ಆ್ಯಪ್ನಗರ

ವಿಧಾನಸೌಧದಲ್ಲೇ ವಿಧಾನಮಂಡಲ ಅಧಿವೇಶನ, ಸಾರ್ವಜನಿಕರಿಗೆ ಪ್ರವೇಶ ಇಲ್ಲ

ಕೋವಿಡ್‌ ಹಿನ್ನೆಲೆಯಲ್ಲಿ ಸಾಕಷ್ಟು ಮುನ್ನೆಚ್ಚರಿಕೆ ಕ್ರಮದೊಂದಿಗೆ ಕಲಾಪ ನಡೆಸಲು ತೀರ್ಮಾನಿಸಲಾಗಿದ್ದು, ಸದಸ್ಯರಿಗೆ ಫೇಸ್‌ ಶೀಲ್ಡ್‌, ಮಾಸ್ಕ್ ನೀಡಲಾಗುತ್ತದೆ. ಜೊತೆಗೆ ಸೀಟುಗಳ ನಡುವೆ ಗಾಜಿನ ಪರದೆ ಅಳವಡಿಸಲಾಗುತ್ತದೆ.

Vijaya Karnataka 24 Aug 2020, 8:57 pm

ಬೆಂಗಳೂರು: ಕೋವಿಡ್‌ ಹಿನ್ನೆಲೆಯಲ್ಲಿ ವಿಧಾನಮಂಡಲ ಅಧಿವೇಶನವನ್ನು ಬೇರೆಡೆ ನಡೆಸಬೇಕೆಂಬ ಚರ್ಚೆಗೆ ಕೊನೆಗೂ ತೆರೆ ಬಿದ್ದಿದ್ದು, ಸೆಪ್ಟೆಂಬರ್‌ 21 ರಿಂದ ಹತ್ತು ದಿನಗಳ ಕಾಲ ವಿಧಾನಸೌಧದಲ್ಲೇ ಕಲಾಪ ನಡೆಸಲು ತೀರ್ಮಾನಿಸಲಾಗಿದೆ.
Vijaya Karnataka Web Vidhan Soudha


ಕೋವಿಡ್‌ ಹಿನ್ನೆಲೆಯಲ್ಲಿ ಸಾಕಷ್ಟು ಮುನ್ನೆಚ್ಚರಿಕೆ ಕ್ರಮದೊಂದಿಗೆ ಕಲಾಪ ನಡೆಸಲು ತೀರ್ಮಾನಿಸಲಾಗಿದೆ. ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಜೆ.ಸಿ.ಮಾಧುಸ್ವಾಮಿ, ಮುಖ್ಯಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್‌ ಅವರು ಈ ಸಂಬಂಧ ಸೋಮವಾರ ಸಭೆ ನಡೆಸಿ ಈ ತೀರ್ಮಾನ ತೆಗೆದುಕೊಂಡಿದ್ದಾರೆ.

ಕೋವಿಡ್‌ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ದೃಷ್ಟಿಯಿಂದ ಅರಮನೆ ಮೈದಾನ ಅಥವಾ ಜಿಕೆವಿಕೆ ಆವರಣದಲ್ಲಿ ಅಧಿವೇಶನ ನಡೆಸುವ ಬಗ್ಗೆ ಈ ಹಿಂದೆ ಚಿಂತನೆ ನಡೆದಿತ್ತು. ಆದರೆ ಇದರಿಂದ ಸರಕಾರದ ಬೊಕ್ಕಸಕ್ಕೆ ಅನಗತ್ಯ ಹೊರೆ ಬೀಳುವ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲೇ ಅಧಿವೇಶನ ನಡೆಸಲಾಗುತ್ತಿದೆ.

ವಿಧಾನಮಂಡಲ ಅಧಿವೇಶನ: ಸಭಾಂಗಣ ಪರಿಶೀಲನೆ ನಡೆಸಿದ ಸ್ಪೀಕರ್ ಕಾಗೇರಿ‌

ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಜೆ.ಸಿ.ಮಾಧುಸ್ವಾಮಿ, ವಿಧಾನಸೌಧದಲ್ಲೇ ಕಲಾಪ ನಡೆಸುವುದಕ್ಕೆ ಸ್ಪೀಕರ್‌ ತೀರ್ಮಾನಿಸಿದ್ದಾರೆ. ಈ ಬಾರಿ ಅಧಿವೇಶನಕ್ಕೆ ಸಾರ್ವಜನಿಕ ಪ್ರವೇಶಕ್ಕೆ ಅವಕಾಶವಿರುವುದಿಲ್ಲ ಎಂದು ಹೇಳಿದರು. ಅಂತರ ಕಾಯ್ದುಕೊಳ್ಳುವುದಕ್ಕಾಗಿ ಎರಡು ಸೀಟುಗಳ ನಡುವೆ ಗಾಜಿನ ಪರದೆ ಹಾಕಲಾಗುತ್ತದೆ. ಎಲ್ಲ ಸದಸ್ಯರಿಗೂ ಫೇಸ್‌ ಶೀಲ್ಡ್‌ ಹಾಗೂ ಮಾಸ್ಕ್‌ ನೀಡಲಾಗುತ್ತದೆ. ಪ್ರಧಾನ ಕಾರ್ಯದರ್ಶಿ ಹಾಗೂ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಮಾತ್ರ ಸದನದೊಳಗೆ ಕುಳಿತುಕೊಳ್ಳುವುದಕ್ಕೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ತಿಳಿಸಿದರು.

ಒಂದು ಇಲಾಖೆಯಿಂದ ಒಬ್ಬ ಅಧಿಕಾರಿ ಮಾತ್ರ ಸದನದೊಳಗೆ ಇರಬೇಕು. ಸಚಿವರ ಆಪ್ತ ಕಾರ್ಯದರ್ಶಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಪತ್ರಕರ್ತರಿಗೆ ಎರಡು ಗ್ಯಾಲರಿ ಮಾಡುವ ಚಿಂತನೆ ನಡೆಯುತ್ತಿದೆ. ಸಾರ್ವಜನಿಕರ ಪ್ರವೇಶಕ್ಕೆ ಈ ಬಾರಿ ಪಾಸ್‌ ನೀಡುವುದಿಲ್ಲ ಎಂದು ಹೇಳಿದರು.

70 ವರ್ಷ ಮೇಲ್ಪಟ್ಟವರಿಗೆ ವಿನಾಯಿತಿ?

ಇದರ ಜತೆಗೆ 70 ವರ್ಷ ಮೇಲ್ಪಟ್ಟ ಹಾಗೂ ಗಂಭೀರ ಕಾಯಿಲೆ ಇರುವ ಶಾಸಕರಿಗೆ ಕಲಾಪದಲ್ಲಿ ಭಾಗವಹಿಸುವುದಕ್ಕೆ ವಿನಾಯಿತಿ ನೀಡುವ ಬಗ್ಗೆಯೂ ಚರ್ಚೆ ನಡೆಯುತ್ತಿದೆ. ಸದ್ಯದಲ್ಲೇ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ