ಆ್ಯಪ್ನಗರ

ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್‌ ಚಿಕಿತ್ಸೆಗಾಗಿ ದಾಖಲು, ಶೀರಾಮುಲು ನಡೆಗೆ ನೆಟ್ಟಿಗರಿಂದ ಮೆಚ್ಚುಗೆ

ಕೋವಿಡ್ ಸೋಂಕಿಗೆ ತುತ್ತಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಆರೋಗ್ಯ ಸಚಿವ ಶ್ರೀರಾಮುಲು ನಡೆಗೆ ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಕುರಿತಾದ ವರದಿ ಇಲ್ಲಿದೆ.

Vijaya Karnataka Web 10 Aug 2020, 11:03 am
ಬೆಂಗಳೂರು: ಕೋವಿಡ್ ಸೋಂಕಿಗೆ ತುತ್ತಾಗಿ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿರುವ ಆರೋಗ್ಯ ಸಚಿವ ಶ್ರೀರಾಮುಲು ಅವರ ನಡೆಗೆ ಸಾಮಾಜಿಕ ಜಾಲತಾಣಗಳಲ್ಲೂ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಸಾಕಷ್ಟು ಮಂದಿ ನೆಟ್ಟಿಗರು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿ ಇದೊಂದು ಮಾದರಿ ನಡೆ ಎಂದಿದ್ದಾರೆ.
Vijaya Karnataka Web sriramulu


ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ ಭಾನುವಾರ ಕೋವಿಡ್‌ ಇರುವುದು ಪತ್ತೆಯಾಗಿತ್ತು. ಕೂಡಲೇ ಅವರು ನಗರದ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ. ಶ್ರೀರಾಮುಲು ಅವರಲ್ಲಿ ಜ್ವರ ಹಾಗೂ ಕೆಮ್ಮು ಕಾಣಿಸಿಕೊಂಡಿದೆ. ವೈದ್ಯರ ಸಲಹೆಯಂತೆ ಆಸ್ಪತ್ರೆಯಲ್ಲಿ ಡಯೆಟ್ ಆಹಾರವನ್ನು ಅವರು ಸ್ವೀಕರಿಸುತ್ತಿದ್ದಾರೆ.

ಸೋಮವಾರದಂದು ಸಿದ್ದರಾಮಯ್ಯಗೆ ಕೋವಿಡ್‌ ತಪಾಸಣೆ, ನೆಗೆಟಿವ್‌ ಬಂದರೆ ಡಿಸ್ಚಾರ್ಜ್ ಸಾಧ್ಯತೆ

ಕೆಲ ದಿನಗಳ ಹಿಂದೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಕೋವಿಡ್ ಕಾಣಿಸಿಕೊಂಡಿತ್ತು. ಇವರಿಬ್ಬರೂ ನಗರದ ಪ್ರತಿಷ್ಠಿತ ಮಣಿಪಾಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಈ ಇಬ್ಬರು ಜನನಾಯಕರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವುದಕ್ಕೆ ಟೀಕೆಗಳು ವ್ಯಕ್ತವಾಗಿದ್ದವು.

ಸಾಮಾನ್ಯ ಜನರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿರುವ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನಿರಾಕರಿಸುತ್ತಿರುವ ಈ ಸಂದರ್ಭದಲ್ಲಿ ಜನಪ್ರತಿನಿಧಿಗಳಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಸಿಎಂ ಹಾಗೂ ವಿರೋಧ ಪಕ್ಷದ ನಾಯಕರು ಚಿಕಿತ್ಸೆ ಪಡೆಯಬೇಕಾಗಿತ್ತು ಎಂಬ ಅಭಿಪ್ರಾಯವನ್ನು ಹಲವರು ವ್ಯಕ್ತಪಡಿಸಿದ್ದರು.

ಶ್ರೀರಾಮುಲುಗೂ ಕೊರೊನಾ ಪಾಸಿಟಿವ್‌ ದೃಢ..! ಸರಕಾರಿ ಆಸ್ಪತ್ರೆಗೆ ದಾಖಲಾದ ಆರೋಗ್ಯ ಸಚಿವ

ಈ ಮೂಲಕ ಜನಸಾಮಾನ್ಯರಿಗೆ ಒಂದು ಉತ್ತರ ಸಂದೇಶ ರವಾನೆ ಮಾಡಿದ ಹಾಗಾಗುತ್ತಿತ್ತು ಎಂಬ ಅಭಿಪ್ರಾಯವೂ ವ್ಯಕ್ತವಾಗಿತ್ತು. ಇದೀಗ ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ ಸೋಂಕು ಕಾಣಿಸಿಕೊಂಡರೂ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಲಿಲ್ಲ. ಬದಲಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಸಾಮಾನ್ಯ ಚಿಕಿತ್ಸೆ ಪಡೆದುಕೊಳ್ಳುವ ಮೂಲಕ ಮಾದರಿ ನಡೆಯನ್ನು ಅನುಸರಿಸಿದ್ದಾರೆ ಎಂದು ನೆಟ್ಟಿಗರು ಶ್ಲಾಘಿಸಿದ್ದಾರೆ.

ಕೇವಲ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೆ ಸಾಲದು ಸಾರ್ವಜನಿಕ ಆರೋಗ್ಯ ಕ್ಷೇತ್ರವನ್ನು ಬಲ ಪಡಿಸುವ ನಿಟ್ಟಿನಲ್ಲಿ ಯೋಚಿಸಬೇಕಾಗಿದೆ. ಈ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಹೆಜ್ಜೆ ಇಡಬೇಕಾಗಿದೆ ಎಂಬ ಒತ್ತಾಯವನ್ನು ನೆಟ್ಟಿಗರು ಮಾಡುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ