ಆ್ಯಪ್ನಗರ

ಎಸ್‌ಸಿ/ಎಸ್‌ಟಿ ಕಾಯಿದೆ ತಿದ್ದುಪಡಿಗೆ ತಡೆ ನೀಡಲೊಪ್ಪದ ಸುಪ್ರೀಂ ಕೋರ್ಟ್‌

ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿಯವರ ಮೇಲಿನ ದೌರ್ಜನ್ಯ ತಡೆ ಕಾಯಿದೆಗೆ ಸಂಸತ್ತು ಇತ್ತೀಚೆಗೆ ತಂದಿರುವ ತಿದ್ದುಪಡಿಗಳಿಗೆ ತಡೆ ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

Vijaya Karnataka 8 Sep 2018, 9:31 am
ಹೊಸದಿಲ್ಲಿ: ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿಯವರ ಮೇಲಿನ ದೌರ್ಜನ್ಯ ತಡೆ ಕಾಯಿದೆಗೆ ಸಂಸತ್ತು ಇತ್ತೀಚೆಗೆ ತಂದಿರುವ ತಿದ್ದುಪಡಿಗಳಿಗೆ ತಡೆ ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಆದರೆ ತಿದ್ದುಪಡಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳಿಗೆ ಸಂಬಂಧಿಸಿದಂತೆ ಆರು ವಾರದೊಳಗೆ ಪ್ರತಿಕ್ರಿಯೆ ನೀಡುವಂತೆ ನ್ಯಾಯಮೂರ್ತಿ ಎ.ಕೆ.ಸಿಕ್ರಿ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ಕೇಂದ್ರಕ್ಕೆ ನೋಟಿಸ್‌ ನೀಡಿದೆ. ಸುಪ್ರೀಂ ಕೋರ್ಟ್‌ ಮಾರ್ಚ್‌ 20ರಂದು ನೀಡಿದ ತೀರ್ಪಿನಲ್ಲಿ ದಲಿತ ದೌರ್ಜನ್ಯ ತಡೆ ಕಾಯಿದೆಯ ದುರುಪಯೋಗವಾಗುತ್ತಿದೆ ಎಂದು ಅಭಿಪ್ರಾಯಪಟ್ಟು, ದೂರು ಬಂದಾಕ್ಷಣ ಯಾವುದೇ ಸರಕಾರಿ ಅಧಿಕಾರಿಯನ್ನು ಬಂಧಿಸುವಂತಿಲ್ಲ ಎಂದು ಹೇಳಿತ್ತು. ಇದು ಕಾಯಿದೆಯನ್ನು ದುರ್ಬಲಗೊಳಿಸುವ ಪ್ರಯತ್ನ ಎಂದು ಆಕ್ಷೇಪಿಸಿ ದಲಿತ ಸಮುದಾಯ ಏಪ್ರಿಲ್‌ 2ರಂದು ಆಯೋಜಿಸಿದ್ದ ಭಾರತ್‌ ಬಂದ್‌ನಲ್ಲಿ 12 ಮಂದಿ ಪ್ರತಿಭಟನಾಕಾರರು ಪ್ರಾಣ ಕಳೆದುಕೊಂಡಿದ್ದರು. ಈ ಎಲ್ಲ ಬೆಳವಣಿಗೆ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಆಗಸ್ಟ್‌ನಲ್ಲಿ ಸಂಸತ್ತಿನಲ್ಲಿ ತಿದ್ದುಪಡಿ ವಿಧೇಯಕ ಮಂಡಿಸಿ ಅಂಗೀಕಾರ ಪಡೆಯುವ ಮೂಲಕ ಪುನಃ ಹಳೆಯ ಕಾಯಿದೆಯನ್ನೇ ಮರುಸ್ಥಾಪಿಸಿತ್ತು. ಈ ತಿದ್ದುಪಡಿ ಪ್ರಶ್ನಿಸಿ ಹಲವರು ಸುಪ್ರೀಂ ಮೊರೆ ಹೋಗಿದ್ದಾರೆ.
Vijaya Karnataka Web Supreme Court


ಸುಪ್ರೀಂ ನೋಟಿಸ್‌:
ಗೋವುಗಳ ಸಾಗಣೆ, ಮಕ್ಕಳ ಕಳ್ಳರೆಂಬ ವದಂತಿಗಳಿಗೆ ಕಿವಿಗೊಟ್ಟು ಸಮೂಹ ಸನ್ನಿ ಅಮಾಯಕರ ಮೇಲೆ ನಡೆಸುತ್ತಿರುವ ಹಲ್ಲೆ, ಹತ್ಯೆ ಪ್ರಕರಣಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಕುರಿತು ವಾರದಲ್ಲಿ ವರದಿ ನೀಡುವಂತೆ ಸುಪ್ರೀಂ ಕೋರ್ಟ್‌ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ.

ಇದುವರೆಗೂ 11 ರಾಜ್ಯ/ಕೇಂದ್ರಾಡಳಿತ ಪ್ರದೇಶಗಳಗಷ್ಟೇ ವರದಿ ಸಲ್ಲಿಸಿವೆ. ಇನ್ನೊಂದು ವಾರದಲ್ಲಿ ವರದಿ ಸಲ್ಲಿಸದೇ ಹೋದಲ್ಲಿ ಆಯಾ ರಾಜ್ಯಗಳ ಗೃಹ ಕಾರ‍್ಯದರ್ಶಿಗಳೇ ಖುದ್ದು ಹಾಜರಾಗಿ ವಿವರಣೆ ನೀಡಬೇಕಾಗುತ್ತದೆ ಎಂದು ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ ಖಡಕ್‌ ಎಚ್ಚರಿಕೆ ನೀಡಿದೆ.

ದೇಶದಲ್ಲಿ ಹೆಚ್ಚುತ್ತಿರುವ ಸಮೂಹ ಸನ್ನಿ ಹಲ್ಲೆ/ಹತ್ಯೆ ಘಟನೆಗಳಿಗೆ ಕಡಿವಾಣ ಹಾಕುವಂತೆ ಕೋರಿ ಕಾಂಗ್ರೆಸ್‌ ನಾಯಕ ತೆಹಸೀನ್‌ ಪೂನಾವಾಲ ಮತ್ತು ಗಾಂಧೀಜಿ ಅವರ ಮೊಮ್ಮಗ ತುಷಾರ್‌ ಗಾಂಧಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಗೆ ಸಂಬಂಧಿಸಿದಂತೆ ಸುಪ್ರೀಂ ಈ ಸೂಚನೆ ನೀಡಿದೆ. ವಿಚಾರಣೆ ವೇಳೆ, ಕೇಂದ್ರ ಸರಕಾರವು ಈ ರೀತಿಯ ಕೃತ್ಯ ಎಸಗುವವರನ್ನು ಶಿಕ್ಷಿಸುವ ನಿಟ್ಟಿನಲ್ಲಿ ಕಾನೂನು ರಚಿಸಲು ಉನ್ನತಾಧಿಕಾರದ ಸಚಿವರ ಸಮಿತಿಯನ್ನು ರಚಿಸಲಾಗಿದೆ ಎಂದು ವಿವರಣೆ ನೀಡಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ