ಆ್ಯಪ್ನಗರ

ಪ್ರವಾಹ: ಕೇಂದ್ರ 500 ಕೋಟಿ ಬಿಡುಗಡೆ ಮಾಡಲಿ

ಜಿಲ್ಲೆಯಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಅನಾವೃಷ್ಟಿಗೆ ಕೇಂದ್ರ ಸರಕಾರ ಸುಮಾರು 500 ಕೋಟಿ ರೂ. ಬಿಡುಗಡೆ ಮಾಡುವಂತೆ ವಿಧಾನ ಪರಿಷತ್‌ ಸದಸ್ಯ ಗೋಪಾಲಸ್ವಾಮಿ ಆಗ್ರಹಿಸಿದ್ದಾರೆ.

Vijaya Karnataka 25 Aug 2019, 5:00 am
ಹಾಸನ : ಜಿಲ್ಲೆಯಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಅನಾವೃಷ್ಟಿಗೆ ಕೇಂದ್ರ ಸರಕಾರ ಸುಮಾರು 500 ಕೋಟಿ ರೂ. ಬಿಡುಗಡೆ ಮಾಡುವಂತೆ ವಿಧಾನ ಪರಿಷತ್‌ ಸದಸ್ಯ ಗೋಪಾಲಸ್ವಾಮಿ ಆಗ್ರಹಿಸಿದ್ದಾರೆ.
Vijaya Karnataka Web HSN-HSN24 M 6


''ನೆರೆ ಸಂತ್ರಸ್ತರಿಗೆ ಕೇವಲ ಪರಿಹಾರ ಕೊಡುವುದೇ ಮುಖ್ಯವಾಗಬಾರದು. ಅವರಿಗೆ ಶಾಶ್ವತ ಪರಿಹಾರ ಕಲ್ಪಿಸಿಕೊಡಬೇಕು. ಈಗಾಗಲೇ ಜಿಲ್ಲೆಯಲ್ಲಿ ಸಾಕಷ್ಟು ಬೆಳೆ ಹಾನಿ, ಆಸ್ತಿಪಾಸ್ತಿ ನಷ್ಟವಾಗಿದೆ. ಆದರೆ, ಸರಕಾರ ಎಕರೆಗೆ ಎರಡು ಸಾವಿರ ಕೊಟ್ಟರೆ ಅನುಕೂಲವಾಗುವುದಿಲ್ಲ. ಬೆಳೆನಷ್ಟಕ್ಕೆ ಅನುಗುಣವಾಗಿ ಪರಿಹಾರ ಕೊಡುವ ನಿಟ್ಟಿನಲ್ಲಿ ಚಿಂತಿಸಬೇಕು,'' ಎಂದು ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.

ಸಚಿವರೊಂದಿಗೆ ಚರ್ಚೆ: ''ಜಿಲ್ಲಾಧಿಕಾರಿ ಸೇರಿದಂತೆ ತಾಲೂಕು ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಶಕ್ತಿಮೀರಿ ಕೆಲಸ ಮಾಡಿ ಸಂತ್ರಸ್ತರಿಗೆ ಸ್ಪಂದಿಸಿರುವುದು ಶ್ಲಾಘನೀಯ. ಸಚಿವ ಸಂಪುಟ ವಿಸ್ತರಣೆಯಾಗಿ ಖಾತೆ ಹಂಚಿಕೆಯಾಗುವ ಮೊದಲೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಚಿವ ಸಂಪುಟದ ಸಚಿವರನ್ನು ಜಿಲ್ಲೆಗೆ ಕಳುಹಿಸಿ ಹಾನಿ ಪರಿಶೀಲನೆ ನಡೆಸಿದ್ದಾರೆ. ಸಭೆಯಲ್ಲಿ ಸಾಕಷ್ಟು ಚರ್ಚೆಗಳನ್ನು ಮಾಡಿದ್ದೇವೆ ಹಾನಿ ಪ್ರದೇಶದ ಜನರಿಗೆ ಆದಷ್ಟು ಬೇಗ ಪರಿಹಾರ ನೀಡಿದರೆ ಅನುಕೂಲವಾಗಲಿದೆ,'' ಎಂದರು.

''ಜಿಲ್ಲೆಯ ಸಕಲೇಶಪುರ, ಬೇಲೂರು, ಅರಕಲಗೂಡು ತಾಲೂಕುಗಳಲ್ಲಿ ಅತಿಹೆಚ್ಚಿನ ಹಾನಿಯಾಗಿದೆ .ಕಾಂಗ್ರೆಸ್‌ ಪಕ್ಷ ದಿಂದಲೂ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರ ನೇತೃತ್ವದಲ್ಲಿ ಹಾನಿ ಪ್ರದೇಶ ಪರಿಶೀಲನೆ ಮಾಡಿ ಪರಿಹಾರ ನೀಡಲು ಮುಂದಾಗಿದೆ,'' ಎಂದರು.

ಮೈತ್ರಿ ರಚನೆ ಬಗ್ಗೆ ಸಿದ್ದರಾಮಯ್ಯ ಹಾಗೂ ದೇವೇಗೌಡರ ನಡುವಿನ ರಾಜಕೀಯ ಗುದ್ದಾಟಕ್ಕೆ ಪ್ರತಿಕ್ರಿಯಿಸಿದ ಮಾಜಿ ಶಾಸಕ ಸಿ.ಎಸ್‌.ಪುಟ್ಟೇಗೌಡ ಮಾತನಾಡಿ, ''ದೇವೇಗೌಡರ ಬಗ್ಗೆ ಸಿದ್ದರಾಮಯ್ಯ ಮಾತನಾಡಿರುವುದು 100ಕ್ಕೆ 100 ಸರಿ ಇದೆ. ಈ ವಿಷಯದಲ್ಲಿ ದೇವೇಗೌಡರು ಫಲಾಯಾನ ವಾದ ಮಾಡುತ್ತಿದ್ದಾರೆ,''ಎಂದು ಅಸಮಾಧಾನ ವ್ಯಕ್ತಪಡಿಸಿದರು.

''ರಾಜ್ಯದಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಅಧಿಕಾರದಲ್ಲಿದ್ದಾಗ ಜಿಲ್ಲೆಯಲ್ಲಿ ಕಾಂಗ್ರೆಸ್‌ ನಾಯಕರ ಯಾವುದೇ ಪ್ರಯೋಜನವಾಗಲಿಲ್ಲ. ಆದರೆ, ಜೆಡಿಎಸ್‌ ಕಾರ‍್ಯಕರ್ತರಿಗೆ ಅನುಕೂಲವಾಯಿತು.ಜಿಲ್ಲೆಯಲ್ಲಿ ಯಾವುದೇ ಅಭಿವೃದ್ಧಿಯಾಗಲಿಲ್ಲ. ಮೈತ್ರಿ ಅಧಿಕಾರದಲ್ಲಿದ್ದಾಗ ಕೇವಲ ಕಮಿಷನ್‌ ರಾಜಕೀಯ ನಡೆಯಿತೇ ಹೊರತು ಜನರಿಗೆ ಅನುಕೂಲವಾಗುವ ಯಾವುದೇ ಕೆಲಸಗಳು ನಡೆಯಲಿಲ್ಲ,'' ಎಂದು ದೂರಿದರು.

''ಸಿದ್ದರಾಮಯ್ಯ ರಾಜ್ಯದ ಕಾಂಗ್ರೆಸ್‌ ಪಕ್ಷ ದ ಒಬ್ಬ ಸಮರ್ಥನಾಯಕರಾಗಿದ್ದು, ಅವರ ಬದ್ಧತೆ ಪ್ರದರ್ಶಿಸುತ್ತಿದ್ದಾರೆ. ಆದರೆ, ದೇವೇಗೌಡರು ಸಮಯಕ್ಕೆ ತಕ್ಕಂತೆ ರಾಜಕೀಯ ಮಾಡುವರು. ಪ್ರಸ್ತುತ ಸಿದ್ದರಾಮಯ್ಯ ಅವರ ಹೇಳಿಕೆಗಳು ಸತ್ಯವಾಗಿದೆ,'' ಎಂದರು.

ಈ ವೇಳೆ ಜಿಪಂ ಅಧ್ಯಕ್ಷೆ ಶ್ವೇತಾ ದೇವರಾಜ್‌, ಬಾಗೂರು ಮಂಜೇಗೌಡ, ಕಾಂಗ್ರೆಸ್‌ ಅಧ್ಯಕ್ಷ ಜಾವಗಲ್‌ ಮಂಜುನಾಥ್‌ ಮತ್ತಿತರ ಮುಖಂಡರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ