ಆ್ಯಪ್ನಗರ

ಲೋಕಸಭೆ ಚುನಾವಣೆ ಬಳಿಕವೂ ಸರಕಾರ ಸ್ಥಿರ: ದೇವೇಗೌಡ

ಸಮ್ಮಿಶ್ರ ಸರಕಾರಕ್ಕೆ ಯಾವುದೇ ತೊಂದರೆ ಆಗದಂತೆ ಸ್ಥಳೀಯ ಸಂಸ್ಥೆ ಚುನಾವಣೆ ಎದುರಿಸುವುದಾಗಿ ಮಾಜಿ ಪ್ರಧಾನಿ ಎಚ್‌ಡಿದೇವೇಗೌಡರು ಹೇಳಿದರು.

Vijaya Karnataka 14 Aug 2018, 9:18 am
ಹಾಸನ: ಸಮ್ಮಿಶ್ರ ಸರಕಾರಕ್ಕೆ ಯಾವುದೇ ತೊಂದರೆ ಆಗದಂತೆ ಸ್ಥಳೀಯ ಸಂಸ್ಥೆ ಚುನಾವಣೆ ಎದುರಿಸುವುದಾಗಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಹೇಳಿದರು.
Vijaya Karnataka Web DeveGowda


ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿಲ್ಲ ಎಂದು ಹೊಳೆನರಸೀಪುರದಲ್ಲಿ ಸುದ್ದಿಗಾರರಿಗೆ ತಿಳಿಸಿದರು.

''ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿಯವರು ಲೋಕಸಭೆ ಚುನಾವಣೆಗೆ ಮುನ್ನ ಸರಕಾರ ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಆದರೆ ಸಮ್ಮಿಶ್ರ ಸರಕಾರವನ್ನು ಅಸ್ಥಿರಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ. ಲೋಕಸಭೆ ಚುನಾವಣೆ ಬಳಿಕವೂ ರಾಜ್ಯ ಸರಕಾರ ಸುಸ್ಥಿರವಾಗಿರುತ್ತದೆ,'' ಎಂದರು.

''ಬಿಜೆಪಿಯವರಿಗೆ ಕುಮಾರಸ್ವಾಮಿಯೇ ಟಾರ್ಗೆಟ್‌,'' ಎಂದು ಅಸಮಾಧಾನ ವ್ಯಕ್ತಪಡಿಸಿದ ಗೌಡರು, ''ಮುಂದಿನ ದಿನಗಳಲ್ಲಿ ಎಚ್ಡಿಕೆ ರಾಷ್ಟ್ರ ರಾಜಕಾರಣಕ್ಕೆ ಹೋಗಲಿದ್ದಾರೆ,'' ಎಂದು ಭವಿಷ್ಯ ನುಡಿದರು.

''ನಾನು ಪ್ರಧಾನಿ ಅಭ್ಯರ್ಥಿಯಲ್ಲ, ಲೋಕಸಭೆ ಚುನಾವಣೆಗೂ ಸ್ಪರ್ಧಿಸಲ್ಲ, ಪಕ್ಷ ಸಂಘಟಿಸುವ ಕೆಲಸ ಮಾಡುವೆ,'' ಎಂದು ಪುನರುಚ್ಛರಿಸಿದರು.

ಪ್ರಜ್ವಲ್‌ ಸ್ಪರ್ಧೆ: ''ಮೊಮ್ಮಗ ಪ್ರಜ್ವಲ್‌ ರೇವಣ್ಣ ಹಾಸನ ಲೋಕಸಭೆ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ನಾನೇ ನಾಲ್ಕೈದು ದಿನ ಜಿಲ್ಲೆಯಲ್ಲಿದ್ದು ಕಾರ್ಯಕರ್ತರ ಸಭೆ ಮಾಡುತ್ತೇನೆ, ಗೆಲ್ಲಿಸುತ್ತೇನೆ,'' ಎಂದು ಹೇಳಿದರು.

ಆಸಕ್ತಿ ಇಲ್ಲ:
ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡರ ಈ ಹೇಳಿಕೆ ಬಗ್ಗೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಪ್ರಶ್ನಿಸಲಾಗಿ, ''ತನಗೆ ರಾಷ್ಟ್ರ ರಾಜಕಾರಣದ ಬಗ್ಗೆ ಆಸಕ್ತಿ ಇಲ್ಲ,'' ಎಂದು ಪ್ರತಿಕ್ರಿಯಿಸಿದರು.

ಪ್ರಜ್ವಲ್‌ ರೇವಣ್ಣ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಎಚ್‌ಡಿಕೆ, ''ಅವಶ್ಯಕತೆ ಬಂದರೆ ಆ ಸಂದರ್ಭದಲ್ಲಿ ತೀರ್ಮಾನ ಕೈಗೊಳ್ಳುತ್ತೇವೆ,'' ಎಂದು ಅಚ್ಚರಿ ಹೇಳಿಕೆ ನೀಡಿದರು.

ಗೌಡರ ಕ್ಷೇತ್ರ ಯಾವುದು?

ಬೆಂಗಳೂರು: ಹಾಸನದಲ್ಲಿ ಮೊಮ್ಮಗ ಪ್ರಜ್ವಲ್‌ ರೇವಣ್ಣ ಸ್ಪರ್ಧೆ ಮಾಡಿದರೆ ದೇವೇಗೌಡರ ಆಯ್ಕೆಯ ಕ್ಷೇತ್ರ ಯಾವುದಾಗಲಿದೆ ಎಂಬುದು ಕುತೂಹಲ ಕೆರಳಿಸಿದೆ.

ರಾಜಕಾರಣದಲ್ಲಿ ಆರು ದಶಕಗಳನ್ನು ಸವೆಸಿರುವ ತಮಗೆ ರಾಜಕೀಯ ಸಾಕಾಗಿದೆ ಎಂದು ದೇವೇಗೌಡರು ಹೇಳಿದ್ದು, ಮೊಮ್ಮಗನಿಗೆ ಅವಕಾಶ ಮಾಡಿಕೊಟ್ಟು ನಿವೃತ್ತಿ ಬಯಸಿದ್ದಾರಾ ಅಥವಾ ಬೇರೊಂದು ಕ್ಷೇತ್ರದಿಂದ ಕಣಕ್ಕಿಳಿಯುತ್ತಾರಾ? ಎಂಬುದು ಚರ್ಚೆಗೆ ಗ್ರಾಸವಾಗಿದೆ. ಮಂಡ್ಯದಿಂದ ದೇವೇಗೌಡರ ಸ್ಪರ್ಧೆಗೆ ಜಿಲ್ಲೆಯ ಶಾಸಕರು ಮತ್ತು ಮುಖಂಡರ ನಡೆಸುತ್ತಿರುವ ಒತ್ತಾಯಕ್ಕೆ ಮತ್ತೆ ಮಹತ್ವ ಬಂದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ