ನವಲಗುಂದ :ಕಳಸಾ ಬಂಡೂರಿ ಹಾಗೂ ಮಹದಾಯಿ ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ಪಕ್ಷಾತೀತ ರೈತ ಹೋರಾಟ ಸಮಿತಿ ನೇತೃತ್ವದಲ್ಲಿ ಹೋರಾಟಗಾರರು ಮಂಗಳವಾರ ಇಲ್ಲಿನ ತಾಲೂಕು ಪಂಚಾಯಿತಿ ಆವರಣದಲ್ಲಿರುವ ಶಾಸಕ ಎನ್.ಎಚ್. ಕೋನರಡ್ಡಿ ಅವರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ನಿರಂತರ ಧರಣಿ 275ನೇ ದಿನಕ್ಕೆ ಕಾಲಿಟ್ಟ ಸಂದರ್ಭ ಹೋರಾಟದ ಮುಂದಿನ ಭಾಗವಾಗಿ ರೈತರು ಜನಪ್ರತಿನಿಧಿಗಳ ಕಚೇರಿಗಳಿಗೆ ಮುತ್ತಿಗೆ ಹಾಕಿ ಪ್ರತಿಭಟಿಸುತ್ತಿದ್ದಾರೆ. ಶಾಸಕರ ಕಾರ್ಯಾಲಯದ ಗೇಟ್ಗೆ ಮುಳ್ಳಿನ ಕಂಟಿಗಳನ್ನು ಹಾಕಿ ಘೋಷಣೆ ಕೂಗಿದರು.
ಮುಖಕ್ಕೆ ಮಸಿ, ಎಚ್ಚರಿಕೆ:
ಈ ಸಂದರ್ಭ ಮಾತನಾಡಿದ ಹೋರಾಟ ಸಮಿತಿ ಅಧ್ಯಕ್ಷ ಲೋಕನಾಥ ಹೆಬಸೂರ, ''ಮಲಪ್ರಭಾ ಅಚ್ಚುಕಟ್ಟು ಪ್ರದೇಶದ ಎಲ್ಲ ಜನಪ್ರತಿನಿಧಿಧಿಗಳು ರಾಜಕೀಯ ಬದಿಗಿಟ್ಟು ಒಗ್ಗಟ್ಟಾಗಿ ಪ್ರಧಾನಿ ಮಧ್ಯಸ್ಥಿಕೆಗೆ ಒತ್ತಾಯಿಸಬೇಕು. ಇಲ್ಲದಿದ್ದರೆ ಅವರ ಮುಖಕ್ಕೆ ಮಸಿ ಬಳಿಯುತ್ತೇವೆ'' ಎಂದು ಎಚ್ಚರಿಕೆ ನೀಡಿದರು.
''ಹೋರಾಟ ನಡೆದು 6 ತಿಂಗಳಾದರೂ ರಾಜ್ಯದ ಸಂಸದರು ಪ್ರಧಾನಿ ಮಧ್ಯಸ್ಥಿಕೆಯಲ್ಲಿ ನ್ಯಾಯಾಧಿಧಿಕರಣ ಹೊರಗೆ ಮಹದಾಯಿ ಪ್ರಕರಣ ಇತ್ಯರ್ಥಪಡಿಸಲು ಪ್ರಯತ್ನಿಸದಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ'' ಎಂದು ಕಿಡಿಕಾರಿದರು.
''ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಮ್ಮೆ ಪ್ರಧಾನಿ ಬಳಿ ನಿಯೋಗ ಕೊಂಡೊಯ್ಯುವುದಾಗಿ ಭರವಸೆ ನೀಡಿದ್ದಾರೆ. ಈ ಸಂದರ್ಭದಲ್ಲಾದರೂ ಎಲ್ಲ ರಾಜಕೀಯ ನಾಯಕರು ಒಗ್ಗಟ್ಟಾಗಿ ಪ್ರಧಾನಿ ಮನವೊಲಿಸುವ ಪ್ರಯತ್ನ ಮಾಡಲಿ. ಅಲ್ಲಿಯವರೆಗೆ ಮಲಪ್ರಭಾ ಅಚ್ಚುಕಟ್ಟು ಪ್ರದೇಶದ ಎಲ್ಲ ಚುನಾಯಿತ ಪ್ರತಿನಿಧಿಧಿಗಳ ಕಚೇರಿಗಳಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಗುವುದು'' ಎಂದರು.
ಈ ಸಂದರ್ಭ ರೈತರಿಂದ ಮನವಿ ಸ್ವೀಕರಿಸಿ ಮಾತನಾಡಿದ ಶಾಸಕ ಕೋನರಡ್ಡಿ, ''ರೈತರಿಗೆ ಮಹದಾಯಿ ನೀರು ದೊರಕಿಸಿಕೊಡಲು ಅಧಿವೇಶನದಲ್ಲಿ ಸಾಕಷ್ಟು ಬಾರಿ ಹೋರಾಟ ಮಾಡಿದ್ದೇನೆ. ಆದರೂ ನನ್ನ ಕಚೇರಿಗೆ ಮುತ್ತಿಗೆ ಹಾಕಿರುವುದು ಮುಜುಗರ ತಂದಿದೆ. ರೈತರ ಕೂಗು ಪ್ರಧಾನಿ ಅವರಿಗೆ ಕೇಳಿಸದಿರುವುದು ದುರದೃಷ್ಟಕರ'' ಎಂದು ಹೇಳಿದರು.