ಅಮರಾವತಿ: ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನದ ಭರವಸೆ ನೀಡುವವರೆಗೆ ಬಿಜೆಪಿ ಜತೆ ಅಧಿಕೃತವಾಗಿ ಗುರುತಿಸಿಕೊಳ್ಳದೇ ಇರಲು ತೀರ್ಮಾನಿಸಿರುವ ವೈಎಸ್ಆರ್ ಕಾಂಗ್ರೆಸ್ ಪಾರ್ಟಿಯು, ಇದೇ ಕಾರಣದಿಂದ ಲೋಕಸಭೆ ಡೆಪ್ಯೂಟಿ ಸ್ಪೀಕರ್ ಆಫರ್ ಒಪ್ಪಿಕೊಳ್ಳದಿರಲು ನಿರ್ಧರಿಸಿದೆ. ''ಡೆಪ್ಯೂಟಿ ಸ್ಪೀಕರ್ ಹುದ್ದೆ ನೀಡುವುದಾಗಿ ಬಿಜೆಪಿ ಈವರೆಗೆ ಅಧಿಕೃತ ಮಾಹಿತಿಯನ್ನೇನೂ ನೀಡಿಲ್ಲ. ಆದರೆ ಈ ಕುರಿತು ಸುಳಿವು ನೀಡಿದೆ. ವಿಶೇಷ ಸ್ಥಾನಮಾನದ ಬೇಡಿಕೆ ಗಮನದಲ್ಲಿಟ್ಟುಕೊಂಡು ಹುದ್ದೆ ಒಪ್ಪಿಕೊಳ್ಳುವುದು ಬೇಡ ಎಂಬ ತೀರ್ಮಾನಕ್ಕೆ ಬರಲಾಗಿದೆ,'' ಎಂದು ಪಕ್ಷದ ಹಿರಿಯ ನಾಯಕರೊಬ್ಬರು ಭಾನುವಾರ ಮಾಹಿತಿ ನೀಡಿದ್ದಾರೆ. ''ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳಿಂದ ಅಂತರ ಕಾಯ್ದುಕೊಳ್ಳಬೇಕು ಎನ್ನುವುದು ಸದ್ಯಕ್ಕೆ ಪಕ್ಷದ ನಿಲುವು. ರಾಜ್ಯ ವಿಭಜಿಸಿದ ಕಾಂಗ್ರೆಸ್, ಪ್ರತ್ಯೇಕ ಸ್ಥಾನಮಾನ ನೀಡದೇ ಅನ್ಯಾಯ ಮಾಡಿದೆ. ಆದರೆ ರಾಷ್ಟ್ರೀಯ ಹಿತಾಸಕ್ತಿ ಗಮನದಲ್ಲಿಟ್ಟುಕೊಂಡು ಬಿಜೆಪಿ ನೇತೃತ್ವದ ಎನ್ಡಿಎ ಸರಕಾರಕ್ಕೆ ವಿಷಯಾಧಾರಿತ ಬೆಂಬಲ ನೀಡಲಾಗುವುದು,'' ಎಂದು ಅವರು ಮಾಹಿತಿ ನೀಡಿದ್ದಾರೆ. ವೈಎಸ್ಆರ್ ಕಾಂಗ್ರೆಸ್ ಪಾರ್ಟಿಯು ಲೋಕಸಭೆಯಲ್ಲಿ 22 ಸದಸ್ಯರನ್ನು ಹೊಂದಿದೆ.
ಲೋಕಸಭೆ ಡೆಪ್ಯೂಟಿ ಸ್ಪೀಕರ್ ಹುದ್ದೆ ಒಪ್ಪದಿರಲು ಜಗನ್ ಪಕ್ಷ ನಿರ್ಧಾರ
ವಿಶೇಷ ಸ್ಥಾನಮಾನದ ಬೇಡಿಕೆ ಗಮನದಲ್ಲಿಟ್ಟುಕೊಂಡು ಹುದ್ದೆ ಒಪ್ಪಿಕೊಳ್ಳುವುದು ಬೇಡ ಎಂಬ ತೀರ್ಮಾನಕ್ಕೆ ಬರಲಾಗಿದೆ ಎಂದು ವೈಎಸ್ಆರ್ ಕಾಂಗ್ರೆಸ್ ಪಾರ್ಟಿ ಹಿರಿಯ ನಾಯಕರೊಬ್ಬರು ಭಾನುವಾರ ಮಾಹಿತಿ ನೀಡಿದ್ದಾರೆ.
PTI 24 Jun 2019, 5:00 am