ಡಿಕೆಶಿ, ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಆಗ್ರಹಿಸಿ ನಾಳೆ ಬಿಜೆಪಿ ವಿಧಾನಸೌಧ ಮುತ್ತಿಗೆ
ಆದಾಯ ತೆರಿಗೆ ಇಲಾಖೆಯ ದಾಳಿಗೆ ಒಳಗಾಗಿರುವ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಸಣ್ಣ ಕೈಗಾರಿಕಾ ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯು ಆ.18 ರಂದು ವಿಧಾನಸೌಧಕ್ಕೆ ಮುತ್ತಿಗೆ ಕಾರ್ಯಕ್ರಮ ಹಮ್ಮಿಕೊಂಡಿದೆ.
*ಒಂದು ವಾರ ಕಾಲ ಪ್ರತಿಭಟನೆ *ಅಮಿತ್ ಶಾ ಸೂಚನೆಗೆ ಎಚ್ಚೆತ್ತು ರಾಜ್ಯ ಬಿಜೆಪಿ *ಇಂದು ಯುವ ಮೋರ್ಚಾದಿಂದ ಧರಣಿ
ಬೆಂಗಳೂರು: ಆದಾಯ ತೆರಿಗೆ ಇಲಾಖೆಯ ದಾಳಿಗೆ ಒಳಗಾಗಿರುವ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಸಣ್ಣ ಕೈಗಾರಿಕಾ ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯು ಆ.18 ರಂದು ವಿಧಾನಸೌಧಕ್ಕೆ ಮುತ್ತಿಗೆ ಕಾರ್ಯಕ್ರಮ ಹಮ್ಮಿಕೊಂಡಿದೆ.
ಬೆಂಗಳೂರಿನ ಫ್ರೀಡಂಪಾರ್ಕ್ನಿಂದ ಅಂದು ಬೆಳಿಗ್ಗೆ 10.30ಕ್ಕೆ ಮೆರವಣಿಗೆಯಲ್ಲಿ ಸಾಗಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದೆ. ಆ ನಂತರ ಒಂದು ವಾರ ಕಾಲ ಎಲ್ಲಾ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಪ್ರತಿಭಟನೆ, ಪಂಜಿನ ಮೆರವಣಿಗೆ, ಧರಣಿ ಸೇರಿದಂತೆ ವಿವಿಧ ರೀತಿಯ ಹೋರಾಟಗಳನ್ನು ಬಿಜೆಪಿ ಹಮ್ಮಿಕೊಂಡಿದೆ.
ಪಕ್ಷದ ವಿವಿಧ ಮುಖಂಡರ ಜತೆ ಸಮಾಲೋಚನೆ ನಡೆಸಿದ ಬಳಿಕ ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು,'' ಕಾನೂನು ಬಾಹಿರವಾಗಿ ಆಸ್ತಿ ಸಂಪಾದನೆ ಮಾಡಿರುವ ಹಿನ್ನೆಲೆಯಲ್ಲಿ ಐಟಿ ದಾಳಿ ನಡೆದಿದೆ. ಸಚಿವರು ಭ್ರಷ್ಟಾಚಾರ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ, ಅವರು ತಕ್ಷಣ ರಾಜೀನಾಮೆ ಕೊಡಬೇಕು,'' ಎಂದು ಆಗ್ರಹಿಸಿದರು.
''ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಕೇವಲ ಇಬ್ಬರು ಮಾತ್ರವಲ್ಲ. ಇನ್ನೂ ಅನೇಕ ಭ್ರಷ್ಟ ಸಚಿವರಿರುವ ಬಗ್ಗೆ ಮಾಹಿತಿ ಇದೆ. ಇಂಥ ಸಚಿವರು ರಾಜೀನಾಮೆ ಕೊಡುವ ತನಕ ಹೋರಾಟ ಮುಂದುವರಿಯಲಿದೆ,'' ಎಂದು ಯಡಿಯೂರಪ್ಪ ಹೇಳಿದರು.
ಇತ್ತೀಚೆಗೆ ರಾಜ್ಯಕ್ಕೆ ಭೇಟಿ ನೀಡಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ರಾಜ್ಯ ಘಟಕದ ನಾಯಕರ ನಡವಳಿಕೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಪರಿಣಾಮದಿಂದಾಗಿ ಎಚ್ಚೆತ್ತುಕೊಂಡಂತೆ ಕಾಣುತ್ತಿರುವ ರಾಜ್ಯ ನಾಯಕರು ಈಗ ಸರಕಾರದ ವಿರುದ್ಧ ಹೋರಾಟಕ್ಕಿಳಿದಿದ್ದಾರೆ. ಪ್ರತಿಭಟನೆ ಅಂಗವಾಗಿ ಯಡಿಯೂರಪ್ಪ ಅವರು ಮಾಜಿ ಡಿಸಿಎಂ ಆರ್.ಅಶೋಕ್ ಸೇರಿದಂತೆ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ಬಿಜೆಪಿ ಶಾಸಕರು, ಬಿಬಿಎಂಪಿ ಸದಸ್ಯರು ಮತ್ತಿತರ ಮುಖಂಡರ ಸಭೆ ನಡೆಸಿದರು.
ರೈ ರಾಜೀನಾಮೆಗೆ ಇಂದು ಧರಣಿ
ಆರ್ಎಸ್ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಪಿಎಫ್ಐ ಹಾಗೂ ಕೆಎಫ್ಡಿ ಸಂಘಟನೆಗಳ ನಿಷೇಧ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ಗುರುವಾರ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದೆ ಎಂದು ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ತಮ್ಮೇಶಗೌಡ ತಿಳಿಸಿದ್ದಾರೆ.