ಆ್ಯಪ್ನಗರ

ಕೇಂದ್ರದಿಂದ ಒಕ್ಕಲಿಗ ಮುಖಂಡರ ಬಲಿ ಹಾಕುವ ಸಂಚು - ವಿಶ್ವ ಒಕ್ಕಲಿಗ ಮಹಾ ವೇದಿಕೆ ಆರೋಪ

ಕೇಂದ್ರ ಸರಕಾರದ ನಿರ್ದೇಶನದ ಮೇರೆಗೆ ತನಿಖಾ ಸಂಸ್ಥೆಗಳ ಮೂಲಕ ಒಕ್ಕಲಿಗ ಮುಖಂಡರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗುತ್ತಿದೆ ಎಂದು ವಿಶ್ವ ಒಕ್ಕಲಿಗ ಮಹಾ ವೇದಿಕೆ ಆರೋಪ ಮಾಡಿದೆ. ರಾಜ್ಯಪಾಲ ವಜೂಭಾಯಿ ವಾಲ ಅವರನ್ನು ಭೇಟಿ ಮಾಡಿದೆ.

Vijaya Karnataka Web 11 Sep 2019, 8:24 pm
ಬೆಂಗಳೂರು: ಕೇಂದ್ರ ಸರಕಾರದ ನಿರ್ದೇಶನದಂತೆ ತನಿಖಾ ಸಂಸ್ಥೆಗಳ ಮೂಲಕ ಒಕ್ಕಲಿಗ ಸಮುದಾಯದ ಮುಖಂಡರನ್ನು ಬಲಿ ಹಾಕುವ ಸಂಚು ನಡೆಯುತ್ತಿದೆ ಎಂದು ಆರೋಪಿಸಿ ವಿಶ್ವ ಒಕ್ಕಲಿಗರ ಮಹಾ ವೇದಿಕೆ ಮುಖಂಡರು ರಾಜ್ಯಪಾಲರನ್ನು ಭೇಟಿ ಮಾಡಿದ್ದಾರೆ.
Vijaya Karnataka Web dk shivakumar isshu


ರಾಜಭವನದಲ್ಲಿ ರಾಜ್ಯಪಾಲ ವಜೂಭಾಯಿ ವಾಲಾ ಅವರನ್ನು ಭೇಟಿ ಮಾಡಿದ ನಿಯೋಗ ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಕೈಗೊಂಡ ಹಕ್ಕೋತ್ತಾಯವನ್ನು ಗಮನಕ್ಕೆ ತಂದಿದ್ದಾರೆ. ಐಟಿ, ಇಡಿ, ಸಿಬಿಐ ತನಿಖಾ ಸಂಸ್ಥೆಗಳ ಮೂಲಕ ಒಕ್ಕಲಿಗ ಸಮುದಾಯದ ಧುರೀಣರನ್ನು ನಾಶಗೊಳಿಸುವ ದೊಡ್ಡ ಮಟ್ಟದ ಪಿತೂರಿಯೊಂದು ನಡೆಯುತ್ತಿದೆ ಎಂದು ನಿಯೋಗ ಆರೋಪಿಸಿದೆ.

ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ವಿರುದ್ಧ ಪೋನ್ ಕದ್ದಾಳಿಕೆಯ ಸುಳ್ಳು ಆರೋಪ ಹೊರಿಸಿ ಸಿಬಿಐ ತನಿಖೆಗೆ ಆದೇಶ ಹೊರಡಿಸಲಾಗಿದೆ. ಕಾಫಿ ಡೇ ಮಾಲಿಕ ಸಿದ್ದಾರ್ಥ ಅವರಿಗೆ ಐಟಿ ಇಲಾಖೆ ಕಿರುಕುಳ ನೀಡಿದ ಕಾರಣಕ್ಕಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದೀಗ ಡಿಕೆ ಶಿವಕುಮಾರ್ ಅವರ ವಿರುದ್ಧ ಜಾರಿ ನಿರ್ದೇಶನಾಲಯದ ಬಂಧನ ಮಾಡುವ ಮೂಲಕ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿದ್ದಾರೆ.

ಈ ಎಲ್ಲಾ ಪ್ರಕರಣಗಳನ್ನು ಗಮನಿಸಿದರೆ ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಕೇಂದ್ರ ಸರಕಾರದ ನಿರ್ದೇಶನದ ಮೇರೆಗೆ ಕೇಂದ್ರೀಯ ತನಿಖಾ ಸಂಸ್ಥೆಗಳು ಕಾರ್ಯಾಚರಣೆ ಮಾಡುತ್ತಿವೆ. ಇದು ಮುಂದುವರಿದರೆ ರಾಜ್ಯಾದ್ಯಂತ ಚಳುವಳಿ ವಿಸ್ತರಣೆ ಮಾಡಬೇಕಾಗುತ್ತದೆ. ಇದರಿಂದಾಗುವ ಪರಿಣಾಮಕ್ಕೆ ಸರಕಾರವೇ ಹೊಣೆ ಎಂದು ರಾಜ್ಯಪಾಲರಿಗೆ ನೀಡಿದ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ನನ್ನನ್ನ ಯಾರೂ ಟಚ್ ಮಾಡೋಕಾಗಲ್ಲ –ಬಿಜೆಪಿಗೆ ಟಾಂಗ್ ಕೊಟ್ರು ಕುಮಾರಸ್ವಾಮಿ

ರಾಜಕೀಯ ದುರುದ್ದೇಶದಿಂದ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರನ್ನು ಬಂಧಿಸಲಾಗಿದೆ ಎಂದು ಆರೋಪಿಸಿ ಒಕ್ಕಲಿಗರು ಸೇರಿದಂತೆ ವಿವಿಧ ಸಂಘಟನೆಗಳು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿವೆ. ಪ್ರತಿಭಟನೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಮುಖಂಡರು ಹಾಗೂ ಡಿಕೆ ಶಿವಕುಮಾರ್ ಅಭಿಮಾನಿಗಳು ಭಾಗವಹಿಸಿದ್ದರು.

ಅಕ್ರಮ ಹಣಕಾಸು ವರ್ಗಾವಣೆ ಆರೋಪದಡಿಯಲ್ಲಿ ಡಿಕೆ ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯದ ಬಂಧನಕ್ಕೆ ಒಳಪಡಿಸಿದ್ದು ತನಿಖೆ ನಡೆಸುತ್ತಿದೆ. ಡಿಕೆಶಿ ಪುತ್ರಿ ಐಶ್ವರ್ಯ ಹಾಗೂ ಆಪ್ತ ಸಚಿನ್ ನಾರಾಯಣ್ ಅವರಿಗೂ ಇಡಿ ನೊಟೀಸ್ ಜಾರಿಗೊಳಿಸಿದ್ದು ಸೆಪ್ಟಂಬರ್ 12 ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ