ಆ್ಯಪ್ನಗರ

ಕೋವಿಡ್‌ ಆತಂಕ:ಉಪಚುನಾವಣೆಯಲ್ಲಿ ಅಭ್ಯರ್ಥಿಗಳಿಗೆ ಸವಾಲಾದ ಪ್ರಚಾರ ಕಾರ್ಯ!

ನವೆಂಬರ್‌ 3 ರಂದು ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ನಡೆಯಲಿದೆ. ಕೋವಿಡ್‌ ಕಾರಣದಿಂದಾಗಿ ಈ ಉಪಚುನಾವಣೆಯಲ್ಲಿ ಪ್ರಚಾರ ಕಾರ್ಯ ಅಭ್ಯರ್ಥಿಗಳ ಪಾಲಿಗೆ ಸವಾಲಾಗಿದೆ. ಈ ಕುರಿತಾದ ವರದಿ ಇಲ್ಲಿದೆ.

Vijaya Karnataka Web 9 Oct 2020, 9:33 am
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಅಟ್ಟಹಾಸ ಮುಂದುವರಿದಿದೆ. ಈ ನಡುವೆ ಆರ್‌ಆರ್‌ ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ನವೆಂಬರ್‌ 3 ರಂದು ನಡೆಯಲಿದೆ. ಈ ಎರಡು ಕ್ಷೇತ್ರಗಳ ಉಪಚುನಾವಣಾ ಕಣ ಗರಿಗೆದರಿದ್ದು ಅಭ್ಯರ್ಥಿಗಳು ಪ್ರಚಾರ ಕಾರ್ಯವನ್ನು ಈಗಾಗಲೇ ಆರಂಭಿಸಿದ್ದಾರೆ.
Vijaya Karnataka Web party flag


ಆದರೆ ಈ ಬಾರಿಯ ಚುನಾವಣೆಯಲ್ಲಿ ಮತದಾರರನ್ನು ತಲುಪುವುದು ಅಭ್ಯರ್ಥಿಗಳ ಪಾಲಿಗೂ ಸವಾಲಿನ ಸಂಗತಿಯಾಗಿದೆ. ಕೋವಿಡ್‌ ಇರುವುದರಿಂದ ಎಂದಿನಂತೆ ಪ್ರಚಾರ ಕಾರ್ಯ ನಡೆಸಲು ಸಾಧ್ಯವಿಲ್ಲ. ಮತದಾರರು ಹಾಗೂ ಅಭ್ಯರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಸಾಕಷ್ಟು ಎಚ್ಚರಿಕೆಯನ್ನು ಕೈಗೊಳ್ಳಬೇಕಾಗಿದೆ.

ಕೊನೆಗೂ ನಗರ ಸ್ಥಳೀಯ ಸಂಸ್ಥೆಗಳ ಮೀಸಲು ಪ್ರಕಟ..! ಖಾಲಿಯಿದ್ದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಶೀಘ್ರ ಭರ್ತಿ

ಈಗಾಗಲೇ ಚುನಾವಣಾ ಆಯೋಗ ಕೂಡಾ ಕೆಲವೊಂದು ನಿಯಮಾವಳಿಗಳನ್ನು ಬಿಡುಗಡೆಗೊಳಿಸಿದೆ. ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನಲೆಯಲ್ಲಿ ಭಾರತ ಚುನಾವಣಾ ಆಯೋಗವು ರಾಜಕೀಯ ಪಕ್ಷಗಳ ಸ್ಟಾರ್ ಪ್ರಚಾರಕರ ಸಂಖ್ಯೆಯನ್ನು ಮಿತಿಗೊಳಿಸಿ ಆದೇಶ ಹೊರಡಿಸಿದೆ.

ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ಪಕ್ಷಗಳಿಗೆ 40 ಸ್ಟಾರ್ ಪ್ರಚಾರಕರನ್ನು ಬಳಸಿಕೊಳ್ಳುವ ಅವಕಾಶ ನೀಡಲಾಗಿತ್ತು. ಆದರೆ, ಈ ಸಂಖ್ಯೆಯಲ್ಲಿ ಬದಲಾವಣೆ ಮಾಡಿ 30 ಸ್ಟಾರ್ ಪ್ರಚಾರಕರನ್ನು ಬಳಸಿಕೊಳ್ಳಲು ಅವಕಾಶ ನೀಡಲಾಗಿದೆ. ಅಲ್ಲದೆ ಸಭೆ ಸಮಾರಂಭಗಳಿಗೂ ಕೆಲವೊಂದು ನಿರ್ಬಂಧಗಳನ್ನು ಹೇರಲಾಗಿದೆ.

ಇಂತಹ ಸಂದರ್ಭದಲ್ಲಿ ಜನರ ಬಳಿ ತಲುಪಲು ಹಾಗೂ ಚುನಾವಣಾ ಚಾರ ಕಾರ್ಯ ಕೈಗೊಳ್ಳಲು ಅಭ್ಯರ್ಥಿಗಳು ಸಾಮಾಜಿಕ ಜಾಲತಾಣಗಳ ಮೊರೆ ಹೋಗಿದ್ದಾರೆ. ಜೊತೆಗೆ ಸಣ್ಣ ಮಟ್ಟದಲ್ಲಿ ಕಾರ್ಯಕರ್ತರ ಸಭೆಗಳನ್ನು ನಡೆಸುವ ಮೂಲಕ ಪ್ರಚಾರ ನಡೆಸುತ್ತಿದ್ದಾರೆ. ವಾರ್ಡ್‌ ಮಟ್ಟದ ಸಭೆಗಳು ಹಾಗೂ ಬೂತ್‌ ಮಟ್ಟದ ಸಭೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಜೊತೆಗೆ ವಾಟ್ಸಪ್‌ ಗ್ರೂಪ್‌ಗಳ ಮೂಲಕ ಮತದಾರರನ್ನು ತಲುಪುವ ಪ್ರಯತ್ನವೂ ನಡೆಯುತ್ತಿದೆ.

ಉಪಚುನಾವಣೆಯಲ್ಲಿ ಈಗಾಗಲೇ ಕಾಂಗ್ರೆಸ್ ಎರಡು ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು ಅವರು ಪ್ರಚಾರದಲ್ಲೂ ತೊಡಗಿಕೊಂಡಿದ್ದಾರೆ. ಬಿಜೆಪಿ ಟಿಕೆಟ್‌ ಇನ್ನೂ ಗೊಂದಲದಲ್ಲಿದೆ. ಜೆಡಿಎಸ್‌ ಶಿರಾ ಕ್ಷೇತ್ರದ ಅಭ್ಯರ್ಥಿಯನ್ನು ಘೋಷಿಸಿದೆ. ಅಧಿಕೃತವಾಗಿ ಕಣಕ್ಕಿಳಿದಿರುವ ಅಭ್ಯರ್ಥಿಗಳು ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ.

ಹೀಗಿದ್ದರೂ ಕೆಲವು ಕಡೆಗಳಲ್ಲಿ ನಿಯಮಗಳು ಪಾಲನೆಯಾಗುತ್ತಿಲ್ಲ. ಜನರು ಮಾಸ್ಕ್‌ ಧರಿಸುತ್ತಿಲ್ಲ. ಪ್ರಚಾರ, ಸಭೆ ಸಮಾರಂಭಗಳಲ್ಲಿ ಜನರು ಗುಂಪಾಗಿ ಸೇರುತ್ತಿದ್ದಾರೆ. ಕೋವಿಡ್‌ ಮಾರ್ಗಸೂಚಿಯನ್ನು ಪಾಲನೆ ಮಾಡುತ್ತಿಲ್ಲ. ಇದು ಅಪಾಯಕಾರಿಯಾಗಿ ಪರಿಣಮಿಸಬಹುದು ಎಂಬ ಆತಂಕವನ್ನು ಹಲವರು ವ್ಯಕ್ತಪಡಿಸಿದ್ದಾರೆ. ಈ ನಿಟ್ಟಿನಲ್ಲಿ ಅಭ್ಯರ್ಥಿಗಳು ಹಾಗೂ ಮತದಾರರು ಎಚ್ಚೆತ್ತುಕೊಳ್ಳಬೇಕಾಗಿದೆ. ಕೋವಿಡ್‌ ಸಂಬಂಧಿಸಿದ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ