ಆ್ಯಪ್ನಗರ

ಮುಂಬಯಿ ಭಾರೀ ಮಳೆ - ವಿಮಾನ ಸಂಚಾರ ವ್ಯತ್ಯಯದಿಂದ ಪ್ರಯಾಣಿಕರ ಪರದಾಟ

ಮುಂಬಯಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ವಿಮಾನ ಸಂಚಾರ ವ್ಯತ್ಯಯ ಮುಂದುವರಿದಿದೆ. ಪರಿಣಾಮ ಪ್ರಯಾಣಿಕರು ಪರದಾಡುತ್ತಿದ್ದಾರೆ.

PTI 5 Sep 2019, 12:56 pm
ಮುಂಬಯಿ: ಮುಂಬಯಿನಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಇವತ್ತು ಕೂಡಾ ವಿಮಾನ ಸಂಚಾರದಲ್ಲಿ ವ್ಯತ್ಯಯವಾಗಿದೆ. ಛತ್ರಪತಿ ಶಿವಾಜಿ ಮಹಾರಾಜ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 30 ವಿಮಾನಗಳ ಸಂಚಾರ ರದ್ದುಗೊಂಡಿದ್ದು, 118 ವಿಮಾನಗಳ ಸಂಚಾರದಲ್ಲಿ ವಿಳಂಬವಾಗಿದೆ. ಪರಿಣಾಮ ಪ್ರಯಾಣಿಕರ ಪರಡಾಟ ಇಂದು ಮುಂದುವರಿದಿದೆ.
Vijaya Karnataka Web chhatrapati shivaji airport

ವಿಮಾನ ನಿಯಂತ್ರಣ ವೆಬ್ ಸೈಟ್ ನೀಡಿರುವ ಮಾಹಿತಿ ಪ್ರಕಾರ, ನಿಲ್ದಾಣದಲ್ಲಿ ಇಳಿಯಬೇಕಾಗಿದ್ದ 14 ವಿಮಾನಗಳು ಹಾಗೂ ಹಾರಾಟ ನಡೆಸಬೇಕಾಗಿದ್ದ 16 ವಿಮಾನಗಳ ಸಂಚಾರ ರದ್ದಾಗಿದೆ.

ಹೀಗಿದ್ದರೂ, ಮುಂಬಯಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ವಿಮಾನ ಸಂಚಾರ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದಿದೆ. ಸಿಬಂಧಿ ಕೊರತೆಯಿಂದ ಇಂಡಿಗೋ ಸಂಸ್ಥೆ ವಿಮಾನ ಸಂಚಾರ ಸೇವೆಯನ್ನು ರದ್ದುಗೊಳಿಸಿದ್ದು ಶೀಘ್ರದಲ್ಲೇ ಪುನರಾರಂಭಿಸುವುದಾಗಿ ತಿಳಿಸಿದೆ.

ನಿಗದಿತ ವಿಮಾನಯಾನದಲ್ಲಿ ಬದಲಾವಣೆ ಆಗಿರುವುದರಿಂದ ಪ್ರಯಾಣಿಕರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಮುನ್ನ ಪರಿಶೀಲನೆ ನಡೆಸುವಂತೆ ಕೋರಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ರೈಲು ಹಾಗೂ ರಸ್ತೆ ಸಂಚಾರಕ್ಕೆ ಅಡ್ಡಿಯಾಗಿದ್ದು ಸಿಬಂಧಿ ಸೂಕ್ತ ಸಮಯಕ್ಕೆ ಕೆಲಸಕ್ಕೆ ಹಾಜರಾಗಲು ಸಾಧ್ಯವಾಗದೇ ಇರುವುದು ಈ ಸಮಸ್ಯೆಗೆ ಕಾರಣವಾಗಿದೆ ಎಂದು ಸಂಸ್ಥೆ ತಿಳಿಸಿದೆ.

ವಿಮಾನಯಾನ ರದ್ದು ಹಾಗೂ ವಿಳಂಬದಿಂದ ಪ್ರಯಾಣಿಕರು ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ. ನಿಲ್ದಾಣದಲ್ಲಿ ಕೆಲವು ಪ್ರಯಾಣಿಕರು ಊಟ, ತಿಂಡಿಗೂ ಪರದಾಟ ನಡೆಸಿದ್ದಾರೆಂದು ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ.

ಮುಂಬಯಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರತಿದಿನ 1000 ರಷ್ಟು ವಿಮಾನಗಳು ಹಾರಾಟ ನಡೆಸುತ್ತವೆ. ಸದ್ಯ ಮಳೆಯ ಅಬ್ಬರ ಕಡಿಮೆಯಾಗಿದ್ದು, ನೀರಿನ ಪ್ರಮಾಣದಲ್ಲಿ ಇಳಿಕೆಯಾಗುತ್ತಿದೆ. ಮತ್ತಷ್ಟು ಮಳೆಯಾಗುವ ಸಾಧ್ಯತೆಗಳ ಕುರಿತಾಗಿ ಹವಾಮಾನ ಇಲಾಖೆ ಎಚ್ಚರಿಕೆ ನೀಡಿರುವುದರಿಂದ ಮುಂಜಾಗರೂಕತಾ ಕ್ರಮವಾಗಿ ಎನ್.ಡಿ.ಆರ್.ಎಫ್ ತಂಡವನ್ನು ಸನ್ನದ್ಧ ಸ್ಥಿತಿಯಲ್ಲಿಡಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ