ಆ್ಯಪ್ನಗರ

ಕ್ಯಾಬ್‌ಗಳ ಚೈಲ್ಡ್‌ ಲಾಕ್‌ ವ್ಯವಸ್ಥೆ ಕಿತ್ತು ಹಾಕಲು ಸರಕಾರ ನಿರ್ಧಾರ

ಬೆಂಗಳೂರು ಪ್ರಸೂತಿ ಮತ್ತು ಸ್ತ್ರೀರೋಗ ಸೊಸೈಟಿ(ಬಿಎಸ್‌ಒಜಿ) ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಿಜೆ ದಿನೇಶ್‌ ಮಹೇಶ್ವರಿ ಹಾಗೂ ನ್ಯಾ.ಎಸ್‌.ಜಿ.ಪಂಡಿತ್‌ ಅವರಿದ್ದ ನ್ಯಾಯಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಿತು

Vijaya Karnataka 11 Oct 2018, 8:04 am
ಬೆಂಗಳೂರು: ಮಹಿಳಾ ಪ್ರಯಾಣಿಕರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕ್ಯಾಬ್‌ಗಳಲ್ಲಿನ ಚೈಲ್ಡ್‌ ಲಾಕ್‌ ವ್ಯವಸ್ಥೆ ನಿಷ್ಕ್ರಿಯಗೊಳಿಸುವ ಕುರಿತಂತೆ ನಿಯಮ ತಿದ್ದುಪಡಿ ಮಾಡುವ ಕರಡು ಅಧಿಸೂಚನೆಯನ್ನು ಹೊರಡಿಸಲಾಗಿದೆ ಎಂದು ರಾಜ್ಯ ಸರಕಾರ ಬುಧವಾರ ಹೈಕೋರ್ಟ್‌ಗೆ ತಿಳಿಸಿದೆ.
Vijaya Karnataka Web child lock


ಬೆಂಗಳೂರು ಪ್ರಸೂತಿ ಮತ್ತು ಸ್ತ್ರೀರೋಗ ಸೊಸೈಟಿ(ಬಿಎಸ್‌ಒಜಿ) ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಿಜೆ ದಿನೇಶ್‌ ಮಹೇಶ್ವರಿ ಹಾಗೂ ನ್ಯಾ.ಎಸ್‌.ಜಿ.ಪಂಡಿತ್‌ ಅವರಿದ್ದ ನ್ಯಾಯಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಿತು.

ಸರಕಾರಿ ವಕೀಲರು, ''ಚೈಲ್ಡ್‌ ಸೇಫ್ಟಿ ಲಾಕ್‌ ನಿಷ್ಕ್ರಿಯಗೊಳಿಸುವ ಕುರಿತು ಕರ್ನಾಟಕ ಮೋಟಾರು ವಾಹನಗಳ ಕಾಯಿದೆ ನಿಯಮಕ್ಕೆ ತಿದ್ದುಪಡಿ ತಂದು ಅ.9ರಂದು ಅಧಿಸೂಚನೆ ಹೊರಡಿಸಲಾಗಿದೆ. ಅದಕ್ಕೆ ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದ್ದು, 30 ದಿನಗಳ ಕಾಲಾವಕಾಶ ನೀಡಲಾಗಿದೆ ''ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಆಗ ನ್ಯಾಯಪೀಠ, ಈಗಾಗಲೇ ಚೈಲ್ಡ್‌ ಲಾಕ್‌ ವ್ಯವಸ್ಥೆ ಹೊಂದಿರುವ ರಸ್ತೆ ಮೇಲೆ ಸಂಚರಿಸುತ್ತಿರುವ ವಾಹನಗಳ ನಿಯಂತ್ರಣಕ್ಕೆ ಏನು ನಿಗದಿತ ಕ್ರಿಯಾ ಯೋಜನೆ ಇದೆ ತಿಳಿಸಿ ಎಂದು ನ್ಯಾಯಪೀಠ ಪ್ರಶ್ನಿಸಿತು.

ಅಲ್ಲದೆ, ಈ ನಿಯಮವನ್ನು ಜಾರಿಗೊಳಿಸುವ ವಿಧಾನ ಏನು? ಅದಕ್ಕೆ ಯಾವ ಯೋಜನೆ ರೂಪಿಸಿದ್ದೀರಿ? ಎಂದು ಸರಕಾರಿ ವಕೀಲರನ್ನು ಕೇಳಿತು.

ಅರ್ಜಿದಾರರ ಪರ ವಾದ ಮಂಡಿಸಿದ ವಕೀಲೆ ಲಕ್ಷ್ಮೇ ಅಯ್ಯಂಗಾರ್‌ ''ಬೆಂಗಳೂರು ನಗರದಲ್ಲಿ ಕ್ಯಾಬ್‌ಗಳಲ್ಲಿ ಸಂಚರಿಸುವ ಮಹಿಳಾ ಪ್ರಯಾಣಿಕರ ಮೇಲೆ ಹಲ್ಲೆ ಹಾಗೂ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ಬಹುತೇಕ ಪ್ರಕರಣಗಳಲ್ಲಿ ಚಾಲಕರು ಚೈಲ್ಡ್‌ ಲಾಕ್‌ ವ್ಯವಸ್ಥೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿರುವುದು ಕಂಡು ಬಂದಿರುವ ಹಿನ್ನೆಲೆಯಲ್ಲಿ ಅದನ್ನು ತೆಗೆದುಹಾಕಲು ನಿಯಮದಲ್ಲಿ ಅವಕಾಶ ಕಲ್ಪಿಸುವಂತೆ ಸರಕಾರಕ್ಕೆ ಸೂಚನೆ ನೀಡಬೇಕು''ಎಂದು ನ್ಯಾಯಾಲಯವನ್ನು ಕೋರಿದರು.

ಅಧಿಸೂಚನೆಯಲ್ಲೇನಿದೆ?

ಅ.9ರಂದು ಹೊರಡಿಸಿರುವ ಅಧಿಸೂಚನೆಯಲ್ಲಿ, ಕರ್ನಾಟಕ ಮೋಟಾರು ವಾಹನಗಳ ಕಾಯಿದೆ1988ರ ಕಲಂ2(25)ರಲ್ಲಿ ವ್ಯಾಖ್ಯಾನಿಸಿರುವ ಸಾರಿಗೆ ವಾಹನ ವರ್ಗದ ಮೋಟಾರ್‌ ಕ್ಯಾಬ್ಸ್‌ (ಟ್ಯಾಕ್ಸಿ) ವಾಹನಗಳಲ್ಲಿ ಚೈಲ್ಡ್‌ ಲಾಕ್‌ ವ್ಯವಸ್ಥೆಯನ್ನು ನಿಷ್ಕ್ರಿಯಗೊಳಿಸಿತಕ್ಕದ್ದು, ತಪ್ಪಿದ್ದಲ್ಲಿ ಅಂತಹ ವಾಹನಗಳ ರಹದಾರಿ ನೀಡುವ / ನವೀಕರಿಸುವ ಮತ್ತು ಅರ್ಹತಾ ಪತ್ರ ನೀಡುವ/ನವೀಕರಣ ಮಂಜೂರು ಮಾಡುವಂತಿಲ್ಲ. ಈ ಬಗ್ಗೆ ಸಂಬಂಧಿಸಿದವರು ಆಕ್ಷೇಪಣೆಗಳನ್ನು ಸಲ್ಲಿಸಲು 30 ದಿನ ಕಾಲಾವಕಾಶ ನೀಡಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ