ಆ್ಯಪ್ನಗರ

ಕರ್ನಾಟಕ ಬಿಕ್ಕಟ್ಟು: ನಮ್ಮ ಅಧಿಕಾರ ವ್ಯಾಪ್ತಿಯನ್ನು ಪ್ರಶ್ನಿಸುತ್ತೀರಾ? ಸ್ಪೀಕರ್ ವಿರುದ್ಧ ಸುಪ್ರೀಂ ಕೋರ್ಟ್ ಅಸಮಾಧಾನ

ಕರ್ನಾಟಕದ ಅತೃಪ್ತ ಶಾಸಕರ ರಾಜೀನಾಮೆ ವಿಚಾರವಾಗಿ ಸಲ್ಲಿಸಿದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಆರಂಭಿಸಿದೆ. ಅತೃಪ್ತ ಶಾಸಕರ ಪರವಾಗಿ ಖ್ಯಾತ ವಕೀಲ ಮುಕುಲ್ ರೋಹ್ಟಗಿ ವಾದ ಮಂಡಿಸುತ್ತಿದ್ದಾರೆ. ಸ್ಪೀಕರ್ ಪರವಾಗಿ ಅಭಿಷೇಕ್ ಮನುಸಿಂಘ್ವಿ ವಾದಿಸುತ್ತಿದ್ದಾರೆ.

Vijaya Karnataka Web 12 Jul 2019, 1:18 pm
ಹೊಸದಿಲ್ಲಿ: ನಮ್ಮ ಅಧಿಕಾರ ವ್ಯಾಪ್ತಿಯನ್ನು ನೀವು ಪ್ರಶ್ನಿಸುತ್ತೀರಾ? ಎಂದು ಕರ್ನಾಟಕ ವಿಧಾನಸಭೆ ಸ್ಪೀಕರ್‌ ರಮೇಶ್‌ ಕುಮಾರ್ ಅವರನ್ನು ಸುಪ್ರೀಂ ಕೋರ್ಟ್‌ ಖಾರವಾಗಿ ಪ್ರಶ್ನಿಸಿದೆ. ಅತೃಪ್ತ ಕಾಂಗ್ರೆಸ್-ಜೆಡಿಎಸ್ ಶಾಸಕರು ಸಲ್ಲಿಸಿದ ಅರ್ಜಿಯ ವಿಚಾರಣೆ ವೇಳೆ, ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ಪೀಠ ಈ ಪ್ರಶ್ನೆ ಮಾಡಿದೆ.
Vijaya Karnataka Web Supreme Court


ಅತೃಪ್ತ ಶಾಸಕರ ರಾಜೀನಾಮೆಗಳನ್ನು ಗುರುವಾರ ಸಂಜೆ 6 ಗಂಟೆಯೊಳಗೆ ಸ್ವೀಕರಿಸಬೇಕು ಮತ್ತು ಶುಕ್ರವಾರದ ವಿಚಾರಣೆಗೆ ಮುನ್ನ ತೀರ್ಮಾನದ ವರದಿಯನ್ನು ಕೋರ್ಟಿಗೆ ಸಲ್ಲಿಸಬೇಕು ಎಂದು ಸುಪ್ರೀಂ ಕೋರ್ಟ್ ಗುರುವಾರವೇ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಸೂಚಿಸಿತ್ತು.

ಅತೃಪ್ತ ಶಾಸಕರು ತಮ್ಮ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಲೇರಿದ್ದನ್ನು ತರಾಟೆಗೆ ತೆಗೆದುಕೊಂಡ ಸ್ಪೀಕರ್ ರಮೇಶ್ ಕುಮಾರ್ ಸುದ್ದಿಗೋಷ್ಠಿಯಲ್ಲಿ, ಒಂದು ಹಂತದಲ್ಲಿ ಸುಪ್ರೀಂ ಕೋರ್ಟ್‌ ಕೂಡ ತಮ್ಮ ನಿರ್ಧಾರಗಳ ಮೇಲೆ ಪ್ರಭಾವ ಬೀರುವಂತಿಲ್ಲ ಎಂದಿದ್ದರು.

ಈ ವಿಚಾರವನ್ನು ಅತೃಪ್ತ ಶಾಸಕರ ಪರ ವಕೀಲ ಮುಕುಲ್ ರೋಹ್ಟಗಿ ಕೋರ್ಟಿನ ಗಮನಕ್ಕೆ ತಂದಾಗ, ನ್ಯಾಯಪೀಠ ಸ್ಪೀಕರ್‌ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿತು.

ಅತೃಪ್ತರ ರಾಜೀನಾಮೆ ಅಂಗೀಕರಿಸುವಂತಿಲ್ಲ, ಅನರ್ಹತೆಯೂ ಇಲ್ಲ: ಮಂಗಳವಾರದ ವರೆಗೂ ಯಥಾಸ್ಥಿತಿ


ಕರ್ನಾಟಕದ 16 ಮಂದಿ ಕಾಂಗ್ರೆಸ್‌ ಮತ್ತು ಜೆಡಿಎಸ್ ಅತೃಪ್ತ ಶಾಸಕರು ಸಲ್ಲಿಸಿದ ಅರ್ಜಿಯ ವಿಚಾರಣೆ ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿದೆ. ಸ್ಪೀಕರ್‌ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ಕೋರ್ಟಿಗೆ ವರದಿ ಸಲ್ಲಿಸಿದ ಬಳಿಕ ವಿಚಾರಣೆ ಆರಂಭವಾಯಿತು. ಇದಕ್ಕೆ ಮುನ್ನ ಸ್ಪೀಕರ್ ಪರ ವಕೀಲರು ಆಗಮಿಸದ ಹಿನ್ನೆಲೆಯಲ್ಲಿ ಪ್ರಕರಣವನ್ನು ಕೆಲಕಾಲ ಮುಂದೂಡಲಾಗಿದೆ ಎಂದು ಸುದ್ದಿವಾಹಿನಿಗಳು ವರದಿ ಮಾಡಿದ್ದವು.

ತಮ್ಮ ರಾಜೀನಾಮೆಗಳನ್ನು ಅಂಗೀಕರಿಸದೆ ನಾನಾ ಕಾರಣಗಳನ್ನು ಮುಂದೊಡ್ಡಿ ಸ್ಪೀಕರ್ ರಮೇಶ್‌ ಕುಮಾರ್‌ ಸತಾಯಿಸುತ್ತಿದ್ದಾರೆ ಎಂದು ದೂರಿ ಅತೃಪ್ತ ಶಾಸಕರು ಸುಪ್ರೀಂ ಕೋರ್ಟಿನಲ್ಲಿ ಅರ್ಜಿ ಸಲ್ಲಿಸಿದ್ದರು.

ಸಂವಿಧಾನದ ಮೇಲೆ ಅತ್ಯಾಚಾರ ಎಸಗಲ್ಲ: ಸ್ಪೀಕರ್ ರಮೇಶ್ ಕುಮಾರ್

ನಿನ್ನೆ ಈ ಪ್ರಕರಣವನ್ನು ವಿಚಾರಣೆಗೆ ಎತ್ತಿಕೊಂಡ ನ್ಯಾಯಾಲಯ, ಸಂಜೆ 6 ಗಂಟೆಯೊಳಗೆ ಸ್ಪೀಕರ್ ಅವರನ್ನು ಖುದ್ದು ಭೇಟಿ ಮಾಡಿ ರಾಜೀನಾಮೆ ಸಲ್ಲಿಸುವಂತೆ ಸೂಚಿಸಿತ್ತು. ಅಲ್ಲದೆ ಸ್ಪೀಕರ್ ಅವರಿಗೂ ನಿನ್ನೆಯೇ ಈ ಬಗ್ಗೆ ತೀರ್ಮಾನ ಕೈಗೊಂಡು ಇಂದಿನ ವಿಚಾರಣೆ ಆರಂಭಕ್ಕೆ ಮುನ್ನ ತನಗೆ ವರದಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು.

ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ನ್ಯಾಯಪೀಠ, ಅತೃಪ್ತ ಶಾಸಕರ ಅರ್ಜಿಗಳ ವಿಚಾರಣೆ ನಡೆಸುತ್ತಿದೆ.

ಶಾಸಕರು ರಾಜೀನಾಮೆ ನೀಡಿದ್ದರೂ ಅಂಗೀಕರಿಸದೆ, ಸರಕಾರದ ಜತೆ ಶಾಮೀಲಾಗಿ ಶಾಸಕರನ್ನು ಅನರ್ಹಗೊಳಿಸಲು ಸ್ಪೀಕರ್ ಹವಣಿಸುತ್ತಿದ್ದಾರೆ. ಅಲ್ಲದೆ, ಸುಪ್ರೀಂ ಕೋರ್ಟ್ ಆದೇಶಕ್ಕೂ ಸೆಡ್ಡು ಹೊಡೆಯುತ್ತಿದ್ದಾರೆ ಎಂದು ಅತೃಪ್ತ ಶಾಸಕರ ಪರ ವಕೀಲ ಮುಕುಲ್ ರೋಹ್ಟಗಿ ಕೋರ್ಟಿನಲ್ಲಿ ವಾದ ಮಂಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ