ಆ್ಯಪ್ನಗರ

ಮೇ ಆರಂಭಕ್ಕೆ ಕೊರೊನಾ ಗರಿಷ್ಟ ಮಟ್ಟ, ತಿಂಗಳಾಂತ್ಯದಲ್ಲಿ ಇಳಿಕೆ ಸಾಧ್ಯತೆ: ಆರೋಗ್ಯ ಸಚಿವ ಸುಧಾಕರ್‌!‌

ಕೊರೊನಾ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮೇ ಆರಂಭಕ್ಕೆ ಕೊರೊನಾ ಗರಿಷ್ಟ ಮಟ್ಟ ತಲುಪಲಿದ್ದು, ತಿಂಗಳಾಂತ್ಯಕ್ಕೆ ಕೊರೊನಾ ಪ್ರಕರಣಗಳು ಕಡಿಮೆಯಾಗಲಿವೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದ್ದಾರೆ.

Vijaya Karnataka Web 11 Apr 2021, 9:14 pm
ಬೆಂಗಳೂರು: ಮೇ ತಿಂಗಳ ಮೊದಲ ವಾರದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಲಿದ್ದು, ಆ ತಿಂಗಳಾಂತ್ಯದಲ್ಲಿ ಕಡಿಮೆಯಾಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇದಕ್ಕೆ ಪೂರಕವಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದ್ದಾರೆ.
Vijaya Karnataka Web ಡಾ.ಕೆ ಸುಧಾಕರ್


ಕೋವಿಡ್‌ ನಿಯಂತ್ರಣ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ''ಮೇ ತಿಂಗಳ ಕೊನೆವರೆಗೂ ಎಚ್ಚರಿಕೆಯಿಂದಿರಬೇಕು. ಮೇ ಮೊದಲ ವಾರದಲ್ಲಿ ಕೊರೊನಾ ಗರಿಷ್ಠ ಮಟ್ಟ (ಪೀಕ್‌) ತಲುಪಬಹುದು. ಮೇ ಅಂತ್ಯಕ್ಕೆ ಸ್ವಲ್ಪ ಕಡಿಮೆಯಾಗಬಹುದು ಎಂದರು.

ಹೆಚ್ಚು ಪ್ರಕರಣ ಕಂಡು ಬಂದರೆ ಅದಕ್ಕೆ ತಕ್ಕಂತೆ ಆಸ್ಪತ್ರೆ ಹಾಸಿಗೆ ಬೇಡಿಕೆ ಹೆಚ್ಚಾಗುತ್ತದೆ. ಇದಕ್ಕಾಗಿ ಖಾಸಗಿ ಆಸ್ಪತ್ರೆಗಳ ಸಹಕಾರ ಪಡೆಯಬೇಕು. ಗಡಿ ಜಿಲ್ಲೆಗಳಲ್ಲಿ ಕಟ್ಟುನಿಟ್ಟಾಗಿ ಪ್ರಯಾಣಿಕರನ್ನು ಪರೀಕ್ಷಿಸುವ ಹಾಗೂ ಪರೀಕ್ಷಾ ವರದಿ ಪರಿಶೀಲಿಸುವ ಬಗ್ಗೆ ತಾಂತ್ರಿಕ ಸಲಹಾ ಸಮಿತಿ ಸಲಹೆ ನೀಡಿದೆ. ಇವೆಲ್ಲವನ್ನೂ ವರದಿ ರೂಪದಲ್ಲಿ ನೀಡಲು ಸೂಚಿಸಲಾಗಿದೆ. ವರದಿಯನ್ನು ಮುಖ್ಯಮಂತ್ರಿಗಳಿಗೆ ನೀಡಿ ಸಮರ್ಪಕವಾಗಿ ಚರ್ಚಿಸಲಾಗುವುದು. ಇದನ್ನು ಪರಿಗಣಿಸಿ ಸರಕಾರ ಕ್ರಮ ಕೈಗೊಳ್ಳಲಿದೆ,'' ಎಂದರು.
ರಾಜ್ಯದಲ್ಲಿ 10 ಸಾವಿರ ಗಡಿದಾಟಿದ ಹೊಸ ಪ್ರಕರಣ! ಬೆಂಗಳೂರಲ್ಲೇ 7,584 ಸೋಂಕು!
''ಖಾಸಗಿ ಆಸ್ಪತ್ರೆಗಳು ಕೂಡ ಸರಕಾರದೊಂದಿಗೆ ಕೆಲಸ ಮಾಡಿವೆ. ಟೆಲಿ ಐಸಿಯು ವ್ಯವಸ್ಥೆ ಮೊದಲಿಗೆ ನಮ್ಮ ಸರಕಾರ ಆರಂಭಿಸಿದ್ದು, ಖಾಸಗಿ ಆಸ್ಪತ್ರೆಗಳು ಉಚಿತವಾಗಿ ಈ ಸೇವೆ ನೀಡಿವೆ. ಇದನ್ನು ಇನ್ನಷ್ಟು ಗಟ್ಟಿಗೊಳಿಸಬೇಕಿದೆ. ಆರ್ಥಿಕ ಚಟುವಟಿಕೆಗೆ ತೊಂದರೆಯಾಗುವ ಯಾವುದೇ ಸಲಹೆ ನೀಡುವುದಿಲ್ಲ, ಆದರೆ ಗುಂಪುಗೂಡದಂತೆ ಕ್ರಮ ವಹಿಸಬೇಕೆಂದು ತಜ್ಞರು ಹೇಳಿದ್ದಾರೆ,'' ಎಂದರು.

ಲಸಿಕೆಯಲ್ಲಿ ಮಹಿಳೆಯರೇ ಮಾದರಿ: ಸಚಿವ ಸುಧಾಕರ್‌
ರಾಜ್ಯದಲ್ಲಿ 61 ಲಕ್ಷ ಕೋವಿಡ್‌ ಲಸಿಕೆ ನೀಡಿದ್ದು, ಈ ಪೈಕಿ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ಪಡೆದು ಮಾದರಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು.

ಅಟಲ್‌ ಬಿಹಾರಿ ವಾಜಪೇಯಿ ಮೆಡಿಕಲ್‌ ಕಾಲೇಜಿನಲ್ಲಿ ನಡೆದ ಲಸಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಸಚಿವರು, ''ರಾಜ್ಯಕ್ಕೆ 72 ಲಕ್ಷಕ್ಕೂ ಹೆಚ್ಚು ಲಸಿಕೆ ಬಂದಿದೆ. ರಾಜ್ಯದಲ್ಲಿ 61 ಲಕ್ಷ ಕೋವಿಡ್‌ ಲಸಿಕೆ ನೀಡಿದ್ದು, ಶೇ. 53ರಷ್ಟು ಮಹಿಳೆಯರಿಗೆ ನೀಡಲಾಗಿದೆ. ಆದ್ದರಿಂದ ಮಹಿಳೆಯರೇ ನಿಜವಾದ ಮಾದರಿ, ಮಾರ್ಗದರ್ಶಕರು. ಈ ಶತಮಾನದಲ್ಲಿ ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿದ್ದಾರೆ,'' ಎಂದರು.

''ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಿ ಅಸಮಾನತೆ ನಿವಾರಿಸಲು ಕೆಲಸ ಮಾಡಿದ ಜ್ಯೋತಿಬಾಫುಲೆ ಅವರ ಜನ್ಮದಿನ ಹಾಗೂ ಸಮಾನತೆ, ಸ್ವಾತಂತ್ರ್ಯಕ್ಕೆ ಹೋರಾಡಿದ ಸಂವಿಧಾನಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಜನ್ಮದಿನ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಕರೆ ಮೇರೆಗೆ ಲಸಿಕೋತ್ಸವ ಮಾಡಲಾಗುತ್ತಿದೆ. ಲಸಿಕೆ ವಿಚಾರದಲ್ಲಿ ರಾಜಕೀಯ, ಧರ್ಮ, ಭಾಷೆ ಬೆರೆಸುವ ಕೆಲಸ ಮಾಡಬಾರದು. ಸಾಂಕೇತಿಕವಾಗಿ ಎಲ್ಲ ಧರ್ಮಗಳ ಮಹಿಳೆಯರಿಗೆ ಲಸಿಕೆ ನೀಡುವ ಮೂಲಕ ವಿಶೇಷ ಲಸಿಕೋತ್ಸವಕ್ಕೆ ಚಾಲನೆ ನೀಡಲಾಗಿದೆ,'' ಎಂದರು.

ಪ್ರಧಾನಿ ಮೆಚ್ಚುಗೆ
''ಪ್ರಧಾನಿ ನರೇಂದ್ರ ಮೋದಿಯವರು ಮುಖ್ಯಮಂತ್ರಿಗಳಿಗೆ ಕರೆ ಮಾಡಿ, ಕರ್ನಾಟಕ ಸರಕಾರದ ಕೋವಿಡ್‌ ನಿಯಂತ್ರಣ ಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹಾಗೆಯೇ ಮ್ರೈಕ್ರೊ ಕಂಟೇನ್ಮೆಂಟ್‌ ಜೋನ್‌ ಹೆಚ್ಚಿಸಲು ಸಲಹೆ ನೀಡಿದ್ದಾರೆ. ಈ ಬಗ್ಗೆ ಕ್ರಮ ವಹಿಸಲಾಗುವುದು,'' ಎಂದರು.

''ಜನರು ಜಾಗೃತರಾಗಿದ್ದರೆ ಯಾವುದೇ ಲಾಕ್‌ಡೌನ್‌ ಅಥವಾ ಆರ್ಥಿಕ ಚಟುವಟಿಕೆ ನಿರ್ಬಂಧಿಸುವ ಅಗತ್ಯವಿಲ್ಲ. ಜನರು ಸರಕಾರದೊಂದಿಗೆ ಸಹಕರಿಸಿ ಕೋವಿಡ್‌ ನಿಯಂತ್ರಿಸಬೇಕು,'' ಎಂದು ಸಚಿವರು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ