ಆ್ಯಪ್ನಗರ

ತೊಗರಿ ಖರೀದಿ ಪ್ರಸ್ತಾವನೆಗೆ ನಿರ್ಧಾರ

ಪ್ರಸಕ್ತ ಸಾಲಿನಲ್ಲಿ ಬೆಂಬಲ ಬೆಲೆಯಲ್ಲಿ ರೈತರಿಂದ ತೊಗರಿ ಖರೀದಿ ಮಾಡುವಂತೆ ರಾಜ್ಯ ಸರಕಾರಕ್ಕೆ ಸೂಕ್ತ ಪ್ರಸ್ತಾವನೆ ಸಲ್ಲಿಸಲು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಟಾಸ್ಕ್‌ ಫೋರ್ಸ್‌ ಸಮಿತಿ ನಿರ್ಧಾರ ಕೈಗೊಂಡಿತು.

Vijaya Karnataka 28 Nov 2018, 3:37 pm
ಕಲಬುರಗಿ :ಪ್ರಸಕ್ತ ಸಾಲಿನಲ್ಲಿ ಬೆಂಬಲ ಬೆಲೆಯಲ್ಲಿ ರೈತರಿಂದ ತೊಗರಿ ಖರೀದಿ ಮಾಡುವಂತೆ ರಾಜ್ಯ ಸರಕಾರಕ್ಕೆ ಸೂಕ್ತ ಪ್ರಸ್ತಾವನೆ ಸಲ್ಲಿಸಲು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಟಾಸ್ಕ್‌ ಫೋರ್ಸ್‌ ಸಮಿತಿ ನಿರ್ಧಾರ ಕೈಗೊಂಡಿತು.
Vijaya Karnataka Web decision on buying a toor
ತೊಗರಿ ಖರೀದಿ ಪ್ರಸ್ತಾವನೆಗೆ ನಿರ್ಧಾರ


2018-19ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ಒಟ್ಟು 4.51,999 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿದ್ದು, ಇದರಿಂದ 26,53,672 ಕ್ವಿಂಟಾಲ್‌ ತೊಗರಿ ಖರೀದಿ ಮಾಡುವಂತೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ನಿರ್ಧಾರ ಕೈಗೊಳ್ಳಲಾಯಿತು.

ಇದಕ್ಕೂ ಮುನ್ನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟೇಶಕುಮಾರ ಅವರು, ಸಕಾಲದಲ್ಲಿ ಮಳೆ ಬಾರದ ಕಾರಣ ಹೆಚ್ಚು ಪ್ರಮಾಣದಲ್ಲಿ ಬೆಳೆ ನಾಶವಾಗಿ ಇಳುವರಿ ಕಡಿಮೆ ಬರಬಹುದು ಎಂದು ಅಂದಾಜಿಸಲಾಗಿದೆ. ಒಟ್ಟಾರೆ ಬರುವ ತೊಗರಿ ಇಳುವರಿಯನ್ನು ಕನಿಷ್ಠ ಬೆಂಬಲ ಬೆಲೆಯಡಿ ಖರೀದಿಗೆ ಸೂಕ್ತ ಏಜೆನ್ಸಿಗಳನ್ನು ನೇಮಿಸಿ ಖರೀದಿ ಪ್ರಕ್ರಿಯೆ ಆರಂಭಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.

ದಾಸ್ತಾನು ಮಾಡಿಕೊಳ್ಳಲು ಸ್ಥಳಾವಕಾಶ ಇಟ್ಟುಕೊಳ್ಳಬೇಕು. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಖರೀದಿ ಪ್ರಕ್ರಿಯೆಗೆ ಬೇಕಾಗಿರುವ ಅಗತ್ಯ ಸಾಮಗ್ರಿಗಳನ್ನು ಇರುವ ಬಗ್ಗೆ ತಾಲೂಕು ಮಟ್ಟದಲ್ಲಿ ಸಭೆ ನಡೆಸಿ ಎ.ಪಿ.ಎಂ.ಸಿ. ಹಾಗೂ ಸಹಕಾರ ಇಲಾಖೆಯ ಅಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು. ಕಳೆದ ಬಾರಿಯಂತೆ ಈ ಬಾರಿಯೂ ಪ್ರಾಥಮಿಕ ಪತ್ತಿನ ಸಹಕಾರ ಸಂಘಗಳಿಗೆ ಸೂಕ್ತ ತರಬೇತಿ ನೀಡುವಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.

ಜಂಟಿ ಕೃಷಿ ನಿರ್ದೇಶಕ ರಿತೇಂದ್ರನಾಥ ಸುಗೂರ ಮಾತನಾಡಿ, ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಸಕಾಲದಲ್ಲಿ ಮಳೆಯಾಗದ ಕಾರಣ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಶೇ.30 ರಿಂದ 50 ಮತ್ತು ಶೇ.50ಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಬೆಳೆ ಹಾಳಾಗಿರುವ ಕಾರಣ ಈ ಬಾರಿ ಇಳುವರಿ ಕಡಿಮೆಯಾಗಿದೆ ಎಂದ ಅವರು ಕಳೆದ ಬಾರಿ ಖರೀದಿ ಪ್ರಕ್ರಿಯೆಯ ಸಮಗ್ರ ಮಾಹಿತಿಯನ್ನು ಸಭೆಗೆ ವಿವರಿಸಿದರು.

ರಾಜ್ಯ ಉಗ್ರಾಣ ನಿಗಮದಲ್ಲಿ 15 ಲಕ್ಷ ಕ್ವಿಂಟಾಲ್‌ ಹಾಗೂ ಕೇಂದ್ರ ಸರ್ಕಾರದ ಉಗ್ರಾಣದಲ್ಲಿ 3 ಲಕ್ಷ ಕ್ವಿಂಟಾಲ ತೊಗರಿ ಸಂಗ್ರಹಣೆಗೆ ಸ್ಥಳ ಇರುವುದಾಗಿ ಉಗ್ರಾಣ ವ್ಯವಸ್ಥಾಪಕರು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು.

ಭತ್ತ ಖರೀದಿಗೆ ಸಿದ್ಧತೆ ಕೈಗೊಳ್ಳಿ

2018-19ನೇ ಸಾಲಿಗೆ ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಿದಂತೆ ರೈತರಿಂದ ಸಾಮಾನ್ಯ ಭತ್ತ ಪ್ರತಿ ಕ್ವಿಂಟಾಲ್‌ಗೆ 1750 ರೂ.ಗಳಂತೆ ಖರೀದಿಸಲು ನವೆಂಬರ್‌ 24 ರಂದು ರಾಜ್ಯ ಸರ್ಕಾರ ಆದೇಶಿಸಿದ್ದು, ಅದರಂತೆ ಆಹಾರ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಸಾಮಾನ್ಯ ಭತ್ತವನ್ನು ಪ್ರತಿ ಸಣ್ಣ ಮತ್ತು ಅತೀ ಸಣ್ಣ ರೈತರಿಂದ ಗರಿಷ್ಠ 40 ಕ್ವಿಂಟಾಲ್‌ ಮೀರದಂತೆ ಖರೀದಿಸಲು ಅವಕಾಶವಿದ್ದು, ಇದಕ್ಕಾಗಿ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತವನ್ನು ಜಿಲ್ಲೆಯಲ್ಲಿ ಸಂಗ್ರಹಣಾ ಏಜೆನ್ಸಿಯಾಗಿ ನೇಮಿಸಲಾಗಿದೆ. ಡಿಸೆಂಬರ್‌ 5 ರಿಂದ 15ರ ವರೆಗೆ ನೋಂದಣಿ ಕಾರ್ಯ ನಡೆಯಲಿದ್ದು, ಡಿಸೆಂಬರ್‌ 16 ರಿಂದ 31ರ ವರೆಗೆ ಅಕ್ಕಿ ಗಿರಣಿಗಳ ಮೂಲಕ ಭತ್ತ ಖರೀದಿ ಪ್ರಕ್ರಿಯೆ ನಡೆಯಲಿದೆ. ಇದಕ್ಕಾಗಿ ಜಿಲ್ಲೆಯಲ್ಲಿನ ಭತ್ತ ಬೆಳೆಯುವ ತಾಲೂಕುವಾರು ಪ್ರದೇಶ ಹಾಗೂ ಅಕ್ಕಿ ಗಿರಣಿಗಳ ಮಾಹಿತಿಯನ್ನು ಒದಗಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕರಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ಸಭೆಯಲ್ಲಿ ಕರ್ನಾಟಕ ತೊಗರಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ರಾಮಪ್ಪ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕ ಡಾ.ರಾಮೇಶ್ವರಪ್ಪ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಉಗ್ರಾಣ ನಿಗಮದ ವ್ಯವಸ್ಥಾಪಕರು, ಜಿಲ್ಲಾ ಟಾಸ್ಕ್‌ ಪೋರ್ಸ್‌ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಸೇರಿದಂತೆ ಇನ್ನೀತರ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಕಳೆದ ವರ್ಷ ಬೆಂಬಲ ಬೆಲಯಲ್ಲಿ ತೊಗರಿ ಖರೀದಿ ಸಂದರ್ಭದಲ್ಲಿ ಕಂಡು ಬಂದಿರುವ ನ್ಯೂನ್ಯತೆಗಳು ಈ ವರ್ಷ ಮರುಕಳಿಸದಂತೆ ಅಗತ್ಯ ಪೂರ್ವಭಾವಿ ಸಿದ್ಧತೆ ಕೈಗೊಳ್ಳಿ. ತೊಗರಿ ಖರೀದಿ ಪ್ರಮಾಣಕ್ಕನುಗುಣವಾಗಿ ಖಾಲಿ ಚೀಲಗಳ ಕೊರತೆಯಾಗದಂತೆ ಎಚ್ಚರವಹಿಸಬೇಕು.

- ಆರ್‌.ವೆಂಕಟೇಶಕುಮಾರ ಜಿಲ್ಲಾಧಿಕಾರಿಗಳು ಕಲಬುರಗಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ