ಆ್ಯಪ್ನಗರ

BS Yediyurappa: ಬಿಜೆಪಿ ಸಂಸದೀಯ ಮಂಡಳಿಗೆ ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಸೇರ್ಪಡೆ

BS Yediyurappa: ಬಿ. ಎಸ್. ಯಡಿಯೂರಪ್ಪ ಅವರನ್ನು ಬಿಜೆಪಿ ಹೈಕಮಾಂಡ್‌ನ ಅತ್ಯುನ್ನತ ಮಂಡಳಿಯಾದ ಸಂಸದೀಯ ಮಂಡಳಿಗೆ ಸದಸ್ಯನನ್ನಾಗಿ ಆಯ್ಕೆ ಮಾಡಿಕೊಂಡಿದೆ. ಈ ಮೂಲಕ, ಯಡಿಯೂರಪ್ಪ ಅವರ ಸಂಘಟನಾ ಸಾಮರ್ಥ್ಯ ಹಾಗೂ ಅನುಭವವನ್ನು ಸದುಪಯೋಗಪಡಿಸಿಕೊಳ್ಳಲು ಬಿಜೆಪಿ ಹೈಕಮಾಂಡ್ ಮುಂದಾಗಿದೆ. ಜೊತೆಯಲ್ಲೇ ಬಿಜೆಪಿಯ ಪ್ರಬಲ ಹಾಗೂ ವರ್ಚಸ್ಸು ಹೊಂದಿರುವ ಲಿಂಗಾಯತ ಸಮುದಾಯದ ನಾಯಕನಿಗೆ ಬಿಜೆಪಿ ಹೈಕಮಾಂಡ್ ಮನ್ನಣೆ ನೀಡಿದಂತಾಗಿದೆ. ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಸಂಘಟನೆಗೆ ಹೈಕಮಾಂಡ್‌ನ ಈ ನಿರ್ಧಾರ ಸಹಾಯಕವಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

Authored byದಿಲೀಪ್ ಡಿ. ಆರ್. | Vijaya Karnataka Web 17 Aug 2022, 4:33 pm

ಹೈಲೈಟ್ಸ್‌:

  • ಯಡಿಯೂರಪ್ಪ ಜೊತೆಯಲ್ಲೇ ಸರ್ಬಾನಂದ ಸೋನೋವಾಲ್ ಹಾಗೂ ಕೆ. ಲಕ್ಷ್ಮಣ್ ಕೂಡಾ ಸೇರ್ಪಡೆ
  • ಶಿವರಾಜ್ ಸಿಂಗ್ ಚೌಹಾಣ್ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಮಂಡಳಿಯಿಂದ ಹೊರಕ್ಕೆ
  • ಪ್ರಧಾನಿ ಮೋದಿ, ಅಮಿತ್ ಶಾ, ರಾಜನಾಥ್ ಸಿಂಗ್‌ರಂಥಾ ಘಟಾನುಘಟಿಗಳೇ ಇರುವ ಮಂಡಳಿ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Senior BJP leader BS Yediyurappa
ಹೊಸ ದಿಲ್ಲಿ: ಬಿಜೆಪಿ ಸಂಸದೀಯ ಮಂಡಳಿಗೆ ಮಾಜಿ ಸಿಎಂ ಬಿ. ಎಸ್ ಯಡಿಯೂರಪ್ಪ ಅವರನ್ನು ಸೇರ್ಪಡೆ ಮಾಡಲಾಗಿದೆ. ಬಿಜೆಪಿ ರಾಷ್ಟ್ರೀಯ ಮಹಾ ಸಚಿವ ಅಂಕುರ್ ಶರ್ಮಾ ಈ ಆದೇಶ ಹೊರಡಿಸಿದ್ದಾರೆ. ಯಡಿಯೂರಪ್ಪ ಅವರ ಜೊತೆಯಲ್ಲೇ ಸರ್ಬಾನಂದ ಸೋನೋವಾಲ್ ಹಾಗೂ ಕೆ. ಲಕ್ಷ್ಮಣ್ ಅವರನ್ನೂ ಸೇರ್ಪಡೆ ಮಾಡಲಾಗಿದೆ.

ಇದೇ ವೇಳೆ, ಬಿಜೆಪಿ ಸಂಸದೀಯ ಮಂಡಳಿಯಿಂದ ಮಧ್ಯ ಪ್ರದೇಶ ರಾಜ್ಯದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೊಕ್ ಕೊಡಲಾಗಿದೆ.


ಬಿಜೆಪಿ ಸಂಸದೀಯ ಮಂಡಳಿಯು ಪಕ್ಷದ ಅತ್ಯುನ್ನತ ನಿರ್ಧಾರಗಳನ್ನು ಕೈಗೊಳ್ಳುವ ಮಂಡಳಿಯಾಗಿದ್ದು, ಈ ಮಂಡಳಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಮುಖ್ಯಸ್ಥರಾಗಿದ್ದಾರೆ. ಈ ಮಂಡಳಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡಾ ಇದ್ದಾರೆ. ಈ ಸಮಿತಿಯಲ್ಲಿ ಕರ್ನಾಟಕದವರೇ ಆದ ಬಿ. ಎಲ್. ಸಂತೋಷ್ ಕೂಡಾ ಇದ್ದಾರೆ.

ಯಡಿಯೂರಪ್ಪ ದಿಢೀರ್ ನಿರ್ಧಾರ ರಾಜ್ಯ, ಪಕ್ಷಕ್ಕೆ ಅನುಕೂಲ: ಈಶ್ವರಪ್ಪ
ಬಿಜೆಪಿ ಸಂಸದೀಯ ಮಂಡಳಿ ಕೆಲಸವೇನು..?

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಪರವಾಗಿ ಪಕ್ಷದ ದೈನಂದಿನ ನಿರ್ಧಾರಗಳನ್ನು ಕೈಗೊಳ್ಳುವ ಸಮಿತಿ ಇದಾಗಿದೆ. ಈ ಸಮಿತಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷರೂ ಸೇರಿದಂತೆ ಒಟ್ಟು 11 ಮಂದಿ ಸದಸ್ಯರು ಇರುತ್ತಾರೆ. ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯೇ ಈ ಸಂಸದೀಯ ಮಂಡಳಿಯನ್ನು ರಚಿಸುತ್ತದೆ. ಸಂಸದೀಯ ಹಾಗೂ ಶಾಸಕಾಂಗದ ಕಾರ್ಯವೈಖರಿ ಮೇಲೆ ಈ ಮಂಡಳಿ ಕಣ್ಣಿಟ್ಟಿರುತ್ತದೆ. ರಾಷ್ಟ್ರೀಯ ಕಾರ್ಯಕಾರಿಣಿ ಅಡಿಯಲ್ಲಿ ಈ ಮಂಡಳಿಯು ಸಂಘಟನಾತ್ಮಕ ನಿರ್ಧಾರಗಳು ಹಾಗೂ ಮಾರ್ಗಸೂಚಿಯನ್ನು ರಚಿಸಿ ನಿರ್ದೇಶಿಸುವ ಕೆಲಸ ಮಾಡುತ್ತದೆ.

CM Change Rumour: ಏಳೆಂಟು ತಿಂಗಳು ಇರುವಾಗ ಸಿಎಂ ಬದಲಾವಣೆ ಪ್ರಶ್ನೆ ಬರಲ್ಲ: ಬಿ. ಎಸ್. ಯಡಿಯೂರಪ್ಪ
ಯಡಿಯೂರಪ್ಪಗೆ ಹೈಕಮಾಂಡ್ ಮಣೆ..!

75 ವರ್ಷ ವಯಸ್ಸು ಮೀರಿದ ಯಡಿಯೂರಪ್ಪ, ಬಿಜೆಪಿ ಹೈಕಮಾಂಡ್ ನಿರ್ಧಾರದ ಅನ್ವಯ ಈ ಹಿಂದೆ ಮುಖ್ಯಮಂತ್ರಿ ಸ್ಥಾನ ತ್ಯಜಿಸಿದ್ದರು. ಬಳಿಕ ಚುನಾವಣಾ ರಾಜಕೀಯದಿಂದಲೂ ನಿವೃತ್ತಿ ಪಡೆಯುವುದಾಗಿ ಘೋಷಿಸಿದ್ದ ಯಡಿಯೂರಪ್ಪ, ತಮ್ಮ ಶಿಕಾರಿಪುರ ಕ್ಷೇತ್ರವನ್ನು ಮಗ ಬಿ. ವೈ. ವಿಜಯೇಂದ್ರ ಅವರಿಗೆ ಬಿಟ್ಟು ಕೊಟ್ಟಿದ್ದರು. ಹಾಗೆ ನೋಡಿದರೆ, ಬಿಜೆಪಿಯ ನಿಲುವುಗಳಿಗೆ ವಿರುದ್ಧವಾಗಿಯೇ ಶಿಕಾರಿಪುರ ಕ್ಷೇತ್ರದಲ್ಲಿ ತಮ್ಮ ಉತ್ತರಾಧಿಕಾರಿಯ ಘೋಷಣೆಯನ್ನೂ ಮಾಡಿದ್ದರು. ಇದಾದ ಬಳಿಕ ತಾವು ಬಿಜೆಪಿ ಪಕ್ಷ ಸಂಘಟನೆಯಲ್ಲಿ ಸಂಪೂರ್ಣ ತೊಡಗಿಸಿಕೊಳ್ಳುವುದಾಗಿ ಯಡಿಯೂರಪ್ಪ ಘೋಷಿಸಿದ್ದರು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ಶ್ರಮಿಸುವುದಾಗಿ ಯಡಿಯೂರಪ್ಪ ಹೇಳಿದ್ದರು.


ಇದೀಗ ಯಡಿಯೂರಪ್ಪ ಅವರ ಮಾತಿಗೆ ಪೂರಕವಾಗಿ ಹೈಕಮಾಂಡ್ ಕೂಡಾ ನಿರ್ಧಾರ ಕೈಗೊಂಡಿದೆ. ಯಡಿಯೂರಪ್ಪ ಅವರನ್ನು ಬಿಜೆಪಿ ಹೈಕಮಾಂಡ್‌ನ ಅತ್ಯುನ್ನತ ಮಂಡಳಿಯಾದ ಸಂಸದೀಯ ಮಂಡಳಿಗೆ ಸದಸ್ಯನನ್ನಾಗಿ ಆಯ್ಕೆ ಮಾಡಿಕೊಂಡಿದೆ. ಈ ಮೂಲಕ, ಯಡಿಯೂರಪ್ಪ ಅವರ ಸಂಘಟನಾ ಸಾಮರ್ಥ್ಯ ಹಾಗೂ ಅನುಭವವನ್ನು ಸದುಪಯೋಗಪಡಿಸಿಕೊಳ್ಳಲು ಬಿಜೆಪಿ ಮುಂದಾಗಿದೆ. ಜೊತೆಯಲ್ಲೇ ಬಿಜೆಪಿಯ ಪ್ರಬಲ ಹಾಗೂ ವರ್ಚಸ್ಸು ಹೊಂದಿರುವ ಲಿಂಗಾಯತ ಸಮುದಾಯದ ನಾಯಕನಿಗೆ ಬಿಜೆಪಿ ಹೈಕಮಾಂಡ್ ಮನ್ನಣೆ ನೀಡಿದಂತಾಗಿದೆ.
ಲೇಖಕರ ಬಗ್ಗೆ
ದಿಲೀಪ್ ಡಿ. ಆರ್.
ವಿಜಯ ಕರ್ನಾಟಕದ ಡಿಜಿಟಲ್ ಪತ್ರಕರ್ತನಾಗಿ 2019ರ ಆಗಸ್ಟ್‌ನಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡ ಟಿವಿ ನ್ಯೂಸ್ ವಾಹಿನಿಗಳಲ್ಲಿ 14 ವರ್ಷಕ್ಕೂ ಹೆಚ್ಚು ಕಾಲ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. ರಾಜಕೀಯ, ವಿಜ್ಞಾನ-ತಂತ್ರಜ್ಞಾನ ರಂಗಗಳು ಇವರ ಆಸಕ್ತಿಯ ವಿಷಯಗಳು. ಇದಲ್ಲದೆ ಹಾಸ್ಯ, ವಿಡಂಬನಾತ್ಮಕ ಬರಹ, ವ್ಯಕ್ತಿ ಚಿತ್ರ, ಜೀವ ಪರ ನಿಲುವಿನ ಸಂವೇದನಾತ್ಮಕ ಲೇಖನಗಳನ್ನು ಹೆಚ್ಚಾಗಿ ಬರೆಯುತ್ತಾರೆ. ಕಾಡು, ಹಸಿರು, ಬೆಟ್ಟ ಗುಡ್ಡಗಳ ಚಾರಣ ಮಾಡುವುದು ಇವರ ಹವ್ಯಾಸ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ