ಆ್ಯಪ್ನಗರ

ಬಸ್‌ ಪ್ರಯಾಣ ದರ ಸದ್ಯಕ್ಕಿಲ್ಲ

ಬಸ್‌ ಪ್ರಯಾಣ ದರ ಏರಿಕೆ ಪ್ರಸ್ತಾವನೆಗೆ ಸಿಎಂ ಎಚ್‌ಡಿಕುಮಾರಸ್ವಾಮಿ ಸದ್ಯಕ್ಕೆ ತಡೆ ನೀಡಿದ್ದಾರೆ...

Vijaya Karnataka 25 Jun 2019, 5:00 am
ಬೆಂಗಳೂರು: ಬಸ್‌ ಪ್ರಯಾಣ ದರ ಏರಿಕೆ ಪ್ರಸ್ತಾವನೆಗೆ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಸದ್ಯಕ್ಕೆ ತಡೆ ನೀಡಿದ್ದಾರೆ.
Vijaya Karnataka Web transport


ದರ ಏರಿಕೆ ಅನಿವಾರ್ಯತೆ ಕುರಿತಂತೆ ಸೂಕ್ತ ಸಮರ್ಥನೆಗಳೊಂದಿಗೆ ಮರು ಪ್ರಸ್ತಾವನೆ ಸಲ್ಲಿಸುವಂತೆ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಅವರು ಸೂಚಿಸಿದ್ದಾರೆ.

ಸಿಎಂ ಗೃಹ ಕಚೇರಿ 'ಕೃಷ್ಣಾ'ದಲ್ಲಿ ಸೋಮವಾರ ಸಿಎಂ ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಸಾರಿಗೆ ಇಲಾಖೆ ಹಾಗೂ ನಾಲ್ಕು ಸಾರಿಗೆ ನಿಗಮಗಳ ಪ್ರಗತಿ ಪರಿಶೀಲನೆ ನಡೆಯಿತು. ನಿರಂತರ ಡೀಸೆಲ್‌ ದರ ಏರಿಕೆಯಾಗುತ್ತಿದ್ದರೂ 4 ವರ್ಷಗಳಿಂದ ಬಸ್‌ ಪ್ರಯಾಣ ದರ ಹೆಚ್ಚಳ ಮಾಡಿಲ್ಲ. ಇದರಿಂದ ಸಾರಿಗೆ ನಿಗಮಗಳು ನಷ್ಟ ಅನುಭವಿಸುತ್ತಿದ್ದು, ದರ ಏರಿಕೆ ಮಾಡಬೇಕು ಎಂದು ಸಾರಿಗೆ ಇಲಾಖೆ ಪ್ರಸ್ತಾವನೆ ಮಂಡಿಸಿತು. ಈ ಪ್ರಸ್ತಾವನೆ ಒಪ್ಪದ ಸಿಎಂ, ರಾಜ್ಯ ಸಾರಿಗೆ ಸಂಸ್ಥೆಯನ್ನು ಇನ್ನಷ್ಟು ಜನಸ್ನೇಹಿಯಾಗಿ ರೂಪಿಸಲು ಹಾಗೂ ಲಾಭದಾಯಕ ಮಾಡಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಗಮನ ಹರಿಸುವಂತೆ ಸೂಚಿಸಿದರು. ಬೆಂಗಳೂರು ನಗರದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಎಲೆಕ್ಟ್ರಿಕಲ್‌ ಬಸ್‌ ಗಳನ್ನು ಪರಿಚಯಿಸುವ ಕುರಿತು ವಿವರವಾದ ಪ್ರಸ್ತಾವನೆ ಸಿದ್ಧಪಡಿಸಲು ಅಧಿಕಾರಿಗಳಿಗೆ ಈ ಸಂದರ್ಭದಲ್ಲಿ ಸಿಎಂ ಸೂಚನೆ ನೀಡಿದರು.

ಗಾರ್ಮೆಂಟ್ಸ್‌, ಕಾರ್ಖಾನೆ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರ ಅನುಕೂಲಕ್ಕಾಗಿ ಸಾರಿಗೆ ಸಂಸ್ಥೆ ಬಸ್‌ ಗಳನ್ನು ಬಳಸಿಕೊಳ್ಳಲು ಕಾರ್ಮಿಕ ಇಲಾಖೆಗೆ ಪ್ರಸ್ತಾವನ್ನೆ ಕಳುಹಿಸಲಾಗಿದೆ. ಈ ಕಾರ್ಮಿಕರು ಸಾರಿಗೆ ಬಸ್‌ ಗಳಲ್ಲಿ ಪ್ರಯಾಣಿಸಲು ರಿಯಾಯಿತಿ ದರದಲ್ಲಿ ಬಸ್‌ಪಾಸ್‌ ಗಳನ್ನು ನೀಡಲು ನಿರ್ಧರಿಸಲಾಗಿದೆ ಎಂಬುದನ್ನು ಈ ಸಂದರ್ಭದಲ್ಲಿ ಇಲಾಖೆ ಅಧಿಕಾರಿಗಳು ಸಿಎಂ ಗಮನಕ್ಕೆ ತಂದರು.

ಬಿಎಂಟಿಸಿ ಗಣಕೀಕರಣಕ್ಕೆ ಒತ್ತು ನೀಡುವುದು, ಹೊಸ ಬಸ್‌ಗಳ ಖರೀದಿ, ನೂತನ ಬಸ್‌ ಡಿಪೊ ಹಾಗೂ ಬಸ್‌ ನಿಲ್ದಾಣಗಳ ನಿರ್ಮಾಣ ಮತ್ತಿತರ ಪ್ರಸ್ತಾವನೆಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು. ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ, ಸಚಿವರಾದ ಜಿ ಟಿ. ದೇವೇಗೌಡ, ಎಚ್‌.ಡಿ. ರೇವಣ್ಣ, ಕೆಎಸ್ಸಾರ್ಟಿಸಿ ಅಧ್ಯಕ್ಷ ಸತ್ಯನಾರಾಯಣ, ಬಿಎಂಟಿಸಿ ಅಧ್ಯಕ್ಷ ಎನ್‌.ಎ.ಹ್ಯಾರೀಸ್‌, ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಬಿ. ಬಸವರಾಜು, ಕೆಎಸ್‌ಆರ್‌ಟಿಸಿ ಎಂ.ಡಿ. ಶಿವಯೋಗಿ ಕಳಸದ್‌ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ