ಆ್ಯಪ್ನಗರ

ಪಿಎಫ್‌ಐ, ಎಸ್‌ಡಿಪಿಐ ನಿಷೇಧಕ್ಕೆ ಪರಿಶೀಲನೆ: ಪುಂಡರಿಂದಲೇ ನಷ್ಟ ವಸೂಲಿಗೆ ನಿರ್ಧಾರ!

ಬೆಂಗಳೂರು ಹಿಂಸಾಚಾರದಲ್ಲಿ ಪಿಎಫ್‌ಐ, ಎಸ್‌ಡಿಪಿಐ ಪಾತ್ರ ಇರುವುದು ತನಿಖೆಯಲ್ಲಿ ಸಾಬೀತಾದರೆ ಆ ಸಂಘಟನೆಗಳ ನಿಷೇಧದ ಬಗ್ಗೆ ಪರಿಶೀಲಿಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Vijaya Karnataka Web 12 Aug 2020, 10:46 pm
ಬೆಂಗಳೂರು: ಹಿಂಸಾಚಾರದಲ್ಲಿ ಪಿಎಫ್‌ಐ, ಎಸ್‌ಡಿಪಿಐ ಪಾತ್ರ ಇರುವುದು ತನಿಖೆಯಲ್ಲಿ ಸಾಬೀತಾದರೆ ಆ ಸಂಘಟನೆಗಳ ನಿಷೇಧದ ಬಗ್ಗೆ ಪರಿಶೀಲಿಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ''ಸಿಸಿಟಿವಿ, ದಾಖಲೆಗಳ ಆಧಾರದಲ್ಲಿ ದುಷ್ಕರ್ಮಿಗಳ ಬಂಧನ ನಡೆಸಲಾಗುತ್ತಿದೆ. ಇದೊಂದು ಪೂರ್ವನಿಯೋಜಿತ ಕೃತ್ಯ. ಸಮಾಜಘಾತುಕ ಶಕ್ತಿಗಳ ಷಡ್ಯಂತ್ರವಿದೆ,'' ಎಂದು ಉಡುಪಿಯಲ್ಲಿ ಅವರು ತಿಳಿಸಿದರು.
Vijaya Karnataka Web basavaraj bommai


ಈ ನಡುವೆ ಬೆಂಗಳೂರಿನಲ್ಲಿ ಉನ್ನತ ಪೊಲೀಸ್‌ ಅಧಿಕಾರಿಗಳ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಪ್ರದೇಶ ಮಾದರಿಯಲ್ಲಿ ಪುಂಡರಿಂದಲೇ ನಷ್ಟ ವಸೂಲಿಗೆ ನಿರ್ಧರಿಸಿರುವುದಾಗಿ ಹೇಳಿದರು.

ಸಾರ್ವಜನಿಕ ಆಸ್ತಿಪಾಸ್ತಿ ಹಾನಿಗೆ ಆದ ನಷ್ಟವನ್ನು ಗಲಭೆಕೋರರಿಂದಲೇ ಭರಿಸುವಂತೆ ಸುಪ್ರೀಂ ಕೋರ್ಟ್‌ ನಿರ್ದೇಶನ ನೀಡಿದೆ. ಇದನ್ನೇ ಕಾನೂನು ಎಂದು ಪರಿಗಣಿಸುವಂತೆಯೂ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಗಲಭೆಕೋರರಿಂದಲೇ ನಷ್ಟ ಭರಿಸುವುದಕ್ಕೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಡಿಜೆ ಹಳ್ಳಿ ಗಲಭೆ ಶುರುವಾಗಿದ್ದು ಹೇಗೆ? ಪೊಲೀಸರೇ ಟಾರ್ಗೆಟ್‌ ಆಗಿದ್ದು ಯಾಕೆ?

''ಘಟನೆ ನಡೆದ ಮೂರು ಗಂಟೆಗಳಲ್ಲಿ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಪೊಲೀಸರ ನೈತಿಕ ಸ್ಥೈರ್ಯ ಕೆಡಿಸಬೇಡಿ. ಪೊಲೀಸರ ಸಮಯೋಚಿತ ನಿರ್ಧಾರದಿಂದ ಪುಂಡರ ನಿಗ್ರಹ, ಪರಿಸ್ಥಿತಿ ಹತೋಟಿಗೆ ಪೊಲೀಸರು ಯಶಸ್ವಿಯಾಗಿದ್ದಾರೆ,'' ಎಂದು ಸಚಿವರು ಶ್ಲಾಘಿಸಿದರು.

''ಮುಂಜಾಗ್ರತಾ ಕ್ರಮವಾಗಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ. ಹೈದರಾಬಾದ್‌, ಚೆನ್ನೈನಿಂದ ತಲಾ ಮೂರು ಸಿಆರ್‌ಪಿಎಫ್‌ ತುಕಡಿ ರವಾನೆಯಾಗಲಿದೆ. ರಾರ‍ಯಪಿಡ್‌ ಆ್ಯಕ್ಷನ್‌ ಫೋರ್ಸ್‌, ಗರುಡವನ್ನೂ ನಿಯೋಜಿಸಲಾಗಿದೆ,'' ಎಂದರು.

ಗಲ್ಲಿಗಲ್ಲಿಗೆ ನುಗ್ಗಿ ಕೆ.ಜಿ. ಹಳ್ಳಿ ಆರೋಪಿಗಳ ಹೆಡೆಮುರಿ ಕಟ್ಟುತ್ತೇವೆ: ಆರ್‌. ಅಶೋಕ್‌ ಶಪಥ

ಮ್ಯಾಜಿಸ್ಪ್ರೇಟ್‌ ತನಿಖೆಗೆ ಸರಕಾರ ಆದೇಶ
ಬೆಂಗಳೂರು: ಗಲಭೆ ಬಗ್ಗೆ ಜಿಲ್ಲಾ ಮ್ಯಾಜಿಸ್ಪ್ರೇಟ್‌ ಮೂಲಕ ತನಿಖೆ ನಡೆಸುವುದಕ್ಕೆ ರಾಜ್ಯ ಸರಕಾರ ತೀರ್ಮಾನಿಸಿದೆ. ಇದರ ಜತೆಗೆ ಗಲಭೆ ಸೃಷ್ಟಿಸಿದ ವ್ಯಕ್ತಿಗಳಿಂದಲೇ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟದ ಹಣವನ್ನು ವಸೂಲಿ ಮಾಡಲಾಗುವುದು ಎಂಬ ಎಚ್ಚರಿಕೆಯನ್ನು ನೀಡಲಾಗಿದೆ.

ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ, ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ, ಕಂದಾಯ ಸಚಿವ ಆರ್‌.ಅಶೋಕ್‌, ಡಿಐಜಿ ಪ್ರವೀಣ್‌ ಸೂದ್‌, ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಹಾಗೂ ಹಿರಿಯ ಅಧಿಕಾರಿಗಳ ಜತೆಗೆ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಸಭೆ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ, 'ರಾಷ್ಟ್ರೀಯ ಮಾನವ ಹಕ್ಕು ಆಯೋಗ ನಿರ್ದೇಶನದ ಪ್ರಕಾರ ಜಿಲ್ಲಾ ಮ್ಯಾಜಿಸ್ಪ್ರೇಟ್‌ ನೇತೃತ್ವದಲ್ಲಿ ತನಿಖೆ ನಡೆಸಲು ನಿರ್ಧರಿಸಲಾಗಿದೆ. ಯಾರೇ ತಪ್ಪು ಮಾಡಿರಲಿ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲಾಗುತ್ತದೆ' ಎಂದು ಹೇಳಿದರು.

ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಎಲ್ಲ ವಿಚಾರಗಳ ಬಗ್ಗೆ ಚರ್ಚೆ ನಡೆದಿದೆ. ದೊಂಬಿ, ಪುಂಡಾಟಿಕೆ, ಪೊಲೀಸರ ಮೇಲೆ ಹಲ್ಲೆ, ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಬಗ್ಗೆ ಮಾಹಿತಿ ನೀಡಲಾಗಿದೆ. ಈ ರೀತಿಯ ಘಟನೆ ಸಹಿಸುವುದಕ್ಕೆ ಸಾಧ್ಯವಿಲ್ಲ. ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ