ಆ್ಯಪ್ನಗರ

ಆನೆ ಹಾವಳಿಗೆ ಶಾಶ್ವತ ಪರಿಹಾರ ಯೋಜನೆ ಸಿದ್ಧಪಡಿಸಲು ಅರಣ್ಯ ಇಲಾಖೆಗೆ ಸಿಎಂ ಸೂಚನೆ

ಆನೆ-ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ ರೂಪಿಸಲು ಪ್ರಸ್ತಾಪ ಸಲ್ಲಿಸುವಂತೆ ಮುಖ್ಯಮಂತ್ರಿ ಎಚ್‌ಡಿ...

Vijaya Karnataka 5 Dec 2018, 5:00 am
ಬೆಂಗಳೂರು: ಆನೆ-ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ ರೂಪಿಸಲು ಪ್ರಸ್ತಾಪ ಸಲ್ಲಿಸುವಂತೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅರಣ್ಯ ಇಲಾಖೆಗೆ ಸೂಚಿಸಿದ್ದು, ರೈಲ್ವೆ ತಡೆಗೋಡೆ ನಿರ್ಮಾಣ ಸಂಬಂಧ ಸದ್ಯದಲ್ಲೇ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ.
Vijaya Karnataka Web ele1


ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕಾಡಾನೆ ಹಾವಳಿಯಿಂದ ತೊಂದರೆಗೊಳಗಾದ ರೈತರ ಸಮಸ್ಯೆ ಹಾಗೂ ಮಾರ್ಗೋಪಾಯಗಳ ಬಗ್ಗೆ ಚರ್ಚೆ ನಡೆಸಲು ಆಯೋಜಿಸಲಾಗಿದ್ದ ಸಭೆಯಲ್ಲಿ ಮಾತನಾಡಿದ ಅವರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಈ ಸೂಚನೆ ನೀಡಿದ್ದಾರೆ.

ರಾಜ್ಯದಲ್ಲಿ ಸುಮಾರು 6000 ಆನೆಗಳಿದ್ದು, ಇದು ರಾಷ್ಟ್ರದಲ್ಲೇ ಅತಿ ಹೆಚ್ಚಿನ ಸಂಖ್ಯೆಯಾಗಿದೆ. ತೊಂದರೆಯನ್ನುಂಟು ಮಾಡುತ್ತಿರುವ ಆನೆಗಳನ್ನು ಹಿಡಿದು ಶಿಬಿರಕ್ಕೆ ಕಳುಹಿಸುವುದು, ಹೊರ ರಾಜ್ಯಗಳಿಂದ ತಜ್ಞರನ್ನು ಕರೆಸಿಕೊಳ್ಳುವುದು ಸೇರಿದಂತೆ ಲಭ್ಯವಿರುವ ಎಲ್ಲ ಮಾರ್ಗೋಪಾಯಗಳನ್ನು ಬಳಸಿಕೊಳ್ಳುವಂತೆ ಅಧಿಕಾರಿಗಳಿಗೆ ಕುಮಾರಸ್ವಾಮಿ ಸಭೆಯಲ್ಲಿ ಸೂಚನೆ ನೀಡಿದರು.

ಆನೆ ಹಾವಳಿ ತಡೆಗೆ ಇದುವರೆಗೆ 71 ಕಿಮೀ ರೈಲು ತಡೆಗೋಡೆ ನಿರ್ಮಾಣವಾಗಿದ್ದು, ಬಜೆಟ್‌ನಲ್ಲಿ 50 ಕೋಟಿ ರೂ. ಅನುದಾನ ನೀಡಲಾಗಿದೆ. 400ರಿಂದ 500 ಕಿಮೀ ತಡೆಗೋಡೆ ನಿರ್ಮಾಣಕ್ಕೆ ಈ ಹಣ ಸಾಲದು. ಈ ಹಿನ್ನೆಲೆಯಲ್ಲಿ ಮುಂದಿನ ಮೂರು ವರ್ಷಗಳಿಗೆ ಅಗತ್ಯವಿರುವ ಹಣಕಾಸು ಪ್ರಸ್ತಾಪ ಸಲ್ಲಿಸಿ. ರೈಲ್ವೆ ಇಲಾಖೆಯಿಂದ ಕಂಬಿ ಖರೀದಿ ಬೆಲೆ ದುಬಾರಿಯಾಗುತ್ತಿದ್ದು, ಅವುಗಳ ಸಾಗಣೆ ವೆಚ್ಚವೂ ಅಧಿಕವಾಗುತ್ತಿದೆ. ಈ ಸಂಬಂಧ ರೈಲ್ವೆ ಇಲಾಖೆಗೆ ಮನವಿ ಸಲ್ಲಿಸಬೇಕಿದೆ. ಈ ಹಿನ್ನೆಲೆಯಲ್ಲಿ ಆದಷ್ಟು ಬೇಗ ಕೇಂದ್ರ ಅರಣ್ಯ ಸಚಿವ ಡಾ.ಹರ್ಷವರ್ಧನ್‌ ಅವರನ್ನು ಭೇಟಿ ಮಾಡಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ, ಅರಣ್ಯ ಸಚಿವ ಆರ್‌.ಶಂಕರ್‌, ವಿಧಾನ ಪರಿಷತ್‌ ಸದಸ್ಯ ಎಸ್‌.ಎಲ್‌.ಭೋಜೇಗೌಡ, ಶಾಸಕ ಆರಗ ಜ್ಞಾನೇಂದ್ರ, ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಪುನಟಿ ಶ್ರೀಧರ್‌ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ