ಆ್ಯಪ್ನಗರ

ಕೊಣನೂರು: ಪ್ರತಿ ತಿಂಗಳು ಆರೋಗ್ಯ ರಕ್ಷಾ ಸಮಿತಿ ಸಭೆ ನಡೆಸಿ

ಕೊಣನೂರು: ಆರೋಗ್ಯ ಕೇಂದ್ರದಲ್ಲಿನ ಸಮಸ್ಯೆಗಳ ಬಗ್ಗೆ ಚರ್ಚೆ ಹಾಗೂ ಅಗತ್ಯ ಸೌಕರ‍್ಯ ಕಲ್ಪಿಸುವ ದೃಷ್ಟಿಯಿಂದ ಪ್ರತಿ ತಿಂಗಳ ಕೊನೆ ದಿನ ಸಭೆ ನಡೆಸಲು ಆರೋಗ್ಯ ರಕ್ಷಾ ಸಮಿತಿ ಮುಂದಾಗಬೇಕು ಎಂದು ಶಾಸಕ ಎ.ಟಿ. ರಾಮಸ್ವಾಮಿ ತಿಳಿಸಿದರು.

Vijaya Karnataka 1 Dec 2018, 5:00 am
ಕೊಣನೂರು: ಆರೋಗ್ಯ ಕೇಂದ್ರದಲ್ಲಿನ ಸಮಸ್ಯೆಗಳ ಬಗ್ಗೆ ಚರ್ಚೆ ಹಾಗೂ ಅಗತ್ಯ ಸೌಕರ‍್ಯ ಕಲ್ಪಿಸುವ ದೃಷ್ಟಿಯಿಂದ ಪ್ರತಿ ತಿಂಗಳ ಕೊನೆ ದಿನ ಸಭೆ ನಡೆಸಲು ಆರೋಗ್ಯ ರಕ್ಷಾ ಸಮಿತಿ ಮುಂದಾಗಬೇಕು ಎಂದು ಶಾಸಕ ಎ.ಟಿ. ರಾಮಸ್ವಾಮಿ ತಿಳಿಸಿದರು.
Vijaya Karnataka Web hassan konanuru arogya samiti meeting mla at ramaswamy
ಕೊಣನೂರು: ಪ್ರತಿ ತಿಂಗಳು ಆರೋಗ್ಯ ರಕ್ಷಾ ಸಮಿತಿ ಸಭೆ ನಡೆಸಿ


ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆದ ಆರೋಗ್ಯ ರಕ್ಷಾ ಸಮಿತಿ ಸಭೆಯಲ್ಲಿ ಮಾತನಾಡಿ, ಸಮುದಾಯ ಆರೋಗ್ಯ ಕೇಂದ್ರಕ್ಕೆ ಗ್ರಾಮೀಣ ಪ್ರದೇಶದಿಂದ ಹೆಚ್ಚಿನ ರೋಗಿಗಳು ಬರುತ್ತಾರೆ. ಆಸ್ಪತ್ರೆಯಲ್ಲಿ ರೋಗಿಗಳಿಗೆ, ಗರ್ಭಿಣಿಯರಿಗೆ ಸಿಗಬೇಕಾದ ಸೌಲಭ್ಯಗಳ ಬಗ್ಗೆ ಗಮನಹರಿಸಬೇಕು. ಆಸ್ಪತ್ರೆಗೆ ಬರುವ ರೋಗಿಗಳನ್ನು ವೈದ್ಯರು ಹಾಗೂ ಸಿಬ್ಬಂದಿ ತಮ್ಮ ಮನೆಯವರೆಂದು ಭಾವಿಸಿ ಚಿಕಿತ್ಸೆ ನೀಡಬೇಕು. ಚಿಕಿತ್ಸೆ ನೀಡುವುದರ ಜೊತೆಗೆ ಸ್ವಚ್ಛತೆಯನ್ನು ಕಾಪಾಡುವಂತೆ ವೈದ್ಯರಿಗೆ ಹಾಗೂ ಸಿಬ್ಬಂದಿಗೆ ಸೂಚಿಸಿದರು.

ಆಸ್ಪತ್ರೆಗೆ ಹೆಚ್ಚು ಗ್ರಾಮೀಣ ಭಾಗದ ಜನರು ಬರುತ್ತಾರೆ. ಪ್ರೀತಿಯಿಂದ ಕಾಣುವ ಮೂಲಕ ಅವರಿಗೆ ಚಿಕಿತ್ಸೆ ನೀಡಬೇಕು. ಆಸ್ಪತ್ರೆ ಆವರಣವನ್ನು ಸ್ವಚ್ಛವಾಗಿಟ್ಟುಕೊಳ್ಳಿ. ಆಸ್ಪತ್ರೆಗೆ ರೋಗಿಗಳು ಬಂದರೆ ವಾತಾವರಣ ನೋಡಿ ಅವರ ಕಾಯಿಲೆ ವಾಸಿಯಾಗುವಂತೆ ಇರಬೇಕೇ ಹೊರತು ರೋಗ ಉಲ್ಬಣವಾಗುವಂತೆ ಇರಬಾರದು. ಬಂದ ರೋಗಿಗಳನ್ನು ಪ್ರೀತಿಯಿಂದ ಕಂಡರೆ ಅವರಿಗೆ ಅರ್ಧ ರೋಗ ವಾಸಿಯಾಗುತ್ತದೆ. ಆವರಣದಲ್ಲಿ ಗಿಡಗಳನ್ನು ನೆಡುವ ಮೂಲಕ ಸುಂದರ ಉದ್ಯಾನ ಮಾಡಬೇಕು ಎಂದು ಸಲಹೆ ನೀಡಿದರು.

ಕೊಣನೂರಿನ ಆಸ್ಪತ್ರೆ ಇತ್ತೀಚೆಗೆ ಬಹಳ ಸುಧಾರಣೆಯಾಗಿದ್ದು ಇಬ್ಬರು ವೈದ್ಯರು ಸೇವೆ ಸಲ್ಲಿಸುತ್ತಿದ್ದಾರೆ. ಆಸ್ಪತ್ರೆ ಇನ್ನೂ ಸುಧಾರಣೆಯಾಗಬೇಕಿದ್ದು ಈ ಬಗ್ಗೆ ತಾಲೂಕು ವೈದ್ಯಾಧಿಕಾರಿಗಳು, ಆಸ್ಪತ್ರೆಯ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಗಮನಹರಿಸಿ. ರೋಗಿಗಳೊಂದಿಗೆ ಸೌಜನ್ಯದಿಂದ ವರ್ತಿಸಿ ಪ್ರೀತಿಯಿಂದ ಕಾಣುವ ಮೂಲಕ ಅವರ ಕಾಯಿಲೆ ಗುಣಮುಖವಾಗುವ ಹಾಗೆ ಮಾಡಬೇಕು. ಹಾಗೂ ಕೊಣನೂರಿನ ಆಸ್ಪತ್ರೆಯಲ್ಲಿ ಉತ್ತಮ ಸೇವೆ ಸಿಗುತ್ತದೆ ಎಂಬ ಕೀರ್ತಿಯನ್ನು ಪಡೆದುಕೊಳ್ಳಬೇಕು ಎಂದರು.

ಆಸ್ಪತ್ರೆಯ ಸಮಗ್ರ ಅಭಿವೃದ್ಧಿಗೆ ಆರೋಗ್ಯ ರಕ್ಷಾ ಸಮಿತಿ ರಚನೆಗೊಂಡಿದ್ದು ಸಮಿತಿ ಪದಾಧಿಕಾರಿಗಳು ಹಾಗೂ ಸದಸ್ಯರು ಈ ನಿಟ್ಟಿನಲ್ಲಿ ಕಾರ್ಯೋನ್ಮುಖಗೊಳ್ಳಬೇಕು. ಈಗಾಗಲೇ ಆಸ್ಪತ್ರೆಯ ಒಳಾಂಗಣದ ಶುಚಿತ್ವ ಸುಧಾರಣೆಗೊಂಡಿದೆ. ಇದೇ ನಿಟ್ಟಿನಲ್ಲಿ ಹೊರಾಂಗಣ ಸಹ ಅಭಿವೃದ್ಧಿಗೊಂಡರೆ ಬರುವ ರೋಗಿಗಳಿಗೆ ಅನುಕೂಲವಾಗಲಿದೆ. ಈ ನಿಟ್ಟಿನಲ್ಲಿ ಆರೋಗ್ಯಾಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಿದರು.

ಡಿಎಚ್‌ಒ ಸತೀಶ್‌, ಟಿಎಚ್‌ಒ ಸ್ವಾಮಿಗೌಡ, ಆಸ್ಪತ್ರೆಯ ವೈದ್ಯಾಧಿಕಾರಿಗಳು, ಸಿಬ್ಬಂದಿಗಳು, ಸಮಿತಿ ಪದಾಧಿಕಾರಿಗಳು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ