ಆ್ಯಪ್ನಗರ

ಸೆ.13ರವರೆಗೆ ಡಿಕೆ ಶಿವಕುಮಾರ್ ಜಾರಿ ನಿರ್ದೇಶನಾಲಯದ ಕಸ್ಟಡಿಗೆ

ಅಕ್ರಮ ಹಣಕಾಸು ವರ್ಗಾವಣೆ ಆರೋಪದಡಿಯಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾದ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ಅಧಿಕಾರಿಗಳು ಇದೀಗ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Vijaya Karnataka Web 4 Sep 2019, 9:43 pm
ಹೊಸದೆಹಲಿ: ಅಕ್ರಮ ಹಣಕಾಸು ವರ್ಗಾವಣೆ ಆರೋಪದಡಿಯಲ್ಲಿ ಬಂಧನಕ್ಕೆ ಒಳಗಾಗಿದ್ದ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ಸೆ.13ರವರೆಗೆ ಜಾರಿ ನಿರ್ದೇಶನಾಲಯದಿಂದ ವಶಕ್ಕೆ ಒಪ್ಪಿಸಿ ನ್ಯಾಯಾಲಯ ಆದೇಶ ನೀಡಿದೆ.
Vijaya Karnataka Web D K Shivakumar


ಡಿಕೆಶಿ ಪರ ಹಾಗೂ ವಿರೋಧ ವಾದ ಆಲಿಸಿದ ನ್ಯಾಯಾಧೀಶರಾದ ಅಜಯ್‌ ಕುಮಾರ್‌ ಕುಹರ್ ಡಿಕೆ ಶಿವಕುಮಾರ್‌ ಅವರನ್ನು ಇಡಿ ಕಸ್ಟಡಿಗೆ ಒಪ್ಪಿಸಿದೆ. ಅಲ್ಲದೇ ಕುಟುಂಬ ಸದಸ್ಯರು ಪ್ರತಿ ದಿನ ಭೇಟಿ ಮಾಡಲು ಅವಕಾಶ ನೀಡಲಾಗಿದೆ. 9 ದಿನಗಳವರೆಗೆ ಡಿಕೆಶಿ ಜಾಮೀನು ಅರ್ಜಿ ಸಲ್ಲಿಸುವಂತಿಲ್ಲ.

ಡಿಕೆ ಶಿವಕುಮಾರ್‌ ಅವರಿಂದ ಹೆಚ್ಚಿನ ಮಾಹಿತಿ ಪಡೆಯಬೇಕಾಗಿದೆ. ಹೀಗಾಗಿ ವಿಚಾರಣೆ ನಡೆಸಲು 14 ದಿನ ಕಸ್ಟಡಿಗೆ ಒಪ್ಪಿಸಬೇಕೆಂದು ಇಡಿ ಪರ ವಕೀಲರು ಮನವಿ ಮಾಡಿದರು. ಆದರೆ 9 ದಿನಗಳವರೆಗೆ ಕಸ್ಟಡಿಗೆ ಒಪ್ಪಿಸಿ ನ್ಯಾಯಾಧೀಶರು ಆದೇಶ ನೀಡಿದರು.

ತೀರ್ಪು ಪ್ರಕಟಿಸಿದ ನಂತರ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಡಿಕೆಶಿ ಅವರನ್ನು ಕಚೇರಿಗೆ ಕೊಂಡೊಯ್ದರು.

ನ್ಯಾಯಾಧೀಶರು ಆದೇಶ ಪ್ರಕಟಿಸುತ್ತಿದ್ದಂತೆ ಡಿಕೆಶಿ ಮುಖದಲ್ಲಿ ನಿರಾಸೆ ಮೂಡಿತು.

ದೆಹಲಿಯ ರೋಸ್ ಅವೆನ್ಯೂ ನಾಯ್ಯಾಲಯ ಸಮುಚ್ಚಯದ ವಿಶೇಷ ನ್ಯಾಯಾಲಯಕ್ಕೆ ಕರೆತಂದ ಇಡಿ ಅಧಿಕಾರಿಗಳು ವಿಶೇಷ ನ್ಯಾಯಾಧೀಶ ಅಜಯ್ ಕುಮಾರ್ ಕುಹಾರ್ ಮುಂದೆ ಹಾಜರುಪಡಿಸಲಾಗಿದೆ.

ನಿನ್ನೆ ರಾತ್ರಿ ಇಡಿಯಿಂದ ಬಂಧನಕ್ಕೆ ಒಳಗಾದ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅನಾರೋಗ್ಯದಿಂದಾಗಿ ದೆಹಲಿಯ ರಾಮ ಮನೋಹರ ಲೋಹಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು.

ಆಸ್ಪತ್ರೆಯಿಂದ ನೇರವಾಗಿ ಬಿಗಿ ಪೊಲೀಸ್ ಭದ್ರತೆಯಲ್ಲಿ ಡಿ.ಕೆ ಶಿವಕುಮಾರ್ ಅವರನ್ನು ಇಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ಇಡಿ ಡಿಕೆ ಶಿವಕುಮಾರ್ ಅವರನ್ನು 14 ದಿನಗಳ ಕಾಲ ತಮ್ಮ ವಶಕ್ಕೆ ನೀಡುವಂತೆ ಮನವಿ ಸಲ್ಲಿಸಿದೆ.

ಜಾರಿ ನಿರ್ದೇಶನಾಲಯವು ಡಿ.ಕೆ ಶಿವಕುಮಾರ್ ಅವರ ಸಫ್ದರ್‌ ಜಂಗ್ ಎನ್ ಕ್ಲೇವ್ ನಿವಾಸದ ಮೇಲೆ ದಾಳಿ ನಡೆಸಿದ ವೇಳೆ 8.56 ಕೋಟಿ ಹಣ ಪತ್ತೆಯಾಗಿತ್ತು. ಈ ವಿಚಾರವಾಗಿ ಸತತ 25 ಗಂಟೆಗಳ ಕಾಲ ಅಧಿಕಾರಿಗಳು ಡಿಕೆಶಿ ವಿಚಾರಣೆ ನಡೆಸಿದರೂ ಹೆಚ್ಚಿನ ಮಾಹಿತಿ ಲಭ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ನಿನ್ನೆ ರಾತ್ರಿ ಅವರನ್ನು ಬಂಧಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ