ಆ್ಯಪ್ನಗರ

ಉತ್ತರ ಭಾರತದಲ್ಲಿ ವರುಣನ ಆರ್ಭಟಕ್ಕೆ 25 ಬಲಿ

ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್‌ನಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ

PTI 19 Aug 2019, 5:00 am
ಶಿಮ್ಲಾ: ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್‌ ಸೇರಿದಂತೆ ಉತ್ತರ ಭಾರತದ ಹಲವು ಕಡೆ ವರುಣನ ಆರ್ಭಟ ಜೋರಾಗಿದ್ದು, ಭಾನುವಾರ ಮಳೆ ಸಂಬಂಧಿ ಅವಘಡಗಳಿಂದ 25ಕ್ಕೂ ಹೆಚ್ಚು ಮಂದಿ ಬಲಿಯಾಗಿರುವುದು ವರದಿಯಾಗಿದೆ.
Vijaya Karnataka Web 20190818042L


ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್‌ನಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಪ್ರವಾಹದ ಅಬ್ಬರಕ್ಕೆ ರಸ್ತೆಗಳು ಕೊಚ್ಚಿ ಹೋಗಿದ್ದು ಅನೇಕ ಮನೆಗಳು ಕುಸಿದಿವೆ. ಹಲವು ಜಿಲ್ಲೆಗಳಲ್ಲಿ ಭೂಕುಸಿತ ಉಂಟಾಗಿದೆ. ಮನೆ ಕಳೆದುಕೊಂಡ ಸಂತ್ರಸ್ತರ ರಕ್ಷಣಾ ಕಾರ್ಯ ಸಮರೋಪಾದಿಯಲ್ಲಿ ಸಾಗಿದೆ ಎಂದು ಜಿಲ್ಲಾಡಳಿತಗಳು ತಿಳಿಸಿವೆ.

ಹಿಮಾಚಲದ ಶಿಮ್ಲಾ, ಕುಲು, ಛಾಂಬಾ, ಸೋಲನ್‌, ಉನಾ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ ಸಂಬಂಧಿ ಅವಘಡಗಳಿಂದ ಇಬ್ಬರು ನೇಪಾಳಿಗಳು ಸೇರಿ 18 ಮಂದಿ ಮೃತಪಟ್ಟಿದ್ದಾರೆ. ನೂರಾರು ಪ್ರವಾಸಿಗರು ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ. ಸಂತ್ರಸ್ತರ ರಕ್ಷಣೆ ಹಾಗೂ ಪರಿಹಾರ ಕಾರ್ಯ ತ್ವರಿತಗೊಳಿಸುವಂತೆ ಮುಖ್ಯಮಂತ್ರಿ ಜೈರಾಮ್‌ ಠಾಕೂರ್‌ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ. ಈ ಮುಂಗಾರು ಋುತುವಿನಲ್ಲಿ ರಾಜ್ಯ 490 ಕೋಟಿ ರೂ. ನಷ್ಟ ಅನುಭವಿಸಿದೆ ಎಂದು ಅವರು ಹೇಳಿದ್ದಾರೆ.

ಉತ್ತರಾಖಂಡದಲ್ಲಿ 8 ಮಂದಿ ಕಣ್ಮರೆ: ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ ಭಾನುವಾರ ಮೇಘಸ್ಫೋಟ ಸಂಭವಿಸಿದ್ದು, ಪ್ರವಾಹದಲ್ಲಿ 8ಕ್ಕೂ ಹೆಚ್ಚು ಮಂದಿ ಕಣ್ಮರೆಯಾಗಿದ್ದು, ಅವರು ಬದುಕುಳಿದಿರುವ ಸಾಧ್ಯತೆಗಳು ಕಡಿಮೆ ಎಂದು ಜಿಲ್ಲಾಡಳಿತದ ಮೂಲಗಳು ಹೇಳಿವೆ. 20ಕ್ಕೂ ಹೆಚ್ಚು ಮನೆಗಳು ನೀರಿನಲ್ಲಿ ಕೊಚ್ಚಿ ಹೋಗಿದ್ದು, ರಸ್ತೆಗಳು ಬಿರುಕು ಬಿಟ್ಟಿವೆ. ಕುಸಿದ ಮನೆಗಳ ಅವಶೇಷಗಳಡಿ ಸಿಲುಕಿದವರ ರಕ್ಷಣಾ ಕಾರ್ಯ ಭರದಿಂದ ಸಾಗಿದೆ.

ಸಂತ್ರಸ್ತರ ರಕ್ಷಣೆ ಹಾಗೂ ಪರಿಹಾರ ಕಾರ್ಯ ಕೈಗೊಳ್ಳುವಂತೆ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್‌ ರಾವತ್‌ ಉತ್ತರಕಾಶಿ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ. ಐಟಿಬಿಪಿ, ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌ ಪಡೆಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತವಾಗಿವೆಯಾದರೂ ಒಂದೇ ಸಮನೆ ಸುರಿಯುತ್ತಿರುವ ಮಳೆ ತುಸು ಅಡ್ಡಿಯಾಗಿದೆ.

ದಿಲ್ಲಿಯಲ್ಲಿ ಅಲರ್ಟ್‌: ಯಮುನಾ ಸೇರಿದಂತೆ ಅನೇಕ ನದಿಗಳು ಅಪಾಯದ ಮಟ್ಟ ತಲುಪಿರುವುದರಿಂದ ದಿಲ್ಲಿಯಲ್ಲಿ ಪ್ರವಾಹದ ಅಲರ್ಟ್‌ ಘೋಷಿಸಲಾಗಿದೆ. ಕೇರಳದಲ್ಲಿ ಮಳೆ ಹಾಗೂ ಪ್ರವಾಹಕ್ಕೆ ಸತ್ತವರ ಸಂಖ್ಯೆ ಭಾನುವಾರ 116ಕ್ಕೆ ಏರಿಕೆಯಾಗಿದೆ.

ಇನ್ನು 3 ದಿನ ಮಳೆ
ಉತ್ತರಾಖಂಡದ ಚಮೋಲಿ, ಪಿತ್ರೋಗಢ, ಡೆಹ್ರಾಡೂನ್‌, ಪೌರಿ ಹಾಗೂ ನೈನಿತಾಲ್‌ ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯವು 2013ರಲ್ಲಿ ಭೀಕರ ಪ್ರವಾಹ ಎದುರಿಸಿತ್ತು. ಇತ್ತ ತಮಿಳುನಾಡು ಹಾಗೂ ಪುದುಚೆರಿಯಲ್ಲೂ ಮುಂದಿನ 48 ಗಂಟೆಯಲ್ಲಿ ಹಲವು ಕಡೆ ಮಳೆಯಾಗಲಿದೆ. ಕರ್ನಾಟಕದ ದಕ್ಷಿಣ ಒಳನಾಡು, ಆಂಧ್ರ ಪ್ರದೇಶದ ಕರಾವಳಿ ತೀರ ಹಾಗೂ ತೆಲಂಗಾಣದ ಹಲವು ಕಡೆ ಮುಂದಿನ ಎರಡು ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಅಂದಾಜಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ