ಆ್ಯಪ್ನಗರ

ಗ್ರಾಮ ಪಂಚಾಯತ್‌ ಆಡಳಿತಾಧಿಕಾರಿ ನಿರ್ಧಾರಕ್ಕೆ ಹೈಕೋರ್ಟ್‌ ಅಸ್ತು

ಸರಕಾರದ ಕ್ರಮ ರದ್ದು ಕೋರಿ ಚಳ್ಳಕೆರೆ ತಾಲೂಕಿನ ಸೋಮಗುದ್ದಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿ.ಎಲ್‌. ಸತೀಶ್‌ ಬಾಬು ಸೇರಿ 16 ಮಂದಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್‌ ಅವರಿದ್ದ ಏಕ ಸದಸ್ಯಪೀಠ ವಜಾಗೊಳಿಸಿದೆ.

Vijaya Karnataka 3 Jul 2020, 8:32 pm
ಬೆಂಗಳೂರು: ಐದು ವರ್ಷಗಳ ಚುನಾಯಿತ ಅವಧಿ ಪೂರ್ಣಗೊಂಡಿರುವ ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಿಸಲು ಕ್ರಮ ಕೈಗೊಳ್ಳುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚಿಸಿರುವ ಸರಕಾರದ ಕ್ರಮವನ್ನು ಹೈಕೋರ್ಟ್‌ ಎತ್ತಿಹಿಡಿದಿದೆ.
Vijaya Karnataka Web Karnataka High Court


ಸರಕಾರದ ಕ್ರಮ ರದ್ದು ಕೋರಿ ಚಳ್ಳಕೆರೆ ತಾಲೂಕಿನ ಸೋಮಗುದ್ದಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿ.ಎಲ್‌. ಸತೀಶ್‌ ಬಾಬು ಸೇರಿ 16 ಮಂದಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್‌ ಅವರಿದ್ದ ಏಕ ಸದಸ್ಯಪೀಠ ವಜಾಗೊಳಿಸಿದೆ.

ಪಂಚಾಯತ್‌ರಾಜ್‌ ಕಾಯಿದೆಯ ಸೆಕ್ಷನ್‌ 9ರ ಅನುಸಾರ ಪಂಚಾಯಿತಿಗೆ ಚುನಾಯಿತರಾದವರ ಅವಧಿ 5 ವರ್ಷ ಮಾತ್ರ. ಐದು ವರ್ಷದ ನಂತರ ಚುನಾಯಿತ ಪ್ರತಿನಿಧಿ ಮುಂದುವರಿಯುವುದನ್ನು ಸಂವಿಧಾನದ ಪರಿಚ್ಛೇದ 243-ಇ ನಿರ್ಬಂಧಿಸುತ್ತದೆ. ಅದಕ್ಕೆ ತದ್ವಿರುದ್ಧವಾಗಿ ಅವಧಿ ಪೂರ್ಣಗೊಂಡ ನಂತರವೂ ಅವರನ್ನು ಮುಂದುವರಿಸುವಂತೆ ಕೋರ್ಟ್‌ ಆದೇಶಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್‌ ಹೇಳಿದೆ.

ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ರಾಜ್‌ ಕಾಯಿದೆಯ ಸೆಕ್ಷನ್‌ 8ರ ಅನುಸಾರ ಆಡಳಿತಾಧಿಕಾರಿ ನೇಮಿಸಲು ಮುಂದಾಗಿರುವ ಪಂಚಾಯಿತಿಗಳ ಅವಧಿ ಈಗಾಗಲೇ ಮುಗಿದಿದೆ. ಸೆಕ್ಷನ್‌ 8(4)ರ ಅನುಸಾರ ಒಂದು ಬಾರಿ ಗ್ರಾಮ ಪಂಚಾಯಿತಿಗೆ ಆಡಳಿತಾಧಿಕಾರಿ ನೇಮಕ ಮಾಡಲು ಅವಕಾಶವಿದೆ. ಕೋವಿಡ್‌-19 ಹಿನ್ನೆಲೆಯಲ್ಲಿ ಜನಸಾಮಾನ್ಯರ ಆಶೋತ್ತರಗಳಿಗೆ ಸ್ಪಂದಿಸಲು ಆಡಳಿತಾಧಿಕಾರಿಗಳಿಗೆ ಸಾಧ್ಯವಾಗುವುದಿಲ್ಲ. ಹಾಗಾಗಿ, ಮುಂದಿನ ಚುನಾಯಿತ ಪ್ರತಿನಿಧಿಗಳ ಆಯ್ಕೆಯಾಗುವ ತನಕ ತಮ್ಮನ್ನೇ ಮುಂದುವರಿಸಬೇಕು ಎಂಬ ಅರ್ಜಿದಾರರ ಮನವಿ ಪುರಸ್ಕರಿಸಲಾಗದು ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ ಅಧಿನಿಯಮ-1993ರ ನಿಯಮ 41 ಮತ್ತು 42ರಂತೆ ಅವಧಿ ಪೂರ್ಣಗೊಂಡಿರುವ ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಿಸಲು ಕ್ರಮ ಕೈಗೊಳ್ಳುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆಯೇ ಹೊರತು ಅದು ಸೂಚನೆ ನೀಡಿಲ್ಲ. ಆದ್ದರಿಂದ, ಸರಕಾರದ ಕ್ರಮದಲ್ಲಿ ಯಾವುದೇ ಕಾನೂನು ಉಲ್ಲಂಘನೆಯಾಗಿಲ್ಲ ಎಂದು ತಿಳಿಸಿದೆ.

ರಾಜ್ಯದ ಬಹುತೇಕ ಗ್ರಾಮ ಪಂಚಾಯಿತಿಗಳ 5 ವರ್ಷದ ಅವಧಿ 2020ರ ಜೂನ್‌ಗೆ ಕೊನೆಗೊಂಡಿದೆ. ಹಾಗಾಗಿ ಅವಧಿ ಪೂರ್ಣಗೊಂಡ ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಿಸಲು ಕ್ರಮ ಕೈಗೊಳ್ಳಬೇಕು ಎಂದು 2020ರ ಜೂನ್‌ 17ರಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ಪ್ರಧಾನ ಕಾರ್ಯದರ್ಶಿ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದು, ಅದನ್ನು ರದ್ದುಗೊಳಿಸಬೇಕು ಎಂದು ಅರ್ಜಿದಾರರು ಹೈಕೋರ್ಟ್‌ನ ಮೊರೆ ಹೋಗಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ