ಆ್ಯಪ್ನಗರ

ಅಧಿವೇಶನದಲ್ಲಿ ಸರಕಾರಕ್ಕೆ ಬಿಸಿ ಮುಟ್ಟಿಸಲು ಪ್ರತಿಪಕ್ಷಗಳ ಮಾಸ್ಟರ್ ಪ್ಲಾನ್

ಅಧಿವೇಶನದ ದಿನವೇ ರಾಜ್ಯ ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿರೋಧಪಕ್ಷಗಳು ಮುಂದಾಗಿವೆ. ಈ ನಡುವೆ ಪ್ರವಾಹ ಪರಿಹಾರ, ರೈತರ ಸಾಲ ಮನ್ನಾ ಒತ್ತಾಯಿಸಿ ರೈತ ಸಂಘಟನೆಗಳು ಪ್ರತಿಭಟನೆ ಕರೆ ನೀಡಿವೆ.

Vijaya Karnataka Web 9 Oct 2019, 7:06 pm
ಬೆಂಗಳೂರು: ಗುರುವಾರ ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು ಮೂರು ದಿನಗಳ ಕಾಲ ನಡೆಯಲಿರುವ ಅಧಿವೇಶನದಲ್ಲಿ ಸರಕಾರವನ್ನು ಇಟ್ಟಕ್ಕಿಗೆ ಸಿಲುಕಿಸಲು ವಿಪಕ್ಷಗಳು ತಂತ್ರಗಾರಿಕೆ ನಡೆಸುತ್ತಿವೆ. ಪ್ರವಾಹ ಪರಿಹಾರ, ಶಾಸಕರ ಕ್ಷೇತ್ರಕ್ಕೆ ಅನುದಾನ ಕಡಿತ ವಿಚಾರವನ್ನು ಮುಂದಿಟ್ಟುಕೊಂಡು ಸರಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಕಾಂಗ್ರೆಸ್ ಹಾಗೂ ಜೆಡಿಎಸ್ ಸಜ್ಜಾಗಿವೆ.
Vijaya Karnataka Web karnataka policits


ಅಧಿವೇಶದ ಹಿನ್ನೆಲೆಯಲ್ಲಿ ಬುಧವಾರ ಕಾಂಗ್ರೆಸ್ ಶಾಸಕಾಂಗ ಸಭೆ ನಡೆಸಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸರಕಾರದ ವಿರುದ್ಧ ಹೋರಾಟ ನಡೆಸುವ ಕುರಿತು ಚರ್ಚೆ ನಡೆಸಲಾಯಿತು. ರಾಜ್ಯದ ಪ್ರವಾಹ ಸಂತ್ರಸ್ತರಿಗೆ ಕೇಂದ್ರ ಸರಕಾರ ನೀಡಿದ ಪರಿಹಾರ ಕಡಿಮೆಯಾಗಿದೆ ಹಾಗೂ ರಾಜ್ಯ ಸರಕಾರ ಪ್ರವಾಹ ನಿರ್ವಹಣೆ ಮಾಡುವಲ್ಲಿ ವಿಫಲವಾಗಿದೆ ಎಂದು ಬಿಜೆಪಿ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದ ಕಾಂಗ್ರೆಸ್, ಇದೇ ವಿಚಾರವನ್ನು ಮುಂದಿಟ್ಟುಕೊಂಡು ಸದನದಲ್ಲೂ ಸದ್ದು ಮಾಡಲು ಮುಂದಾಗಿದೆ.

ಇನ್ನು ಜೆಡಿಎಸ್ ಕೂಡಾ ಅಧಿವೇಶನದ ಮೊದಲ ದಿನದಂದು ಸರಕಾರದ ವಿರುದ್ಧ ಪ್ರತಿಭಟನೆ ನಡೆಸಲಿದೆ. ಜೆಡಿಎಸ್ ಕಚೇರಿಯಿಂದ ಫ್ರೀಡಂ ಪಾರ್ಕ್‌ವರೆಗೂ ಪ್ರತಿಭಟನೆ ಹಮ್ಮಿಕೊಂಡಿದೆ. ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ನೇತೃತ್ವದಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಸುಮಾರು ಐದು ಸಾವಿರ ಕಾರ್ಯಕರ್ತರು ಭಾಗಿಯಾಗುವ ನಿರೀಕ್ಷೆಯನ್ನು ಪಕ್ಷದ ಮುಖಂಡರು ವ್ಯಕ್ತಪಡಿಸಿದ್ದಾರೆ.

ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದಾರೆ ರೈತರು

ಪ್ರವಾಹ ಪರಿಹಾರ, ರೈತರ ಸಾಲ ಮನ್ನಾ ಹಾಗೂ ಡಾ. ಸ್ವಾಮಿನಾಥನ್ ವರದಿ ಜಾರಿ ಒತ್ತಾಯಿಸಿ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ರಾಜ್ಯ ರೈತ ಸಂಘ ಗುರುವಾರದಂದು ಪ್ರತಿಭಟನೆ ಹಮ್ಮಿಕೊಂಡಿದೆ. ವಿಧಾನಸೌಧ ಮುತ್ತಿಗೆ ಹಾಕಲು ಕರೆಕೊಟ್ಟಿರುವ ರೈತ ಸಂಘದ ಮುಖಂಡರು ಪ್ರತಿಭಟನೆಯಲ್ಲಿ ಸುಮಾರು 10, 000 ರೈತರು ಭಾಗಿಯಾಗಲಿದ್ದಾರೆ ಎಂದಿದ್ದಾರೆ.

ಪ್ರತಿಪಕ್ಷಗಳ ತಂತ್ರಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪ್ರತಿತಂತ್ರ ಹೂಡಿದ್ದು ಅಂಕಿ ಅಂಶಗಳ ಜೊತೆಗೆ ಉತ್ತರ ನೀಡಲು ಸಜ್ಜಾಗಿದ್ದಾರೆ. ಬುಧವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳು ಹಾಗೂ ಸಚಿವರ ಸಭೆ ನಡೆಸಿದ ಸಿಎಂ ಅಧಿವೇಶನದ ಸಂದರ್ಭದಲ್ಲಿ ಪ್ರತಿಪಕ್ಷಗಳ ಸವಾಲಿಗೆ ಉತ್ತರಿಸಲು ತಂತ್ರಗಾರಿಕೆ ರೂಪಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ