ಹೊಸದಿಲ್ಲಿ:ತಮಿಳುನಾಡು ಕಡಲಿನಲ್ಲಿ ನಾವೆಗಳ ಡಿಕ್ಕಿಯಿಂದ ಉಂಟಾದ ಕಚ್ಚಾ ತೈಲ ಸೋರಿಕೆ ಸಂಬಂಧ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣವು ಕೇಂದ್ರ ಮತ್ತು ತಮಿಳುನಾಡು ಸರಕಾರದಿಂದ ಪ್ರತಿಕ್ರಿಯೆ ಕೇಳಿದೆ.
ತೈಲ ಸೋರಿಕೆಯಿಂದ ತೊಂದರೆಗೀಡಾದ ಜನರಿಗೆ ಸೂಕ್ತ ಪರಿಹಾರ ದೊರಕಿಸಿಕೊಡಬೇಕು ಎಂದು ಕೋರಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಗೆತ್ತಿಕೊಂಡ ಎನ್ಜಿಟಿ ಅಧ್ಯಕ್ಷ ಸ್ವತಂತ್ರ ಕುಮಾರ್ ನೇತೃತ್ವದ ನ್ಯಾಯಮಂಡಳಿ, ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯ, ಕೇಂದ್ರ ಮತ್ತು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗಳು, ನೌಕಾಯಾನ ಸಚಿವಾಲಯ ಹಾಗೂ ತಮಿಳುನಾಡು ಸರಕಾರಕ್ಕೆ ನೋಟಿಸ್ ಜಾರಿ ಮಾಡಿತು.
ಪ್ರಕರಣಕ್ಕೆ ಸಂಬಂಧಪಟ್ಟ ಎಲ್ಲ ಇಲಾಖೆಯ ಅಧಿಕಾರಿಗಳು ಮಂಗಳವಾರ ನ್ಯಾಯಾಧಿಕರಣದ ಮುಂದೆ ಹಾಜರಾಗಿ ವಿವರಣೆ ನೀಡಬೇಕು ಎಂದು ನೋಟಿಸ್ನಲ್ಲಿ ಸೂಚಿಸಲಾಗಿದೆ.