂಪ್‌ ಕಡೆ ಹೋಗಿದ್ದ ವ್ಯಕ್ತಿಯೊಬ್ಬರು ಗಮನಿಸಿ ಬಾಲಕಿಯನ್ನು ಆತನಿಂದ ರಕ್ಷಿಸಿ ತರಾಟೆಗೆ ತೆಗೆದುಕೊಂಡು ಪಾಲಕರಿಗೆ ಮಾಹಿತಿ ನೀಡಿದ್ದರು. ಬಳಿಕ ಪಾಲಕರು ನೀಡಿದ ಮಾಹಿತಿ ಆಧರಿಸಿ ಎಚ್‌ಎಸ್‌ಆರ್‌ ಲೇಔಟ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯನ್ನು ಬಂಧಿಸಿದ್ದ ಪೊಲೀಸರು, ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿವಮಾದಪ್ಪನಿಗೆ 5 ವರ್ಷ ಜೈಲು ಹಾಗೂ 5 ಸಾವಿರ ರೂ. ದಂಡ ವಿಧಿಸಿ ನ್ಯಾಯಾಧೀಶರಾದ ವನಮಾಲಾ ಯಾದವ್‌ ತೀರ್ಪು ನೀಡಿದ್ದಾರೆ. ಸಂತ್ರಸ್ತ ಬಾಲಕಿಗೆ ವಿಶೇಷ ನಿಧಿಯಿಂದ 1 ಲಕ್ಷ ರೂ. ಪರಿಹಾರಕ್ಕೆ ಸರಕಾರಕ್ಕೆ ಆದೇಶಿಸಲಾಗಿದೆ ಎಂದು ಪ್ರಕರಣದಲ್ಲಿ ವಾದ ಮಂಡಿಸಿದ್ದ ಸರಕಾರಿ ಅಭಿಯೋಜಕ ಎಸ್‌.ಎನ್‌ ಹಿರೇಮನಿ ತಿಳಿಸಿದರು.

ಚಿಕ್ಕಪ್ಪನಿಂದ ದೌರ್ಜನ್ಯ

ಹುಳಿಮಾವು ಠಾಣೆ ವ್ಯಾಪ್ತಿಯಲ್ಲಿ 16 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಸಿದ್ದಲಿಂಗಯ್ಯ ಎಂಬಾತನಿಗೆ 3 ವರ್ಷ ಜೈಲು ಶಿಕ್ಷೆ ಮತ್ತು 3 ಸಾವಿರ ದಂಡ ವಿಧಿಸಿ ಮಕ್ಕಳ ಸ್ನೇಹಿ ನ್ಯಾಯಾಲಯ ತೀರ್ಪು ನೀಡಿದೆ.

ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಸಿದ್ದಲಿಂಗಯ್ಯನ ಸಹೋದರ ನಿಧನರಾಗಿದ್ದರು. ಸಹೋದರನ ಪತ್ನಿ ಮತ್ತು ಮಗಳನ್ನು ತಾನು ಕೆಲಸ ಮಾಡುತ್ತಿದ್ದ ಕಚೇರಿಯಲ್ಲೇ ಸಿದ್ದಲಿಂಗಯ್ಯ ಕೆಲಸಕ್ಕೆ ಸೇರಿಸಿಕೊಂಡಿದ್ದ. ಜ.8, 2015ರಂದು ತಾಯಿಯನ್ನು ಕೆಲಸದ ಮೇಲೆ ಹೊರ ಕಳುಹಿಸಿ, ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ವಿಷಯವನ್ನು ತಾಯಿ ಬಳಿ ಬಾಲಕಿ ಹೇಳಿಕೊಂಡಿದ್ದಳು. ಬಳಿಕ ಹುಳಿಮಾವು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ತನಿಖೆ ಪೂರ್ಣಗೊಳಿಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ಮುಗಿದು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಸಿದ್ದಲಿಂಗಯ್ಯನಿಗೆ 3 ವರ್ಷ ಜೈಲು ಹಾಗೂ 3 ಸಾವಿರ ರೂ. ದಂಡ ವಿಧಿಸಿ ನ್ಯಾಯಾಧೀಶರಾದ ವನಮಾಲಾ ಯಾದವ್‌ ತೀರ್ಪು ನೀಡಿದ್ದಾರೆ. ಪ್ರಕರಣದಲ್ಲಿ ಸರಕಾರಿ ಅಭಿಯೋಜಕರಾಗಿ ಎಸ್‌.ಎನ್‌ ಹಿರೇಮನಿ ವಾದ ಮಂಡಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ