ಅರಸೀಕೆರೆ: ಕಾವೇರಿ ತೀರ್ಪು ಪುನರ್ ಪರಿಶೀಲನೆ ಆಗಲಿ
ವಿಕ ಸುದ್ದಿಲೋಕ, ಅರಸೀಕೆರೆ ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ 2008ರಲ್ಲಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪು ರಾಜ್ಯದ ಪಾಲಿಗೆ ಮರಣ ಶಾಸನವಾಗಿದ್ದು, ಈ ...
ವಿಕ ಸುದ್ದಿಲೋಕ, ಅರಸೀಕೆರೆ
ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ 2008ರಲ್ಲಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪು ರಾಜ್ಯದ ಪಾಲಿಗೆ ಮರಣ ಶಾಸನವಾಗಿದ್ದು, ಈ ತೀರ್ಪನ್ನು ನ್ಯಾಯಾಲಯ ಪುನರ್ ಪರಿಶೀಲಿಸಿ ರಾಜ್ಯದ ಜನತೆಗೆ ನ್ಯಾಯ ಒದಗಿಸದ ಹೊರತು ಕಾವೇರಿ ನದಿ ನೀರಿಗೆ ಸಂಬಂಧಿಸಿದಂತೆ ಕನ್ನಡಿಗರು ಹಾಗೂ ತಮಿಳರ ನಡುವೆ ಹಗೆತನ ಬೆಳೆಯಲಿದೆ ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ಅಭಿಪ್ರಾಯ ಪಟ್ಟರು.
''ಪ್ರತಿ ಮಾಹೆ ಇಂತಿಷ್ಟು ಪ್ರಮಾಣದಲ್ಲಿ ತಮಿಳುನಾಡಿಗೆ ನೀರು ಬಿಡಬೇಕೆಂದು ಸುಪ್ರೀಂಕೋರ್ಟ್ ತನ್ನ ತೀರ್ಪಿನಲ್ಲಿ ಸೂಚಿಸಿದೆ. ಆದರೆ, ವರ್ಷದ ಆರು ತಿಂಗಳು ಕಾವೇರಿ ತೀರದ ರೈತರಿಗೆ ಬೆಳೆ ಬೆಳೆಯಲು ನೀರು ಪೂರೈಸುವುದಿರಲಿ ಮೈಸೂರು-ಬೆಂಗಳೂರು ಸೇರಿದಂತೆ ಬಹುತೇಕ ನಗರದ ಜನತೆಗೆ ಕುಡಿಯುವ ನೀರು ಪೂರೈಸಲು ಸಾಧ್ಯವಾಗದ ಅನಿವಾರ್ಯತೆ ಕೆಲವೊಮ್ಮೆ ನಿರ್ಮಾಣವಾಗುತ್ತದೆ. ಇಂತಹ ವಾಸ್ತವ ಸತ್ಯವನ್ನು ಅರಿತು ನ್ಯಾಯಾಲಯ 2008ರ ತನ್ನ ತೀರ್ಪ ಅನ್ನು ಪುನರ್ಪರಿಶೀಲಿಸಬೇಕು'' ಎಂದು ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.
''ನಮ್ಮನ್ನಾಳುತ್ತ ಬಂದಿರುವ ಕೇಂದ್ರ ಸರಕಾರಗಳು ಕೂಡ ತಮ್ಮ ಸ್ವಾರ್ಥ ರಾಜಕಾರಣಕ್ಕಾಗಿ ತಮಿಳುನಾಡನ್ನು ಒಲೈಸಿಕೊಳ್ಳಲು ಕಾವೇರಿ ನದಿ ನೀರಿನ ಹಂಚಿಕೆ ವಿಷಯದಲ್ಲಿ ಕಣ್ಮುಚ್ಚಿ ಕುಳಿತುಕೊಳ್ಳುವ ಮೂಲಕ ಪರೋಕ್ಷ ವಾಗಿ ತಮಿಳುನಾಡಿಗೆ ಕಾವೇರಿ ನದಿ ನೀರನ್ನು ಹರಿಸಲು ಸಹಕರಿಸುತ್ತಿವೆ. ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಕಾವೇರಿ ನದಿ ನೀರು ಉಳಿಸಿಕೊಳ್ಳಲು ರಾಜ್ಯದ ಉದ್ದಗಲಕ್ಕೂ ಪ್ರತಿಭಟನೆ ನಡೆಯುತ್ತಿದ್ದು, ಇದೀಗ ಹಿಂಸಾತ್ಮಾಕ ರೂಪಕ್ಕೆ ತಿರುಗಿದ್ದು, ಪ್ರಧಾನಿ ಮಂತ್ರಿ ಮೋದಿಯವರು ಕೂಡಲೇ ಮಧ್ಯೆ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವ ಅವಶ್ಯಕತೆ ಇದೆ ಎಂದು ಒತ್ತಾಯಿಸಿದರು.
ಪ್ರತಿಭಟನೆ: ''ಜಿಲ್ಲೆಯ ಹೇಮಾವತಿ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ಸರಕಾರದ ಕ್ರಮವನ್ನು ಖಂಡಿಸಿ ಎಚ್.ಡಿ.ರೇವಣ್ಣನವರು ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನೆಗೆ ಬೆಂಬಲಿಸುವ ಸಲುವಾಗಿ ಅರಸೀಕೆರೆ ತಾಲೂಕಿನಿಂದಲೂ ಸಹಸ್ರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಗುರುವಾರ ತೆರಳಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಾಗುವುದು. ಇದಕ್ಕೂ ನ್ಯಾಯ ದೊರಕದೇ ಹೋದರೆ ಅರಸೀಕೆರೆಯಲ್ಲಿ ಜೆಡಿಎಸ್ ಪಕ್ಷ ದ ವತಿಯಿಂದ ಅಹೋರಾತ್ರಿ ಪ್ರತಿಭಟನೆ ನಡೆಸಲಾಗುವುದು'' ಎಂದು ಘೋಷಿಸಿದರು.
ನಗರಸಭೆ ಅಧ್ಯಕ್ಷ ಎಂ.ಸಮೀವುಲ್ಲಾ, ತಾಪಂ ಅಧ್ಯಕ್ಷೆ ಮಂಜುಳಾಬಾಯಿ ಚಂದ್ರನಾಯಕ, ತಾಲೂಕು ಜೆಡಿಎಸ್ ಅಧ್ಯಕ್ಷ ಎನ್.ಎಸ್.ಸಿದ್ದರಾಮಶೆಟ್ಟಿ, ಜಿಪಂ ಮಾಜಿ ಉಪಾಧ್ಯಕ್ಷ ಬಿಳಿಚೌಡಯ್ಯ, ಗೀಜಿಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಧರ್ಮಶೇಖರ್, ತಾಪಂ ಮಾಜಿ ಸದಸ್ಯ ಗಂಗಾಧರ್, ನಗರಸಭೆ ಉಪಾಧ್ಯಕ್ಷ ಕೆ.ಜಿ.ಪಾರ್ಥಸಾರಥಿ ಮತ್ತಿತರರು ಉಪಸ್ಥಿತರಿದ್ದರು.
ಊTಓ13ಂTಏ4ಅ : ಅರಸೀಕೆರೆ:-ಕೆ.ಎಂ.ಶಿವಲಿಂಗೇಗೌಡ, ಶಾಸಕರು.