ಆ್ಯಪ್ನಗರ

ಯಾರೇ ಗೆದ್ದರೂ ಐತಿಹಾಸಿಕ ದಾಖಲೆ

ಹಾವೇರಿ: ಹಾವೇರಿ ಲೋಕಸಭಾ ಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ ನಡೆದಿದ್ದು, ಬಿಜೆಪಿ ಅಭ್ಯರ್ಥಿ ಶಿವಕುಮಾರ ಉದಾಸಿ, ಕಾಂಗ್ರೆಸ್‌ ಅಭ್ಯರ್ಥಿ ಗದಗ ಜಿಲ್ಲೆಯ ಡಿ.ಆರ್‌.ಪಾಟೀಲ ಇವರಿಬ್ಬರಲ್ಲಿ ಯಾರೇ ಗೆದ್ದರೂ ಹಾವೇರಿ ಲೋಕಸಭಾ ಕ್ಷೇತ್ರದ ಇತಿಹಾಸ ದಾಖಲೆಯಾಗಲಿದೆ.

Vijaya Karnataka 23 May 2019, 5:00 am
ಹಾವೇರಿ: ಹಾವೇರಿ ಲೋಕಸಭಾ ಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ ನಡೆದಿದ್ದು, ಬಿಜೆಪಿ ಅಭ್ಯರ್ಥಿ ಶಿವಕುಮಾರ ಉದಾಸಿ, ಕಾಂಗ್ರೆಸ್‌ ಅಭ್ಯರ್ಥಿ ಗದಗ ಜಿಲ್ಲೆಯ ಡಿ.ಆರ್‌.ಪಾಟೀಲ ಇವರಿಬ್ಬರಲ್ಲಿ ಯಾರೇ ಗೆದ್ದರೂ ಹಾವೇರಿ ಲೋಕಸಭಾ ಕ್ಷೇತ್ರದ ಇತಿಹಾಸ ದಾಖಲೆಯಾಗಲಿದೆ.
Vijaya Karnataka Web anyone who wins the historic record
ಯಾರೇ ಗೆದ್ದರೂ ಐತಿಹಾಸಿಕ ದಾಖಲೆ


ಹಾವೇರಿ ಲೋಕಸಭಾ ಕ್ಷೇತ್ರಕ್ಕೆ ಈ ಬಾರಿ ಗದಗ ಜಿಲ್ಲೆಯ ಅಭ್ಯರ್ಥಿಗೆ ಕಾಂಗ್ರೆಸ್‌ ಟಿಕೆಟ್‌ ಸಿಕ್ಕಿರುವುದು ಎರಡು ಜಿಲ್ಲೆಯ ನಾಯಕರ ಪ್ರತಿಷ್ಠೆಯ ಕಣವಾಗಿ ಪರಿಣಮಿಸಿದೆ. ಬಿಜೆಪಿ ಅಭ್ಯರ್ಥಿ ಶಿವಕುಮಾರ ಉದಾಸಿ ಗೆಲುವು ಸಾಧಿಸಿದರೆ ಈ ಕ್ಷೇತ್ರದ ಇತಿಹಾಸದಲ್ಲಿಯೇ ಹ್ಯಾಟ್ರಿಕ್‌ ಜಯ ಸಾಧಿಸಿದ ಹೆಗ್ಗಳಿಕೆ ಬಿಜೆಪಿಗೆ ಸಲ್ಲುತ್ತದೆ. ಇತ್ತ ಕಾಂಗ್ರೆಸ್‌ ಅಭ್ಯರ್ಥಿ ಡಿ.ಆರ್‌.ಪಾಟೀಲ ಗೆದ್ದರೆ, ಗದಗ ಜಿಲ್ಲೆಯಿಂದ ಮೊದಲ ಬಾರಿಗೆ ಸಂಸದರಾಗುವ ಮೂಲಕ ಇದೊಂದು ಹೊಸ ದಾಖಲೆಯಾಗಲಿದೆ.

ಹಾವೇರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಮತ್ತು ಇತರೆ ಪಕ್ಷಗಳು ಗೆಲುವು ಸಾಧಿಸುವ ಮೂಲಕ ತಮ್ಮದೆಯಾದ ಛಾಪು ಮೂಡಿಸಿದ್ದವು. ಆದರೆ, ಕಳೆದ ಎರಡು ಲೋಕಸಭಾ ಚುನಾವಣೆಯಲ್ಲಿ ಜಯಗಳಿಸಿರುವ ಬಿಜೆಪಿ ಅಭ್ಯರ್ಥಿ ಈ ಬಾರಿ ಹ್ಯಾಟ್ರಿಕ್‌ ಬಾರಿಸುವ ನಿರೀಕ್ಷೆ ಹೊಂದಿದ್ದಾರೆ.

ಇತ್ತ ಮೊದಲ ಬಾರಿಗೆ ಗದಗ ಜಿಲ್ಲೆಯಿಂದ ಟಿಕೆಟ್‌ ಪಡೆದಿರುವ ಕಾಂಗ್ರೆಸ್‌ ಅಭ್ಯರ್ಥಿ ಡಿ.ಆರ್‌. ಪಾಟೀಲ ಅವರನ್ನು ಗೆಲ್ಲಿಸಬೇಕು ಎನ್ನುವ ಮತದಾರರು ಗೆಲುವಿನ ನಿರೀಕ್ಷೆಯಲ್ಲಿದ್ದಾರೆ.

2014ರ ಲೋಕಸಭಾ ಚುನಾವಣೆಗೆ ಹೋಲಿಸಿದರೆ ಈ ಬಾರಿ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನದ ಪ್ರಮಾಣ ಶೇ.2.44ರಷ್ಟು ಹೆಚ್ಚಿದ್ದು, ಶೇ. 74.01 ರಷ್ಟು ಮತದಾನ ದಾಖಲಾಗಿದೆ. ಇದು ಫಲಿತಾಂಶದ ಮೇಲೆ ಕೂಡ ಮಹತ್ವದ ಪರಿಣಾಮ ಬೀರುವ ಸಾಧ್ಯತೆಗಳಿವೆ.

ಮಧ್ಯಾಹ್ನದ ವೇಳೆ ಫಲಿತಾಂಶ: ಗುರುವಾರ ಮಧ್ಯಾಹ್ನದ ವೇಳೆಗೆ ಕದನ ಕುತೂಹಲಕ್ಕೆ ತೆರೆ ಬೀಳಲಿದೆ. ಕಾಂಗ್ರೆಸ್‌ ಮತ್ತು ಬಿಜೆಪಿ ಅಭ್ಯರ್ಥಿ ನಡುವೆ ನೇರ ಸ್ಪರ್ಧೆ ಇರುವ ಈ ಕ್ಷೇತ್ರದಲ್ಲಿ ಗೆಲುವು ಎರಡೂ ಪಕ್ಷ ಗಳಿಗೆ ಪ್ರತಿಷ್ಠೆಯ ವಿಷಯವಾಗಿದೆ. ಇದುವರೆಗೆ ರಾಜ್ಯ ರಾಜಕಾರಣಕ್ಕೆ ಸೀಮಿತವಾಗಿದ್ದ ಹುಲಕೋಟಿ ಗೌಡರ ಕುಟುಂಬ, ಇದೇ ಮೊದಲ ಬಾರಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಮೂಲಕ ಕುತೂಹಲ ಇಮ್ಮಡಿಗೊಳಿಸಿದೆ.

ಹಾವೇರಿ ಲೊಕಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಡುವ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಸದ್ಯ ಐದು ಬಿಜೆಪಿ, ಎರಡು ಕಾಂಗ್ರೆಸ್‌ ಹಾಗೂ ಒಂದು ಪಕ್ಷೇತರ ಶಾಸಕರಿದ್ದಾರೆ. ಸತತ ಮೂರು ಬಾರಿ ಗೆದ್ದಿರುವ ಬಿಜೆಪಿ, ಈ ಬಾರಿಯೂ ಗೆದ್ದರೆ ಈ ಕ್ಷೇತ್ರದಲ್ಲಿ ಬಿಜೆಪಿ ಪ್ರಾಬಲ್ಯ ಇನ್ನಷ್ಟು ಬಲಗೊಳ್ಳಲಿದೆ.

ಇತ್ತ ಹಾವೇರಿ ಲೋಕಸಭಾ ಕ್ಷೇತ್ರವನ್ನು ಕಾಂಗ್ರೆಸ್‌ ಪಕ್ಷ ವು ಮುಸ್ಲಿಂ ಸಮುದಾಯಕ್ಕೆ ನೀಡಿದ ಅಘೋಷಿತ 'ಮೀಸಲು' ಕ್ಷೇತ್ರವಾಗಿತ್ತು. ಆದರೆ, ಬದಲಾದ ರಾಜಕೀಯ ಸನ್ನಿವೇಶದಲ್ಲಿ ಆರು ದಶಕಗಳಿಂದ ಪಾಲಿಸಿಕೊಂಡು ಬಂದಿದ್ದ ಈ ಸಂಪ್ರದಾಯವನ್ನು ಮುರಿದು ಕಾಂಗ್ರೆಸ್‌ ಈ ಬಾರಿ ಅಲ್ಪಸಂಖ್ಯಾತ ಅಲ್ಲದವರಿಗೆ ಟಿಕೆಟ್‌ ನೀಡಿದೆ. ಇದು ಎಷ್ಟರ ಮಟ್ಟಿಗೆ ಫಲ ನೀಡುತ್ತದೆ ಎಂಬುದೂ ಫಲಿತಾಂಶದಿಂದ ಗೊತ್ತಾಗಲಿದೆ.

ಮಧ್ಯಾಹ್ನ ರಿಸಲ್ಟ್‌: ಹಾವೇರಿ ತಾಲೂಕಿನ ದೇವಗಿರಿಯ ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಚುನಾವಣೆಯ ಮತ ಎಣಿಕೆ ಮೇ 23 ಗುರುವಾರ ಬೆಳಗ್ಗೆ 8 ಗಂಟೆಯಿಂದ ಆರಂಭವಾಗಲಿದ್ದು, ಮಧ್ಯಾಹ್ನ 2ರ ವೇಳೆಗೆ ಫಲಿತಾಂಶ ಹೊರಬೀಳುವ ಸಾಧ್ಯತೆ ಇದೆ. ಇದಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡರೆ ಇತ್ತ ಅಭ್ಯರ್ಥಿಗಳು ಬೆಂಬಲಿಗರು ಫಲಿತಾಂಶ ನಿರೀಕ್ಷೆಯಲ್ಲಿ ಕಾದು ಕುಳಿತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ