ಆ್ಯಪ್ನಗರ

ಕೊರೊನಾ ಹಿನ್ನಲೆ, ಗ್ರಾಮ ಪಂಚಾಯತ್‌ ಚುನಾವಣೆ ಮುಂದೂಡಿಕೆ

ಸದ್ಯದ ಪರಿಸ್ಥಿತಿಯನ್ನು 'ಅಸಾಧಾರಣ ಪರಿಸ್ಥಿತಿ' ಎಂದು ಪರಿಗಣಿಸಿ ಗ್ರಾಮ ಪಂಚಾಯತ್‌ ಚುನಾವಣೆಯನ್ನು ತಾತ್ಕಾಲಿಕವಾಗಿ ಮುಂದೂಡುತ್ತಿರುವುದಾಗಿ ರಾಜ್ಯ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿಗಳು ತಿಳಿಸಿದ್ದಾರೆ.

Vijaya Karnataka 28 May 2020, 7:41 pm

ಬೆಂಗಳೂರು: ಕೊರೊನಾ ವೈರಸ್‌ ಜಾಗತಿಕ ಪಿಡುಗಿನ ಹಿನ್ನೆಲೆಯಲ್ಲಿ ರಾಜ್ಯದ ಗ್ರಾಮ ಪಂಚಾಯತ್‌ಗಳಿಗೆ ನಿಗದಿತ ಅವಧಿಯಲ್ಲಿ ನಡೆಯಬೇಕಾಗಿದ್ದ ಚುನಾವಣೆಯನ್ನು ಚುನಾವಣಾ ಆಯೋಗ ಮುಂದೂಡಿದೆ. ಈ ಸಂಬಂಧ ಗುರುವಾರ ರಾಜ್ಯ ಚುನಾವಣಾ ಆಯೋಗ ಅಧಿಕೃತ ಪ್ರಕಟಣೆ ಹೊರಡಿಸಿದೆ.
Vijaya Karnataka Web Panchayat Election


ರಾಜ್ಯದಲ್ಲಿ 6,025 ಗ್ರಾಮ ಪಂಚಾಯತ್‌ಗಳ ಪೈಕಿ 5,800 ಪಂಚಾಯತ್‌ಗಳ ಅವಧಿ ಜೂನ್‌ನಿಂದ ಆಗಸ್ಟ್‌ ನಡುವೆ ಅಂತ್ಯವಾಗಲಿದೆ. ಈ ಪಂಚಾಯತ್‌ಗಳಿಗೆ ಚುನಾವಣೆ ನಡೆಸಲು ಚುನಾವಣಾ ಆಯೋಗ ಅಗತ್ಯ ಸಿದ್ಧತೆಗಳನ್ನೂ ಆರಂಭಿಸಿತ್ತು. ಆದರೆ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಸಿದ್ಧತೆಗಳನ್ನು ಸ್ಥಗಿತಗೊಳಿಸಲಾಗಿತ್ತು.

ಜೊತೆಗೆ ಇತ್ತೀಚೆಗೆ ರಾಜ್ಯ ಸರಕಾರ ಪಂಚಾಯತ್‌ ರಾಜ್‌ ಕಾನೂನಿಗೆ ತಿದ್ದುಪಡಿ ತಂದು ಮೀಸಲಾತಿಯ ಅವಧಿಯನ್ನು 5 ವರ್ಷಗಳಿಗೆ ಇಳಿಕೆ ಮಾಡಿತ್ತು. ಇದರಿಂದ ಮರು ಮೀಸಲಾತಿ ಹಂಚಿಕೆ ಮಾಡಬೇಕಾಗಿದೆ.

ಪಂಚಾಯತ್‌ ಚುನಾವಣೆ ಆರು ತಿಂಗಳು ಮುಂದೂಡಿಕೆ, ರಾಜಕಾರಣಿಗಳಿಗೆ ನಿರಾಸೆ

ಜೊತೆಗೆ ಈಗ ಚುನಾವಣೆ ನಡೆಸಲು ಸಿಬ್ಬಂದಿಗಳ ಕೊರತೆ, ಸಾರಿಗೆ ವ್ಯವಸ್ಥೆ ಕೊರತೆ ಮತ್ತು ಕಾನೂನು ಸುವ್ಯವಸ್ಥೆಯ ತೊಂದರೆಯುಂಟಾಗಬಹುದಾಗಿ ಜಿಲ್ಲಾಧಿಕಾರಿ ವರದಿ ನೀಡಿದ್ದಾರೆ. ಅಲ್ಲದೆ ಚುನಾವಣೆ ನಡೆಸುವುದರಿಂದ ಜನರ ಆರೋಗ್ಯ ರಕ್ಷಣೆಗೂ ತೊಂದರೆಯುಂಟಾಗಬಹುದು ಎಂದು ವರದಿಯಲ್ಲಿ ಹೇಳಲಾಗಿದೆ.

ಈ ಎಲ್ಲವನ್ನೂ ಗಮನದಲ್ಲಿಟ್ಟುಕೊಂಡು ಸದ್ಯದ ಪರಿಸ್ಥಿತಿಯನ್ನು 'ಅಸಾಧಾರಣ ಪರಿಸ್ಥಿತಿ' ಎಂದು ಪರಿಗಣಿಸಿ ಗ್ರಾಮ ಪಂಚಾಯತ್‌ ಚುನಾವಣೆಯನ್ನು ತಾತ್ಕಾಲಿಕವಾಗಿ ಮುಂದೂಡುತ್ತಿರುವುದಾಗಿ ರಾಜ್ಯ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿಗಳು ತಿಳಿಸಿದ್ದಾರೆ.

ಮುಂದಿನ ದಿನಗಳಲ್ಲಿ ಪರಿಸ್ಥಿತಿ ಅವಲೋಕಿಸಿ ಚುನಾವಣೆ ನಡೆಸುವ ಬಗ್ಗೆ ತೀರ್ಮಾನಿಸುವುದಾಗಿಯೂ ಪ್ರಕಟಣೆಯಲ್ಲಿ ಹೇಳಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ