ಆ್ಯಪ್ನಗರ

ಬಿಜೆಪಿ ಸರ್ಕಾರದ ಎಲ್ಲ ಕಾಮಗಾರಿಗಳಿಗೆ ಸಿದ್ದರಾಮಯ್ಯ ಬ್ರೇಕ್‌; ಇಲಾಖೆಗಳಿಗೆ ಹಣ ಬಿಡುಗಡೆ, ಪಾವತಿಗೂ ತಡೆ

Siddaramaiah Stops All BJP Sanctioned Works: ಈ ಹಿಂದಿನ ಬಿಜೆಪಿ ಸರ್ಕಾರದ ಎಲ್ಲ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯ ಬ್ರೇಕ್‌ ಹಾಕಿದ್ದಾರೆ. ಎಲ್ಲ ಇಲಾಖೆಗಳು, ನಿಗಮ ಮಂಡಳಿಗಳಿಗೆ ಹಣ ಬಿಡುಗಡೆ ಹಾಗೂ ಪಾವತಿಗೂ ತಡೆ ನೀಡಲಾಗಿದೆ. ಸಚಿವರ ನೇಮಕದ ಬಳಿಕ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲು ಸಿಎಂ ಕಚೇರಿ ಮುಂದಾಗಿದೆ. ಈ ಬಗ್ಗೆ ಹಣಕಾಸು ಇಲಾಖೆಯ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದಾರೆ.

Authored byಅವಿನಾಶ ವಗರನಾಳ | Vijaya Karnataka Web 23 May 2023, 10:02 am

ಹೈಲೈಟ್ಸ್‌:


  • ಬಿಜೆಪಿ ಸರ್ಕಾರದ ಎಲ್ಲ ಕಾಮಗಾರಿಗಳಿಗೆ ಸಿದ್ದರಾಮಯ್ಯ ತಡೆ
  • ಇಲಾಖೆಗಳಿಗೆ ಹಣ ಬಿಡುಗಡೆ, ಪಾವತಿಗೂ ಬ್ರೇಕ್‌ ಹಾಕಿದ ಸರ್ಕಾರ
  • ಸಚಿವರ ನೇಮಕವಾಗಿ ಕಾಮಗಾರಿಗಳ ಪರಿಶೀಲನೆ ಬಳಿಕ ಮುಂದಿನ ಕ್ರಮ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Siddaramaiah
ಮುಖ್ಯಮಂತ್ರಿ ಸಿದ್ದರಾಮಯ್ಯ (ಸಂಗ್ರಹ ಚಿತ್ರ)
ಬೆಂಗಳೂರು : ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಪತನವಾಗಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಸಿದ್ದರಾಮಯ್ಯ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಹಿಂದಿನ ಬಿಜೆಪಿ ಸರ್ಕಾರದ ಕಾಮಗಾರಿಗಳಿಗೆ ಬ್ರೇಕ್‌ ಹಾಕಿದ್ದಾರೆ. ವಿವಿಧ ಇಲಾಖೆಗಳಿಂದ ಇನ್ನೂ ಪ್ರಾರಂಭವಾಗದಂತಹ ಹಿಂದಿನ ಸರ್ಕಾರದ ಎಲ್ಲ ಕಾಮಗಾರಿಗಳನ್ನು ತಡೆ ಹಿಡಿದು ಆದೇಶ ಹೊರಡಿಸಲಾಗಿದೆ.
ಬಿಜೆಪಿ ಸರ್ಕಾರ ಜಾರಿ ಮಾಡಿದ ಎಲ್ಲ ಯೋಜನೆಗಳನ್ನು ತಡೆಹಿಡಿಯಲಾಗಿದ್ದು, ಅವುಗಳನ್ನು ಪರಿಶೀಲಿಸಲು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮುಂದಾಗಿದೆ. ಇದಷ್ಟೇ ಅಲ್ಲದೇ ಎಲ್ಲ ಇಲಾಖೆಗಳು ಹಾಗೂ ಇಲಾಖೆಗಳ ಅಡಿ ಬರುವ ನಿಗಮ ಮಂಡಳಿ, ಪ್ರಾಧಿಕಾರಗಳಿಗೆ ಸಂಬಂಧಿಸಿದಂತೆ ಹಣ ಬಿಡುಗಡೆ ಹಾಗೂ ಪಾವತಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ತಡೆ ಹಿಡಿಯಲಾಗಿದೆ ಎಂದು ಹಣಕಾಸು ಇಲಾಖೆಯ ಕಾರ್ಯದರ್ಶಿ ಡಾ ಏಕರೂಪ್‌ ಕೌರ್‌ ಹೊರಡಿಸಿರುವ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.


ಈ ಆದೇಶವನ್ನು ನೂತನ ಸಿಎಂ ಸಿದ್ದರಾಮಯ್ಯ ಅವರ ಟಿಪ್ಪಣಿಯಂತೆ ಹೊರಡಿಸಿದ್ದು, ಹಣ ಪಾವತಿ ತಡೆಯುವ ಜತೆಗೆ ಪ್ರಾರಂಭವಾಗಬೇಕಿರುವ ಕಾಮಗಾರಿಗಳನ್ನು ಆರಂಭಿಸದಂತೆ ಸೂಚಿಸಲಾಗಿದೆ. ಸುತ್ತೋಲೆಯನ್ನು ಎಲ್ಲ ಇಲಾಖೆಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳಿಗೆ ರವಾನಿಸಲಾಗಿದೆ. ಇಲಾಖೆಯ ಮುಖ್ಯಸ್ಥರು, ಎಲ್ಲ ನಿಗಮ ಮಂಡಳಿ, ಪ್ರಾಧಿಕಾರಿಗಳು, ಎಲ್ಲ ಜಿಲ್ಲಾ ಪಂಚಾಯಿತಿ ಸಿಇಒ, ಮುಖ್ಯ ಲೆಕ್ಕಾಧಿಕಾರಿಗಳು, ಆರ್ಥಿಕ ಇಲಾಖೆಯ ಅಧಿಕಾರಿಗಳಿಗೆ ಕಳುಹಿಸಲಾಗಿದೆ.

ಇಂದಿರಾ ಕ್ಯಾಂಟೀನ್‌ ಪುನಾರಂಭ, ಬಲವರ್ಧನೆಗೆ ಸಜ್ಜಾದ ಸಿಎಂ ಸಿದ್ದು ಸರ್ಕಾರ!

ದೂರುಗಳ ಹಿನ್ನೆಲೆ ಹಲವು ಕಾಮಗಾರಿಗಳಿಗೆ ತಡೆ!

ಮುಖ್ಯಮಂತ್ರಿಗಳ ಕಚೇರಿಯ ಮಾಹಿತಿ ಪ್ರಕಾರ ಬಿಜೆಪಿ ಸರ್ಕಾರ ಜಾರಿಗೆ ತಂದ ಕಾಮಗಾರಿಗಳ ಮೇಲೆ ಜನಪ್ರತಿನಿಧಿಗಳು ಹಾಗೂ ನಾಗರೀಕರು ದೂರುಗಳನ್ನು ನೀಡಿದ್ದಾರೆ. ಈ ಹಿನ್ನೆಲೆ ಕಾಮಗಾರಿಗಳನ್ನು ತಡೆಹಿಡಿಯಲಾಗಿದೆ. ಕೆಲ ಪ್ರಕರಣಗಳಲ್ಲಿ ವರ್ಕ್‌ ಆರ್ಡರ್‌ ಇಲ್ಲದೇ ಹಣ ಪಾವತಿಸಲಾಗಿದೆ. ಇನ್ನು ಕೆಲ ಪ್ರಕರಣಗಳಲ್ಲಿ ಕಾಗದದಲ್ಲಿ ಮಾತ್ರ ಯೋಜನೆಯಿದ್ದು, ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಆದ್ದರಿಂದ ಇಂತಹ ಎಲ್ಲ ಕಾಮಗಾರಿಗಳನ್ನು ಸಿಎಂ ತಡೆಹಿಡಿಯಿರಿ ಎಂದು ಹೇಳಿದ್ದು, ಪರಿಶೀಲಿಸಿದ ಬಳಿಕ ಅಗತ್ಯ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡೋಣ ಎಂದು ಹೇಳಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌ ಪದಗ್ರಹಣ; ಮೋದಿ ವಿರುದ್ಧ ಒಗ್ಗಟ್ಟು ಪ್ರದರ್ಶನಕ್ಕೆ ಕಾಂಗ್ರೆಸ್‌ ಪಣ!

ಅಗತ್ಯ ಕಾಮಗಾರಿಗಳಿಗೆ ಒಪ್ಪಿಗೆ ಸಾಧ್ಯತೆ!

ಪ್ರತಿ ಬಾರಿಯೂ ಹೊಸ ಸರ್ಕಾರ ರಚನೆಗೊಂಡಾಗ ಹಿಂದಿನ ಸರ್ಕಾರದ ಕಾಮಗಾರಿಗಳನ್ನು ತಡೆಹಿಡಿಯುವ ಪ್ರವೃತ್ತಿ ಇದೆ. ಸಚಿವರಾಗಿ ನಿಯೋಜನೆಗೊಂಡವರು ತಮ್ಮ ಇಲಾಖೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳ ಕುರಿತು ಪರಿಶೀಲನೆ ನಡೆಸಿ ಅತ್ಯಗತ್ಯ ಇರುವುದಕ್ಕೆ ಮಾತ್ರ ಒಪ್ಪಿಗೆ ನೀಡುವ ಸಾಧ್ಯತೆಯಿದೆ. ರಾಜ್ಯದಲ್ಲಿ ಪೂರ್ಣ ಪ್ರಮಾಣದ ಸಚಿವ ಸಂಪುಟ ಅಸ್ತಿತ್ವಕ್ಕೆ ಬಂದಿಲ್ಲ. ಅದಾದ ಬಳಿಕ ಸಚಿವರಿಗೆ ಖಾತೆಗಳನ್ನು ಹಂಚಲಾಗುತ್ತದೆ. ನಂತರ ಆಯಾ ಇಲಾಖೆಯ ಕಾಮಗಾರಿಗಳನ್ನು ಪರಿಶೀಲಿಸಿ, ಅಗತ್ಯ ಕಯೋಜನೆಗಳಿಗೆ ಅನುದಾನ ಬಿಡುಗಡೆಗೊಳಿಸಿಕೊಳ್ಳುತ್ತಾರೆ. ಜುಲೈನಲ್ಲಿ ಹೊಸ ಬಜೆಟ್‌ ಮಂಡನೆ ಮಾಡಲಿರುವ ಹಿನ್ನೆಲೆ ಹಣವನ್ನು ಕ್ರೋಢಿಕರಿಸಬೇಕಾದ ಅನಿವಾರ್ಯತೆ ಹೊಸ ಸರ್ಕಾರಕ್ಕಿದ್ದು, ಅನಗತ್ಯ ವೆಚ್ಚಗಳನ್ನು ಕಡಿಮೆಗೊಳಿಸುವ ಇರಾದೆಯಲ್ಲಿ ಸರ್ಕಾರ ಇದೆ.
ಲೇಖಕರ ಬಗ್ಗೆ
ಅವಿನಾಶ ವಗರನಾಳ
ವಿಜಯ ಕರ್ನಾಟಕ ಡಿಜಿಟಲ್‌ ವಿಭಾಗದಲ್ಲಿ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿರುವ ಇವರು ಕಳೆದ 6 ವರ್ಷಗಳಿಂದ ವಿವಿಧ ಪತ್ರಿಕೆ, ವಿದ್ಯುನ್ಮಾನ ಮಾಧ್ಯಮದಲ್ಲಿ ಕಾರ್ಯನಿರ್ವಹಿಸಿದ್ದಾರೆ. ಸದ್ಯ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಒಂದಿಷ್ಟು ದಿನ ಕೆಲ ಸಂಸ್ಥೆಗಳಲ್ಲಿ ಸಾರ್ವಜನಿಕ ಸಂಪರ್ಕವನ್ನು ನಿಭಾಯಿಸಿದ್ದಾರೆ. ಇವರು ಹುಟ್ಟಿ ಬೆಳೆದಿದ್ದು ಭತ್ತದ ನಾಡು, ಹನುಮ ಹುಟ್ಟಿದ ನಾಡು ಗಂಗಾವತಿಯಲ್ಲಿ. ಕುವೆಂಪು ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ರಾಜಕೀಯ ವಿಷಯಗಳು, ಪ್ರಚಲಿತ ವಿದ್ಯಮಾನಗಳ ಮೇಲೆ ಆಸಕ್ತಿ. ತಂತ್ರಜ್ಞಾನದ ವಿಷಯಗಳು ಇವರಿಗೆ ಹೆಚ್ಚು ಆಪ್ತ. ಇವರಿಗೆ ಊರೂರು ಸುತ್ತೋದು.. ಕ್ರಿಕೆಟ್‌ ಆಡೋದು.. ಅದಿದು ಹುಡುಕೋದು ಇಷ್ಟ. ಅಂತೆ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ