ಆ್ಯಪ್ನಗರ

ಗಜ ಸಂಘರ್ಷ: ಪ್ರತಿ ವರ್ಷ 500 ಮಂದಿ, 100ಕ್ಕೂ ಅಧಿಕ ಆನೆಗಳ ಸಾವು

ಮನುಷ್ಯರ ಜೊತೆಗಿನ ಸಂಘರ್ಷಕ್ಕೆ ಕಡಿವಾಣ ಹಾಕಲು ಆನೆಗಳನ್ನು ಕಾಡಿನಲ್ಲೇ ಇರುವಂತೆ ನೋಡಿಕೊಳ್ಳಬೇಕು. ಇದಕ್ಕಾಗಿ ಅಗತ್ಯ ಮೇವು ಹಾಗೂ ನೀರಿನ ಸಂಗ್ರಹಕ್ಕೆ ಬೇಕಾದ ಯೋಜನೆಗಳನ್ನು ಕೇಂದ್ರ ಸರಕಾರ ಅನುಷ್ಠಾನಗೊಳಿಸುತ್ತಿದೆ ಎಂದು ಪ್ರಕಾಶ್‌ ಜಾವಡೇಕರ್‌ ಹೇಳಿದ್ದಾರೆ.

Agencies 10 Aug 2020, 7:08 pm

ಹೊಸದಿಲ್ಲಿ: ಮಾನವ ಮತ್ತು ಆನೆಗಳ ನಡುವಿನ ಸಂಘರ್ಷದಲ್ಲಿ ಪ್ರತಿ ವರ್ಷ 500ಕ್ಕೂ ಅಧಿಕ ಜನರು ಹಾಗೂ 100ಕ್ಕೂ ಹೆಚ್ಚು ಆನೆಗಳು ಮೃತಪಟ್ಟಿವೆ ಎಂದು ಕೇಂದ್ರ ಪರಿಸರ ಸಚಿವಾಲಯದ ಸೋಮವಾರ ತಿಳಿಸಿದೆ.
Vijaya Karnataka Web Prakash Javadekar


ಆ.12ರಂದು ಅಂತರರಾಷ್ಟ್ರೀಯ ಆನೆ ದಿನದ ಹಿನ್ನೆಲೆಯಲ್ಲಿ ಈ ಮಾಹಿತಿಯನ್ನು ಕಾರ್ಯಕ್ರಮವೊಂದರಲ್ಲಿ ಸಚಿವಾಲಯ ಬಿಡುಗಡೆಗೊಳಿಸಿದೆ. 2017ರಲ್ಲಿ ನಡೆದ ಸಮೀಕ್ಷೆಯಂತೆ ಭಾರತದಲ್ಲಿ 30 ಸಾವಿರ ಆನೆಗಳಿವೆ. ಮನುಷ್ಯರು ಮತ್ತು ಆನೆಗಳ ನಡುವೆ ಸಂಘರ್ಷದಿಂದ ಎರಡೂ ಕಡೆಗಳಲ್ಲಿ ಸಾವು-ನೋವು ಉಂಟಾಗುತ್ತಿವೆ.

ಈ ಕುರಿತು ಮಾತನಾಡಿದ ಕೇಂದ್ರ ಪರಿಸರ ಸಚಿವ ಪ್ರಕಾಶ್‌ ಜಾವಡೇಕರ್‌, ‘‘ಪರಿಸರ ವ್ಯವಸ್ಥೆಯ ಸಮತೋಲನಕ್ಕೆ ಆನೆಗಳ ಸಂರಕ್ಷಣೆ ಅತ್ಯಗತ್ಯ. ಮನುಷ್ಯರ ಜೊತೆಗಿನ ಸಂಘರ್ಷಕ್ಕೆ ಕಡಿವಾಣ ಹಾಕಲು ಆನೆಗಳನ್ನು ಕಾಡಿನಲ್ಲೇ ಇರುವಂತೆ ನೋಡಿಕೊಳ್ಳಬೇಕಾಗಿದೆ. ಇದಕ್ಕಾಗಿ ಅಗತ್ಯ ಮೇವು ಹಾಗೂ ನೀರಿನ ಸಂಗ್ರಹಕ್ಕೆ ಬೇಕಾದ ಯೋಜನೆಗಳನ್ನು ಕೇಂದ್ರ ಸರಕಾರ ಅನುಷ್ಠಾನಗೊಳಿಸುತ್ತಿದೆ. ಮುಂದಿನ ವರ್ಷದಿಂದಲೇ ಇದರ ಫಲಿತಾಂಶವನ್ನು ನಾವು ಕಾಣಬಹುದು,’’ ಎಂದರು.

ಮೈಸೂರು ಝೂನಲ್ಲಿ ಆನೆ ದಾಳಿಗೆ ಬಲಿಯಾದ ಹರೀಶ್ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ

ಇದೇ ವೇಳೆ, ಕಳೆದ ಮೇ 27ರಂದು ಕೇರಳದಲ್ಲಿ ನಡೆದ ಗರ್ಭಿಣಿ ಆನೆ ಹತ್ಯೆ ಪ್ರಕರಣವನ್ನು ಖಂಡಿಸಿದ ಕೇಂದ್ರ ಪರಿಸರ ಖಾತೆ ರಾಜ್ಯ ಸಚಿವ ಬಾಬುಲ್‌ ಸುಪ್ರಿಯೊ, ‘‘ನಾವೆಲ್ಲರೂ ಆನೆಗಳ ಸಂರಕ್ಷಿಸಬೇಕು. ಕೇರಳದಲ್ಲಿ ನಡೆದದ್ದು ಅಮಾನವೀಯ ಕೃತ್ಯ. ಅಂತಹ ಕ್ರಿಮಿನಲ್‌ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ,’’ ಎಂದು ಎಚ್ಚರಿಸಿದರು.

‘‘ಮನುಷ್ಯರ ಜತೆ ಸಂಘರ್ಷದಿಂದ ಆನೆಗಳು ಸಾಯುವುದನ್ನು ತಪ್ಪಿಸಲು ಕಳೆದ ಐದು ವರ್ಷದಲ್ಲಿ ಹೆಚ್ಚಿನ ಆನೆ ಕಾರಿಡಾರ್‌ಗಳನ್ನು ಗುರುತಿಸಲಾಗಿದೆ. ಆನೆಗಳ ಸಂರಕ್ಷಣೆಗೆ ಮೀಸಲಿಟ್ಟಿದ್ದ ಬಜೆಟ್‌ ಗಾತ್ರವನ್ನು ಶೇ. 30ರಷ್ಟು ಏರಿಕೆ ಮಾಡಲಾಗಿದೆ,’’ ಎಂದು ಅರಣ್ಯ ಸಚಿವಾಲಯದ ಹೆಚ್ಚುವರಿ ಪ್ರಧಾನ ನಿರ್ದೇಶಕ(ವನ್ಯಜೀವಿ ವಿಭಾಗ) ಸೌಮಿತ್ರ ದಾಸ್‌ಗುಪ್ತಾ ತಿಳಿಸಿದರು.

ಮಾನವ-ಆನೆ ಸಂಘರ್ಷವನ್ನು ತಪ್ಪಿಸುವ ಅತ್ಯುತ್ತಮ ಮಾರ್ಗೋಪಾಯಗಳ ಬಗ್ಗೆ ಮಾಹಿತಿ ಒಳಗೊಂಡ ಕಿರು ಪುಸ್ತಕವನ್ನು ಇದೇ ಕಾರ್ಯಕ್ರಮದಲ್ಲಿ ಜಾವಡೇಕರ್‌ ಅವರು ಬಿಡುಗಡೆ ಮಾಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ